Chikkamagaluru: ಪ್ರತಿಯೊಬ್ಬರು ತಮ್ಮ ಆರೋಗ್ಯವನ್ನು ಸ್ವಯಂ ರಕ್ಷಣೆಯಿಂದ ಉತ್ತಮ ಆರೋಗ್ಯ ಪಡೆಯಬಹುದಾಗಿದೆ: ಜಿಲ್ಲಾಧಿಕಾರಿ ಮೀನಾ ನಾಗರಾಜ್
ಚಿಕ್ಕಮಗಳೂರು: ಪ್ರತಿಯೊಬ್ಬರು ತಮ್ಮ ಆರೋಗ್ಯವನ್ನು ಸ್ವಯಂ ರಕ್ಷಣೆಯಿಂದ ಉತ್ತಮ ಆರೋಗ್ಯ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಆರೋಗ್ಯ ಇಲಾಖೆ ವತಿಯಿಂದ ನಡೆದ ಜಿಲ್ಲಾ ಸಮಗ್ರ ರೋಗಗಳ ಕಣ್ಗಾವಲು ಸಮಿತಿಯ ತುರ್ತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಇತ್ತೀಚಿಗೆ ಕೆ.ಎಫ್.ಡಿ. ಪ್ರಕರಣಗಳು ಹೆಚ್ಚಾಗಿರುತ್ತಿರುವುದರಿಂದ ಆ ಸ್ಥಳಗಳಲ್ಲಿ ತೀವ್ರ ನಿಗಾ ವಹಿಸಿ ಸೂಕ್ತ ಚಿಕಿತ್ಸೆ ಹಾಗೂ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ಮಂಗನ ಖಾಯಿಲೆ ನಿಯಂತ್ರಣಕ್ಕೆ ಎಲ್ಲ ರೀತಿಯ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದ ಅವರು ಕಾಡು-ತೋಟಗಳಲ್ಲಿ ಕೆಲಸ ಮಾಡುವರು ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವುದು ಬಹಳ ಅಗತ್ಯವಾದದ್ದು, ಒಣಗಿದ ಎಲೆಗಳಲ್ಲಿ ಸೋಂಕಿತ ಉಣ್ಣೆಗಳನ್ನು ಹೊಂದಿರಬಹುದಾದರಿಂದ ಕಾಡಿನಿಂದ ತಂದು ಮನೆಗಳ ಸಮೀಪ ಹಾಕಬಾರದು, ಮಂಗ ಸತ್ತ ಪ್ರದೇಶಗಳ ಭೇಟಿ ನೀಡಬಾರದು. ಪ್ರವಾಸಿಗರು ಚಾರಣ ಸಮಯದಲ್ಲಿ ಉಣ್ಣೆ ಕಡಿತವನ್ನು ನಿರ್ಲಕ್ಷ್ಯ ವಹಿಸುವಂತಿಲ್ಲ ಇಂತಹ ಸ್ಥಳಗಳನ್ನು ಗುರುತಿಸಿ ಸೈನ್ ಬೋರ್ಡುಗಳನ್ನು ಹಾಕಿ ಜನರಿಗೆ ತಿಳುವಳಿಕೆ ಮೂಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಮಂಗನ ಖಾಯಿಲೆ ಕಂಡು ಬಂದಿರುವ ಪ್ರದೇಶಗಳಲ್ಲಿ ಈ ಕಾಯಿಲೆ ನಿವಾರಣೆ ದೀಪಾ ಎಂಬ ತೈಲವನ್ನು ಆ ಭಾಗದ ಎಲ್ಲ ಕುಟುಂಬಗಳಿಗೆ ವಿತರಿಸಲಾಗಿ ಹಾಗೂ ಜಾಗೃತಿಯನ್ನು ಸಹ ಹಮ್ಮಿಕೊಳ್ಳಲಾಗಿದ್ದು, ಈ ಬಗ್ಗೆ ಆರೋಗ್ಯ-ಪಶು, ಅರಣ್ಯ ಇಲಾಖೆ ಮತ್ತು ಸ್ಥಳೀಯ ಪಂಚಾಯಿತಿ ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸಿ ಕಾಯಿಲೆ ಹತೋಟಿ ಕ್ರಮಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಅದೇ ರೀತಿ ತಂಬಾಕು ಉತ್ಪನ್ನಗಳ ಬಳಕೆಯನ್ನು ಸಂಪೂರ್ಣ ಹತೋಟಿಗೆ ತರುವ ದೃಷ್ಠಿಯಿಂದ ಎಲ್ಲ ತಾಲ್ಲೂಕುಗಳಲ್ಲಿ ಜಾಗೃತಿ ದಳದಿಂದ ತಪಾಸಣೆ ಮಾಡಿ ತಪ್ಪಿಸ್ಥರ ವಿರುದ್ದ ಕ್ರಮಕೈಗೊಳ್ಳಬೇಕು ಇದರ ದುಷ್ಪರಿಣಾಮದ ಬಗ್ಗೆ ವ್ಯಾಪಕ ಪ್ರಚಾರ ಮಾಡಬೇಕು ಎಂದು ಹೇಳಿದರು.
ಜಿ.ಪಂ. ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ. ಗೋಪಾಲಕೃಷ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಥ್ ಬಾಬು, ಜಿಲ್ಲಾ ಸರ್ವೇಕ್ಷಾಣಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.