Bangalore: ೫೦೦ ಫಲಾನುಭವಿಗಳ ನೇರ ಆಯ್ಕೆ
ಬೆಂಗಳೂರು: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಲ್ಲಿ ಆಯ್ಕೆಯಾದ ಎಲ್ಲ ೫೦೦ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಗುರುವಾರ ವಿಕಾಸಸೌಧದ ಕಚೇರಿಯಲ್ಲಿ ಆರ್ಯ ವೈಶ್ಯ ನಿಗಮದ ವ್ಯವಸ್ಥಾಪಕ ನಿರ್ದೇಶಕ ದೀಪಾಶ್ರೀ ಕೆ. ಅವರೊಂದಿಗೆ ಆರ್ಯ ವೈಶ್ಯ ನಿಗಮದ ಡಿಬಿಟಿ ಪ್ರಕ್ರಿಯನ್ನು ಪೂರ್ಣಗೊಳಿಸಿದ ಅವರು, ಈ ಮೂಲಕ ಸ್ವಯಂ-ಉದ್ಯೋಗ ನೇರ ಸಾಲ ಯೋಜನೆಯಡಿಯಲ್ಲಿ ೫೦೦ ಫಲಾನುಭವಿಗಳಿಗೆ ೫ಕೋಟಿ ರೂ.ಸಾಲ-ಸಹಾಯಧನವನ್ನು ನೇರ ನಗದು ವರ್ಗಾವಣೆ ಮೂಲಕ ಇದೇ ವೇಳೆ ವರ್ಗಾವಣೆ ಮಾಡಿದರು.
ನಂತರ ಮಾತನಾಡಿದ ಅವರು, ‘ಹೊಸ ಉದ್ಯಮಿಗಳಿಗೆ ಹಾಗೂ ಬಡವರಿಗೆ ಸಹಾಯ ಹಸ್ತ ನೀಡುವ ನಿಟ್ಟಿನಲ್ಲಿ ಆರ್ಯ ವೈಶ್ಯ ನಿಗಮವು ಗಮನಾರ್ಹವಾದ ಕೆಲಸ ನಿರ್ವಹಿಸುತ್ತಿದೆ. ೧ ಲಕ್ಷ ರೂ.ವರೆಗೆ ವಾರ್ಷಿಕ ೪ರ ಕಡಿಮೆ ಬಡ್ಡಿ ದರದಲ್ಲಿ ಹಣ ನೀಡಲಾಗುತ್ತಿದ್ದು, ಎಲ್ಲರೂ ಈ ಸೌಲಭ್ಯವನ್ನು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಆರ್ಯ ವೈಶ್ಯ ನಿಗಮವು ೨೦೨೩-೨೪ನೆ ಸಾಲಿನಲ್ಲಿ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮಕ್ಕೆ ಬಿಡುಗಡೆಯಾದ ೧೦ಕೋಟಿ ರೂ.ಅನುದಾನದಲ್ಲಿ ಸ್ವಯಂ-ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ಆರ್ಯ ವೈಶ್ಯ ಆಹಾರ ವಾಹಿನಿ ಯೋಜನೆ ಹಾಗೂ ವಾಸವಿ ಜಲಶಕ್ತಿ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಿರುವ ಜಿಲ್ಲಾ ಸಮಿತಿ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ ನವ ಉದ್ಯಮಿಗಳಿಗೆ ಸಹಾಯ ಹಸ್ತ ಚಾಚುವ ಗಮನಾರ್ಹ ಕೆಲಸಕ್ಕೆ ನಿಗಮವು ಮುಂದಾಗಿದೆ ಎಂದು ಸಂಸತ ವ್ಯಕ್ತಪಡಿಸಿದರು.
ಈ ಯೋಜನೆಯಲ್ಲಿ ಫಲಾನುಭವಿಗಳಿಗೆ ತಲಾ ೨೦ಸಾವಿರ ರೂ.ಸಹಾಯಧನ ಹಾಗೂ ೮೦ಸಾವಿರ ರೂ. ಸಾಲ ಬಿಡುಗಡೆ ಮಾಡಿದ್ದು, ಫಲಾನುಭವಿಯು ಸಾಲವನ್ನು ಶೇ.೪ರಷ್ಟು ಬಡ್ಡಿದರದಲ್ಲಿ ಮರುಪಾವತಿಯನ್ನು ಆಪ್ ಮೂಲಕ ಮರುಪಾವತಿಸಲು ಅವಕಾಶವಿರುತ್ತದೆ. ಆರ್ಯವೈಶ್ಯ ಈ ಸೌಲಭ್ಯವನ್ನು ನೀಡುತ್ತಿರುವ ಏಕೈಕ ನಿಗಮವಾಗಿದ್ದು, ಎಲ್ಲ ಫಲಾನುಭವಿಗಳು ತಮ್ಮ ಇ-ಮೇಲ್ನಲ್ಲಿ ಸ್ವಯಂ ಚಾಲಿತ ಸಾಲ ಮಂಜೂರಾತಿ ಆದೇಶ ಪತ್ರವನ್ನು ಪಡೆಯಬಹುದು ಎಂದರು.
ಇಲ್ಲಿಯವರೆಗೂ ನಿಗಮಕ್ಕೆ ೪.೫೭ ಕೋಟಿ ರೂ.ಮರುಪಾವತಿ ಮೊತ್ತ ಸ್ವೀಕೃತಿಯಾಗಿದೆ. ಸಾಲ ಪಡೆದಂತಹ ಎಲ್ಲ ಫಲಾನುಭವಿಗಳು ಸಾಲವನ್ನು ಸದುಪಯೋಗ ಪಡಿಸಿಕೊಂಡು ಸಕಾಲದಲ್ಲಿ ಮರುಪಾವತಿ ಮಾಡಬೇಕು. ಆರ್ಯವೈಶ್ಯ ನಿಗಮವು ರಾಜ್ಯದಲ್ಲೇ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ ಡಿಬಿಟಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ ಮೊದಲ ನಿಗಮವಾಗಿದೆ ಎಂದು ಅವರು ತಿಳಿಸಿದರು.