Mangalore: ಜ.24ರಿಂದ 5 ದಿನ ಮಂಗಳೂರಿನಲ್ಲಿ ಸ್ಟ್ರೀಟ್ ಫುಡ್ ಫಿಯೆಸ್ಟ-ಸೀಸನ್-2

Mangalore: ಜ.24ರಿಂದ 5 ದಿನ ಮಂಗಳೂರಿನಲ್ಲಿ ಸ್ಟ್ರೀಟ್ ಫುಡ್ ಫಿಯೆಸ್ಟ-ಸೀಸನ್-2


ಮಂಗಳೂರು: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರ ಮಾರ್ಗದರ್ಶನದಲ್ಲಿ ಮಂಗಳೂರಿನಲ್ಲಿ ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-2 ಜನವರಿ 24 ರಿಂದ 28ರ ವರೆಗೆ ಐದು ದಿನಗಳ ಕಾಲ ನಡೆಯಲಿದೆ. 

ಜ. 24ರ ಸಂಜೆ 7 ಗಂಟೆಗೆ ಸೀಸನ್-೨ಗೆ ಅಧಿಕೃತ ಚಾಲನೆ ದೊರೆಯಲಿದೆ. ಶಾಸಕ ಡಿ. ವೇದವ್ಯಾಸ ಕಾಮತ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕಳೆದ ವರ್ಷದ ಮಂಗಳೂರಿನ ಸ್ಟ್ರೀಟ್ ಫುಡ್ ಫಿಯೆಸ್ಟ ಲಕ್ಷಾಂತರ ಜನರನ್ನು ಆಕರ್ಷಿಸಿ ಭಾರೀ ಜನಮನ್ನಣೆ ಪಡೆದು ಅತ್ಯಂತ ಯಶಸ್ವಿಯಾಗಿತ್ತು. ಆ ಯಶಸ್ಸೇ ಸ್ಟ್ರೀಟ್ ಫುಡ್ ಫಿಯೆಸ್ಟ್ ಸೀಸನ್ -2ಗೆ ಪ್ರೇರಣೆಯಾಗಿದೆ. ಈಗಾಗಲೇ ಸಾರ್ವಜನಿಕ ವಲಯದಿಂದ ಅತ್ಯುತ್ತಮ ಸ್ಪಂದನೆ ಹಾಗೂ ನಿರೀಕ್ಷೆ ಲಭಿಸಿದೆ ಎಂದರು. 

ಕರಾವಳಿ ವಸ್ತು ಪ್ರದರ್ಶನ ಮೈದಾನದಿಂದ ನಾರಾಯಣ ಗುರು ವೃತ್ತ, ಮಣ್ಣಗುಡ್ಡ ಗುರ್ಜಿ ವೃತ್ತ, ಕೆನರಾ ಉರ್ವವರೆಗೆ ಪ್ರತಿ ನಿತ್ಯ ಸಂಜೆ 4ರಿಂದ ರಾತ್ರಿ 10.30 ರ ವರೆಗೆ (ಕೊನೆಯ ಮೂರು ದಿನ, ಶುಕ್ರವಾರ ಶನಿವಾರ ಮತ್ತು ಭಾನುವಾರ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 10.30 ತನಕ) ಸ್ಟ್ರೀಟ್ ಫುಡ್ ಫಿಯಸ್ಮಾ ನಡೆಯಲಿರುವ ಸ್ಥಳಗಳಲ್ಲಿ ಮಳಿಗೆ ನಿರ್ಮಾಣ ಸಹಿತ ಎಲ್ಲ ತಯಾರಿಗಳು ಬಹುತೇಕ ಪೂರ್ಣಗೊಂಡಿದೆ. ಸ್ಟ್ರೀಟ್ ಫುಡ್ ಫಿಯೆಸ್ಟ್ ಸೀಸನ್ -2ನಲ್ಲಿ ಭಾಗವಹಿಸಲು ಆನ್ ಲೈನ್ ನಲ್ಲಿ ನೋಂದಣಿಯಾಗಿದ್ದ 160 ಅಧಿಕ ವಿಶೇಷ ಆಹಾರ ಮಳಿಗೆಗಳನ್ನು ಅಂತಿಮಗೊಳಿಸಲಾಗಿದೆ ಎಂದರು.

ಸಾಂಪ್ರದಾಯಿಕ ಆಹಾರ ಉತ್ಸವ:

ಸ್ಟ್ರೀಟ್ ಫುಡ್ ಫಿಯಸ್ಮಾ ಸೀಸನ್-2ನಲ್ಲಿ ಗ್ರಾಹಕರಿಗೆ ತುಳುನಾಡಿನ ಸಾಂಪ್ರದಾಯಿಕ ಆಹಾರ ಶೈಲಿ ಮಾತ್ರವಲ್ಲದೇ, ಉತ್ತರ ಕರ್ನಾಟಕ, ಗುಜರಾತಿ, ಆಂಧ್ರ, ಪಂಜಾಬಿ ಸೇರಿದಂತೆ ದಕ್ಷಿಣ ಭಾರತೀಯ, ಉತ್ತರ ಭಾರತೀಯ, ಸಸ್ಯಾಹಾರಿ, ಮಾಂಸಾಹಾರಿ ಹೀಗೆ ಬಹು ಬೇಡಿಕೆಯ ವಿವಿಧ ಶೈಲಿಯ ಸಾಂಪ್ರದಾಯಿಕ ಆಹಾರ ಮಳಿಗೆಗಳು ಇರಲಿವೆ ಎಂದು ತಿಳಿಸಿದರು.

ಡಿಜಿಟಲ್ ವಹಿವಾಟಿಗೆ ಉತ್ತೇಜನ:

ಈ ಬಾರಿ ಫುಡ್ ಫಿಯೆಸ್ಟಾ ದಲ್ಲಿ ಡಿಜಿಟಲ್ ವಹಿವಾಟಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಗ್ರಾಹಕರು ಹಾಗೂ ಮಳಿಗೆದಾರರ ನಡುವೆ ನಗದು ಅಥವಾ ಕ್ಯಾಶ್ ರೂಪದ ವ್ಯವಹಾರಕ್ಕಿಂತ ಎಲ್ಲ ಮಳಿಗೆದಾರರಿಗೂ ನೀಡಲಾಗಿರುವ ಪ್ರತ್ಯೇಕ ಕ್ಯೂಆರ್ ಕೋಡ್ ಸ್ಕ್ಯಾನ್ ಬಳಸಲು ಹೆಚ್ಚಿನ ಉತ್ತೇಜನ ನೀಡಲಾಗುತ್ತಿದೆ. ಸಂಪೂರ್ಣ ಡಿಜಿಟಲ್ ವಹಿವಾಟು ಭವಿಷ್ಯದ ಭಾರತದ ಮುನ್ನೋಟವಾಗಿದ್ದು ಜನರನ್ನು ಆ ನಿಟ್ಟಿನಲ್ಲಿ ಪ್ರೇರೇಪಿಸುವ ಪ್ರಯತ್ನವೂ ಇದಾಗಿದೆ ಎಂದರು.

ಪಾರ್ಕಿಂಗ್ ವ್ಯವಸ್ಥೆ:

ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತಿರಲು ಈ ಬಾರಿ ಕ್ರಮಬದ್ಧವಾದ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ. ಕೊಟ್ಟಾರ ಚೌಕಿ ಕಡೆಯಿಂದ ಬರುವ ವಾಹನಗಳಿಗೆ ಉರ್ವ ಚರ್ಚ್ ಆವರಣ, ಉರ್ವ ಆಟದ ಮೈದಾನ ಹಾಗೂ ಲೇಡಿಹಿಲ್ ವಿಕ್ಟೋರಿಯಾ ಕಾಂಪೋಸಿಟ್ ಪಿಯು ಕಾಲೇಜು ಆವರಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಹಾಗೆಯೇ ಲಾಲ್ ಬಾಗ್ ಕಡೆಯಿಂದ ಬರುವ ವಾಹನಗಳಿಗೆ ಕೆನರಾ ಉರ್ವ ಶಾಲೆಯ ಆವರಣ ಮತ್ತು ಕರಾವಳಿ ಉತ್ಸವ ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಈ ನಿಗದಿತ ಸ್ಥಳಗಳಲ್ಲದೇ, ರಸ್ತೆಯ ಬದಿಯಲ್ಲಿ ಎಲ್ಲಿಯೂ ವಾಹನ ಪಾರ್ಕಿಂಗ್ ಮಾಡದೇ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕು ಎಂದರು.

ಕಿಡ್ ಜೋನ್ ಗೆ ವಿಶೇಷ ಪ್ರಾಧಾನ್ಯತೆ:

ಇನ್ನುಳಿದಂತೆ ಕಳೆದ ಬಾರಿ ಇದ್ದಂತಹ ಹತ್ತು ಹಲವು ಮನರಂಜನಾ ಕಾರ್ಯಕ್ರಮಗಳು ಈ ಬಾರಿಯೂ ಸಹ ಇರಲಿದೆ. ಮಕ್ಕಳ ಆಟದ ಜೋನ್ ಗೆ ವಿಶೇಷ ಪ್ರಾಧಾನ್ಯತೆ ನೀಡಲಾಗಿದ್ದು, ಉತ್ಸವದ ಸಮಯದಲ್ಲಿ ಹಲವು ವೇದಿಕೆಗಳಲ್ಲಿ ಏಕಕಾಲಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಪ್ರತಿಭಾನ್ವಿತರಿಗಾಗಿ ನಮ್ಮ ವೇದಿಕೆ-ನಿಮ್ಮ ಪ್ರತಿಭೆ, ಸೆಲ್ಪಿ ಕೌಂಟರ್, ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವವನ್ನು ವೇದಿಕೆಗಳಲ್ಲಿ ಆಚರಿಸಲು ಅವಕಾಶ ಇರಲಿದೆ. 

ಗೌರವಾಧ್ಯಕ್ಷ ಗಿರಿಧರ ಶೆಟ್ಟಿ, ನಿರ್ದೇಶಕರಾದ ದಿವಾಕರ ಪಾಂಡೇಶ್ವರ, ಯತೀಶ್ ಬೈಕಂಪಾಡಿ, ಉದಯ ಪೂಜಾರಿ, ರಾಘವೇಂದ್ರ  ಹೊಳ್ಳ ಉಪಸ್ಥಿತರಿದ್ದರು.




Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article