Chikkamagaluru: ನರೇಗಾ ದಿನ ಆಚರಣೆ
ಚಿಕ್ಕಮಗಳೂರು: ನರೇಗಾ ದಿವಸ್ ಅಂಗವಾಗಿ ಚಿಕ್ಕಮಗಳೂರು ತಾಲ್ಲೂಕಿನ ಹಿರೇಗೌಜ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಯೋಜನೆಯಡಿ ಅಭಿವೃದ್ಧಿ ಪಡಿಸುತ್ತಿರುವ ಕೆರೆಯ ಬಳಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ ಗೋಪಾಲ್ ಕೃಷ್ಣ ಬಿ. ಅವರ ಸಮ್ಮುಖದಲ್ಲಿ ನರೇಗಾ ದಿವಸ್ ಅನ್ನು ಆಚರಿಸಲಾಯಿತು.
ಕೆರೆಯ ದಂಡೆಯ ಮೇಲೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಉಪ ಕಾರ್ಯದರ್ಶಿಗಳಿಂದ ಗಿಡವನ್ನು ನೆಡಲಾಯಿತು. ಕಾಮಗಾರಿ ಸ್ಥಳದಲ್ಲಿ ನೆರೆದಿದ್ದ ಕೂಲಿಕಾರರಿಗೆ ಆರೋಗ್ಯ ತಪಾಸಣೆಯನ್ನು ನಡೆಸಲಾಯಿತು ಹಾಗೂ ೧೦೦ ದಿನಗಳ ಕೆಲಸ ನಿರ್ವಹಿಸಿದ ಕೂಲಿಕಾರರಿಗೆ ಸನ್ಮಾನವನ್ನು ನಡೆಸಿ, ಕೂಲಿಕಾರರೊಂದಿಗೆ ಸಂವಾದವನ್ನು ನಡೆಸಲಾಯಿತು.
ಈ ಸಂಧರ್ಭದಲ್ಲಿ ಮಾತನಾಡಿದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ನರೇಗಾ ಯೋಜನೆಯು ೨೦೦೫ ರಲ್ಲಿ ಕಾಯ್ದೆಯಾಗಿ ಜಾರಿಯಾಗಿ, ೨೦೦೬ ರಿಂದ ಅನುಷ್ಠಾನ ಮಾಡಲಾಗುತ್ತಿದೆ. ಈ ಯೋಜನೆಯ ಮೂಲ ಉದ್ದೇಶ ಗ್ರಾಮೀಣ ಪ್ರದೇಶಗಳಲ್ಲಿ ಬಡತನ ನಿರ್ಮೂಲನೆ, ಗ್ರಾಮೀಣ ಪ್ರದೇಶದ ಜನರಿಗೆ ಉದ್ಯೋಗ ಹಾಗೂ ಬಾಳಿಕೆ ಬರುವ ಆಸ್ತಿಗಳನ್ನು ಸೃಜನೆ ಮಾಡುವ ಉದ್ದೇಶದಿಂದ ಜಾರಿಗೆ ತರಲಾಗಿದೆ. ಗ್ರಾಮೀಣಾಭಿವೃದ್ಧಿಯ ಮಹತ್ತರವಾದ ಯೋಜನೆಗಳಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯು ಒಂದಾಗಿದೆ. ಈ ವರ್ಷ ಬರದ ಪರಿಸ್ಥಿತಿ ಇರುವುದರಿಂದ ನಮ್ಮ ಜಿಲ್ಲೆಯು ಮಾನವ ದಿನಗಳ ಸೃಜನೆಯಲ್ಲಿ ಉತ್ತಮ ಪ್ರಗತಿಯನ್ನು ಸಾಧಿಸಿದೆ. ನಮ್ಮ ಜಿಲ್ಲೆಗೆ ನೀಡಿರುವ ಮಾನವ ದಿನಗಳ ಗುರಿಗೆ ಶೇ.೯೮ ರಷ್ಟು ಪ್ರಗತಿಯನ್ನು ಸಾಧಿಸಲಾಗಿದೆ. ಹೀರೆಗೌಜ ಗ್ರಾಮ ಪಂಚಾಯಿತಿಯು ನರೇಗಾ ಯೋಜನೆಯನ್ನು ಉತ್ತಮವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಜೊತೆಗೆ ನರೇಗಾ ಯೋಜನೆಯಡಿ ಅಭಿವೃದ್ಧಿಪಡಿಸುತ್ತಿರುವ ಕೆರೆಯ ಬಳಿ ನರೇಗಾ ದಿನವನ್ನು ಆಚರಿಸುತ್ತಿರುವುದು ಖುಷಿಯ ವಿಚಾರ ಎಂದು ತಿಳಿಸಿದರು.
ನರೇಗಾ ದಿನದ ಮುಖ್ಯ ಉದ್ದೇಶ ನರೇಗಾ ಯೋಜನೆಯಡಿ ಕಾರ್ಯನಿರ್ವಹಿಸುವವರನ್ನು ಗುರುತಿಸಿ ಸನ್ಮಾಸಿಸುವ ದಿನ. ಈ ದಿನ ಅವರಿಗೆ ಆರೋಗ್ಯ ತಪಾಸಣೆಯನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಉಪ ಕಾರ್ಯದರ್ಶಿ ಅಥಿಕ್ ಪಾಷ ಮಾತನಾಡಿ, ಮಹಾತ್ಮ ಗಾಂಧಿ ನರೇಗಾ ಯೋಜನೆಯ ಮುಖ್ಯ ಉದ್ದೇಶ ಗ್ರಾಮೀಣ ಪ್ರದೇಶದ ದುಡಿಯುವ ಕುಟುಂಬಗಳಿಗೆ ೧೦೦ ದಿನಗಳ ಅಕುಶಲ ಕೆಲಸ ನೀಡುವುದು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕೆರೆ, ಕಾಲುವೆ ಕಲ್ಯಾಣಿ ಕೃಷಿ ಹೊಂಡ ಸೇರಿದಂತೆ ಜಲ ಸಂಪನ್ಮೂಲಗಳ ಅಭಿವೃದ್ಧಿ ಹಾಗೂ ಚರಂಡಿ, ರಸ್ತೆ, ಅಂಗನವಾಡಿ ಕಟ್ಟಡ ಶಾಲಾ ಅಭಿವೃದ್ಧಿ ಕಾಮಗಾರಿಗಳು ಸೇರಿದಂತೆ ಗ್ರಾಮೀಣ ಪ್ರದೇಶಗಳ ಸರ್ವತೋಮುಖ ಅಭಿವೃದ್ಧಿಗಾಗಿ ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ಅನುಷ್ಟಾನಗೊಳಿಸಲಾಗುತ್ತಿದೆ ಎಂದು ತಿಳಿಸಿದರು.
ಸಹಾಯಕ ನಿರ್ದೇಶಕರು (ಗ್ರಾ ಉ), ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ನರೇಗಾ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

