Mangalore: ಸರ್ಕಾರಿ ಶಾಲೆಯ ನೂತನ ಕೊಠಡಿಗಳ ಉದ್ಘಾಟನೆ
Monday, March 18, 2024
ಮಂಗಳೂರು: ಬಿಜೈ ಕಾಪಿಕಾಡ್ನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಗೆ ವಿವೇಕ ಶಾಲಾ ಯೋಜನೆಯಡಿ 27.80 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಎರಡು ಕೊಠಡಿಗಳನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿ ಶಾಲೆಗೆ ಹತ್ತಾಂತರಿಸಿದರು.
ನಂತರ ಮಾತನಾಡಿದ ಅವರು, 2023-24ನೇ ಸಾಲಿನ ರಾಜ್ಯ ವಲಯ ಮುಂದುವರಿದ ಯೋಜನೆಯ ಸರ್ಕಾರಿ ಪ್ರಾಥಮಿಕ-ಪ್ರೌಢ ಶಾಲೆಗಳಿಗೆ ಕೊಠಡಿಗಳ ನಿರ್ಮಾಣ ಕಾಮಗಾರಿಯ ಕ್ರಿಯಾ ಯೋಜನೆ ಇದಾಗಿದ್ದು, ಸರ್ಕಾರಿ ಶಾಲೆಗಳಿಗೆ ಅಗತ್ಯವಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದು ಸೇರಿದಂತೆ, ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲು ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೇ ಕಾಮಗಾರಿ ಆರಂಭಿಸಲಾಗಿತ್ತು. ಇದೀಗ ಕಾಮಗಾರಿ ಪೂರ್ಣಗೊಂಡಿದ್ದು ಕೊಠಡಿಗಳನ್ನು ಶಾಲೆಗೆ ಹಸ್ತಾಂತರಿಸಲಾಗಿದೆ ಎಂದರು.
ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು, ಹಳೆ ವಿದ್ಯಾರ್ಥಿ ಸಂಘದವರ ಸಹಿತ ಅನೇಕರು ಉಪಸ್ಥಿತರಿದ್ದರು.

