Chikkamagaluru: ಕಟ್ಟಿಗೆ ತರಲು ಕಾಡಿಗೆ ಹೋಗಿದ್ದ ಯುವಕ ನದಿಗೆ ಬಿದ್ದು ಸಾವು
ಚಿಕ್ಕಮಗಳೂರು: ಕಟ್ಟಿಗೆ ತರಲು ಕಾಡಿಗೆ ಹೋಗಿದ್ದ ವೇಳೆ ಭದ್ರಾ ನದಿಗೆ ಕಾಲು ಜಾರಿ ಬಿದ್ದ ಡಿಪ್ಲೊಮಾ ಓದುತ್ತಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಕುದುರೆಮುಖ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಲಿಬೀಡು ಗ್ರಾಮದಲ್ಲಿ ನಡೆದಿದೆ.
ಮೃತ ಯುವಕನನ್ನು ನೆಲ್ಲಿಬೀಡು ಗ್ರಾಮದ ರವಿ ಎಂಬವರ ಪುತ್ರ ಪೃಥ್ವಿರಾಜ್(೧೭) ಎಂದು ಗುರುತಿಸಲಾಗಿದೆ.
ಈತ ಶುಕ್ರವಾರ ಮಧ್ಯಾಹ್ನದ ವೇಳೆಯಲ್ಲಿ ತನ್ನ ಮನೆಯ ಸಮೀಪದಲ್ಲೇ ಹರಿಯುವ ಭದ್ರಾ ನದಿ ದಡದಲ್ಲಿರುವ ಕಾಡಿನಿಂದ ಕಟ್ಟಿಗೆ ತರಲು ಕಾಡಿಗೆ ಹೋಗಿದ್ದ. ನದಿ ದಡದಲ್ಲಿ ನಡೆದು ಹೋಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಭದ್ರಾ ನದಿಗೆ ಬಿದ್ದಿದ್ದಾನೆ. ಈಜಲು ಬಾರದ ಪೃಥ್ವಿರಾಜ್ ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ಕಟ್ಟಿಗೆ ತರಲು ಹೋಗಿದ್ದ ಪೃಥ್ವಿರಾಜ್ ಮನೆಗೆ ಹಿಂದಿರುಗಿ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ಕುಟುಂಬಸ್ಥರು ಮನೆ ಸಮೀಪದ ಕಾಡು, ನದಿ ತೀರದಲ್ಲಿ ಹುಡುಕಾಡಿದಾಗ ಪೃಥ್ವಿರಾಜ್ ಭದ್ರಾ ನದಿಗೆ ಕಾಲು ಜಾರಿ ಬಿದ್ದಿರುವುದು ಪತ್ತೆಯಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ನಿವಾಸಿಗಳು ಹಾಗೂ ಕುದುರೆಮುಖ ಪೊಲೀಸರು ಯುವಕನಿಗಾಗಿ ನದಿಯಲ್ಲಿ ಶೋಧ ನಡೆಸಿದ ವೇಳೆ ಯುವಕನ ಮೃತ ದೇಹ ನದಿಯಲ್ಲಿ ಪತ್ತೆಯಾಗಿದೆ. ಕಳಸ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಶವದ ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿದು ಬಂದಿದೆ.
ಘಟನೆ ಸಂಬಂದ ಕುದುರೆಮುಖ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ