Moodubidire: ಆಳ್ವಾಸ್‌ನಲ್ಲಿ ಪಟ್ಲ ಫೌಂಡೇಶನ್‌ನ ರಾಜ್ಯಮಟ್ಟದ ಯಕ್ಷಧ್ರುವ ಸ್ಪರ್ಧೆ ‘ವಿದ್ಯಾರ್ಥಿ ಸಮ್ಮಿಲನ’

Moodubidire: ಆಳ್ವಾಸ್‌ನಲ್ಲಿ ಪಟ್ಲ ಫೌಂಡೇಶನ್‌ನ ರಾಜ್ಯಮಟ್ಟದ ಯಕ್ಷಧ್ರುವ ಸ್ಪರ್ಧೆ ‘ವಿದ್ಯಾರ್ಥಿ ಸಮ್ಮಿಲನ’

ಸರ್ವ ಗುಣಗಳನ್ನು ಒಳಗೊಂಡು ಸಂಪನ್ನವಾದಂತ ಕಲೆ ಯಕ್ಷಗಾನ: ಕನ್ಯಾನ ಸದಾಶಿವ ಶೆಟ್ಟಿ 


ಮೂಡುಬಿದಿರೆ: ಸಂಗೀತ, ಭಾಗವತಿಗೆ, ಹಿಮ್ಮೇಳ, ವೇಷಭೂಷಣ, ನೃತ್ಯಗಳನ್ನು ಒಳಗೊಂಡ ಸರ್ವ ಗುಣ ಸಂಪನ್ನವಾದಂತ ಕಲೆ ಯಕ್ಷಗಾನ. ಇಂತಹ ಒಂದು ಕಲೆಯನ್ನು ಪರಿಪೂರ್ಣ ಕಲೆಯನ್ನಾಗಿಸುವ ಮಹತ್ಕಾರ್ಯವನ್ನು ಕಲಾವಿದರು, ಭಾಗವತರು, ವೇಷಧಾರಿಗಳು ಮಾಡುತ್ತಿದ್ದಾರೆ. ಇವರ ಕೊಡುಗೆಯಿಂದ ಯಕ್ಷಗಾನ ಅತ್ಯುನ್ನತ ಸ್ಥಾನಕ್ಕೇರಿದೆ. ಪಟ್ಲ ಸತೀಶ್ ಶೆಟ್ಟಿ ಕೇವಲ ಕಲಾವಿದ ಮಾತ್ರವಲ್ಲ. ಪಟ್ಲ ಫೌಂಡೇಶನ್ ಸ್ಥಾಪಿಸಿ ಅನೇಕ ಕಲಾವಿದರಿಗೆ ಬದುಕು ಕೊಡುತ್ತಿದ್ದಾರೆ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಗೌರವಾಧ್ಯಕ್ಷ ಕನ್ಯಾನ ಸದಾಶಿವ ಶೆಟ್ಟಿ ಹೇಳಿದರು.

ಅವರು ಮಂಗಳೂರಿನ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ವಿದ್ಯಾಗಿರಿಯ ಮುಂಡ್ರೆದಗುತ್ತು ಅಮರನಾಥ ಶೆಟ್ಟಿ (ಕೃಷಿ ಸಿರಿ)ಸಭಾಂಗಣದಲ್ಲಿ ಮಂಗಳವಾರ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಯಕ್ಷಗಾನ ಕಲೆಯಾಧಾರಿತ ರಾಜ್ಯಮಟ್ಟದ ಸ್ಪರ್ಧೆ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನವನ್ನು ಉದ್ಘಾಟಿಸಿ ಮಾತನಾಡಿದರು. 

ಶಾಸಕ ಉಮಾನಾಥ್ ಎ. ಕೋಟ್ಯಾನ್ ಅಧ್ಯಕ್ಷತೆ ವಹಿಸಿ, ಪ್ರತಿಭಾವಂತ ಮತ್ತು ಆಸಕ್ತಿ ಹೊಂದಿದ ವಿದ್ಯಾರ್ಥಿಗಳಿಗೆ ಯಕ್ಷ ಶಿಕ್ಷಣವನ್ನು ನೀಡಬೇಕು. ಈ ಸದುದ್ದೇಶದಿಂದ ಪಟ್ಲ ಫೌಂಡೇಶನ್ ಈ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ನಮ್ಮ ಜೀವನಕ್ಕೆ ಬೇಕಾದ ಅಮೂಲ್ಯ ವಿಷಯಗಳನ್ನು ಅರಿತುಕೊಳ್ಳಲು ಯಕ್ಷಗಾನ ಒಳ್ಳೆಯ ಮಾಧ್ಯಮ. ಮಕ್ಕಳಿಗೆ ಶಾಲೆಯಲ್ಲಿ ಯಕ್ಷ ಶಿಕ್ಷಣವನ್ನೂ ನೀಡಬೇಕು ಎಂದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಮಾತನಾಡಿ, ವಿದ್ಯಾರ್ಥಿಗಳಿಗೆ ಯಕ್ಷಗಾನ ಕಲಿಸುವುದು ಸರ್ವಶ್ರೇಷ್ಠ ಕೆಲಸ. ವಿದ್ಯಾರ್ಥಿಗಳಿಗೆ ವಿದ್ಯೆ-ಬುದ್ಧಿಯ ಜೊತೆಗೆ ಯಕ್ಷಗಾನದ ಪರಿಚಯ ಮಾಡಿಸುವುದು ನಮ್ಮ ಕರ್ತವ್ಯ. ಪಟ್ಲ ಸತೀಶ್ ಶೆಟ್ಟಿ ಅವರಂತಹ ಭಾಗವತ ಹಾಗೂ ಯಕ್ಷ ಕಲಾವಿದರು, ಯಕ್ಷಗಾನದಲ್ಲಿ ತೊಡಗಿಸಿಕೊಳ್ಳುವುದರ ಜೊತೆ ಅನೇಕ ವಿದ್ಯಾರ್ಥಿಗಳಿಗೆ ಯಕ್ಷ ಶಿಕ್ಷಣ ನೀಡಿ, ಸಮಾಜಕ್ಕೆ ಕೊಡುಗೆ ನೀಡುತ್ತಿದ್ದಾರೆ. 2015ರಲ್ಲಿ ಪ್ರಾರಂಭವಾದ ಯಕ್ಷ ಧ್ರುವ ಫೌಂಡೇಶನ್ ರಾಜ್ಯದಲ್ಲಿ 39 ಘಟಕಗಳನ್ನು ಒಳಗೊಂಡಿದೆ. ಯಕ್ಷ ಶಿಕ್ಷಣ ನೀಡುವುದರಿಂದ ಮಕ್ಕಳಲ್ಲಿ ಸೌಂದರ್ಯ ಪ್ರಜ್ಞೆಯನ್ನು ಮೂಡಿಸಿದಂತಾಗುತ್ತದೆ. ಯಕ್ಷಗಾನವನ್ನು ಕಲಿತ ವಿದ್ಯಾರ್ಥಿಗಳಲ್ಲಿ ಕನ್ನಡ ಪ್ರಬಲ ಹಾಗೂ ಅರ್ಥಪೂರ್ಣವಾಗಿ ಮೂಡಿಬಂದಿರುತ್ತದೆ. ಕನ್ನಡ ಭಾಷೆಯನ್ನು ಕಟ್ಟುವಲ್ಲಿ ಯಕ್ಷಗಾನ ಮಹತ್ಕಾರ್ಯವನ್ನು ಮಾಡುತ್ತಿದೆ ಎಂದರು.

ಬುಟ್ಟಿಕೆರೆ ಪುರುಷೋತ್ತಮ ಪೂಂಜಾ ಅವರ ಪತ್ನಿ ಶೋಭಾ ಪುರುಷೋತ್ತಮ ಪೂಂಜ ಅವರನ್ನು ಗೌರವಿಸಲಾಯಿತು.

ಮೂಡುಬಿದಿರೆಯ ಉದ್ಯಮಿ ಕೆ. ಶ್ರೀಪತಿ ಭಟ್, ಫೌಂಡೇಷನ್ ಟ್ರಸ್ಟ್ ಪದಾಧಿಕಾರಿಗಳಾದ ಪುರುಷೋತ್ತಮ ಕೆ. ಭಂಡಾರಿ, ದಿವಾಕರ್ ರಾವ್, ಡಾ. ಮನು ರಾವ್, ಸುದೇಶ್ ಕುಮಾರ್ ರೈ, ಭುಜಬಲಿ ಧರ್ಮಸ್ಥಳ, ಸರಪಾಡಿ ಅಶೋಕ ಶೆಟ್ಟಿ, ದೀವಿತ್ ಎಸ್. ಕೋಟ್ಯಾನ್, ಪಣಂಬೂರು ವಾಸುದೇವ ಐತಾಳ್, ಪ್ರೊ. ಎಮ್.ಎಲ್. ಸಾಮಗ, ಕದ್ರಿಪ್ರದೀಪ್ ಆಳ್ವ ಉಪಸ್ಥಿತರಿದ್ದರು. 

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸಂಸ್ಥಾಪಕ ಪಟ್ಲ ಸತೀಶ್ ಶೆಟ್ಟಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೆ. ಭಂಡಾರಿ ಕಾರ್ಯಕ್ರಮ ನಿರೂಪಿಸಿ, ಸಂಘಟನಾ ಕಾರ್ಯದರ್ಶಿ ಕದ್ರಿ ನವನೀತ್ ಶೆಟ್ಟಿ ವಂದಿಸಿದರು. 

ಯಕ್ಷರೂಪಕ ಸ್ಪರ್ಧೆ, ಯಕ್ಷ ಲೇಖನ ಸ್ಪರ್ಧೆ, ಯಕ್ಷಜ್ಞಾನ ಪರೀಕ್ಷಾ ಪಂಥ, ಯಕ್ಷ ರಂಗು ಮುಖವರ್ಣಿಕೆ, ಶ್ಲೋಕ ಕಂಠಪಾಠ, ಯಕ್ಷ ರಸ ಪ್ರಶ್ನೆ, ಯಕ್ಷ ಸ್ವಗತ ಸ್ಪರ್ಧೆಗಳು ವಿವಿಧ ವೇದಿಕೆಗಳಲ್ಲಿ ನಡೆದವು. ಈ ಕರ‍್ಯಕ್ರಮದಲ್ಲಿ ಒಂದೇ ಭಾರಿ 1650ಕ್ಕೂ ಅಧಿಕ ಮಂದಿ ವಿದ್ಯಾರ್ಥಿಗಳು ಯಕ್ಷರೂಪಕದ ಮೂಲಕ ರಂಗ ಪ್ರವೇಶ ಮಾಡಿದ್ದು ಎಲ್ಲರ ಗಮನ ಸೆಳೆಯಿತು. ಅವಿಭಜಿತ ದ.ಕ, ತುಮಕೂರು ಶಿವಮೊಗ್ಗ ಜಿಲ್ಲೆಗಳಿಂದ ಒಟ್ಟು 2074 ಕ್ಕೂ ಅಧಿಕ ವಿದ್ಯಾರ್ಥಿಗಳು ಏಳು ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡರು.




Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article