Mangalore: ಎಎಪಿಯಿಂದ ಸೀರೆ ಕುಚ್ಚು ತರಬೇತಿ ಕಾರ್ಯಕ್ರಮ
ಮಂಗಳೂರು: ರಾಮರಾಜ್ಯ ನಿರ್ಮಾಣ ಪರಿಕಲ್ಪನೆಯಲ್ಲಿ ಮಹಿಳೆಯ ಸ್ವಾವಲಂಬನೆ ಮುಖ್ಯವಾಗಿದ್ದು, ಆಮ್ ಆದ್ಮಿ ಪಕ್ಷದ ವತಿಯಿಂದ ಮಹಿಳೆಯರಿಗೆ ಉಚಿತ ಸೀರೆ ಕುಚ್ಚು ಹಾಕುವ ತರಬೇತಿ ಕಾರ್ಯಕ್ರಮ ನಡೆಯಿತು.
ದೇಶಾದ್ಯಂತ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನ ಸಂಭ್ರಮ ಇರುವ ಸಂದರ್ಭದಲ್ಲೇ, ಆಮ್ ಆದ್ಮಿ ಪಕ್ಷ ಮಹಿಳೆಯರ ಸ್ವಾವಲಂಬನೆಗೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅದರ ಭಾಗವಾಗಿ ನಗರದ ಆಮ್ ಆದ್ಮಿ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಒಂದು ದಿನದ ಸೀರೆ ಕುಚ್ಚು ಹಾಕುವ ಉಚಿತ ತರಬೇತಿ ಕಾರ್ಯಕ್ರಮ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಮಹಿಳಾ ಘಟಕದ ಅಧ್ಯಕ್ಷೆ ವಿದ್ಯಾ ರಾಕೇಶ್ ಅವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ನೂರಾರು ಮಹಿಳೆಯರು ಈ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಂಡರು.
ಉದ್ಯೋಗಕ್ಕೆ ಅಗತ್ಯ ಕೌಶಲ್ಯಗಳನ್ನು ಅಭಿವೃದ್ಧಿ ಪಡಿಸಿ ಹೇಗೆ ಹಣ ಸಂಪಾದನೆ ಮಾಡಿಕೊಳ್ಳಬಹುದೆಂದು ತರಬೇತಿಯಲ್ಲಿ ಮಾಹಿತಿ ನೀಡಲಾಯಿತು. ಇದು ಗೃಹಿಣಿಯರಿಗೆ, ವಿದ್ಯಾರ್ಥಿನಿಯರಿಗೆ ಸಂಪಾದನೆಗೆ ಸಂಪಾದನೆಯ ಮಾರ್ಗವಾಗಲಿದ್ದು, ಆರ್ಥಿಕ ಸ್ವಾವಂಬನೆ ಹೊಂದಬಹುದಾಗಿದೆ.
ಮಹಿಳೆಯರಿಗೆ ಎಲ್ಲಾ ರಂಗದಲ್ಲಿ ಪ್ರಾತಿನಿಧ್ಯ ಸಿಗಬೇಕು ಎನ್ನುವುದು ಆಮ್ ಆದ್ಮಿ ಪಕ್ಷದ ಧ್ಯೇಯವಾಗಿದ್ದು, ಅದಕ್ಕೆ ತಕ್ಕೆಂತೆ ಮಹಿಳಾ ಸಬಲೀಕರಣಕ್ಕೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತದೆ. ದೆಹಲಿ, ಪಂಜಾಬ್ನಲ್ಲಿ ಮಹಿಳೆಯರ ಸ್ವಾವಲಂಬನೆಗಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಆಮ್ ಆದ್ಮಿ ಪಕ್ಷ, ಈಗ ರಾಜ್ಯದಲ್ಲೂ ಈ ರೀತಿಯ ಕಾರ್ಯಕ್ರಮಗಳ ಆಯೋಜನೆ ಮೂಲಕ ಮಹಿಳಾ ಸಂಘಟನೆ, ಸ್ವಾವಲಂಬನೆಗೆ ಸಹಾಯ ಮಾಡುತ್ತಿದೆ.