Putturu: ಅಂಬಿಕಾ ಮಹಾವಿದ್ಯಾಲಯದಲ್ಲಿ ನಟ್ಟೋಜ ಶಿವಾನಂದ ರಾವ್ ಅವರಿಗೆ ನುಡಿನಮನ
Sunday, March 17, 2024
ಪುತ್ತೂರು: ನಟ್ಟೋಜ ಶಿವಾನಂದ ರಾವ್ ಅವರು ಸಾಮಾಜಿಕ ಹಾಗೂ ರಾಜಕೀಯವಾಗಿ ಸಕ್ರೀಯರಾಗಿದ್ದು, ಪ್ರಗತಿಪರ ಕೃಷಿಕರಾಗಿ ಹೆಸರು ಗಳಿಸಿದ್ದರು. ಧರ್ಮ, ದೇಶ, ದೇವರಿಗಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡಿದ್ದರು. ದೇಶದ ಭಾವಿ ಪ್ರಜೆಗಳಾದ ಇಂದಿನ ವಿದ್ಯಾರ್ಥಿಗಳೂ ರಾಷ್ಟ್ರದ ದೊಡ್ಡ ಶಕ್ತಿಯಾಗಿ ಬೆಳೆಯಬೇಕೆಂಬ ಆಶಯವನ್ನು ಹೊಂದಿದ್ದರು. ಪುತ್ತೂರಿನಲ್ಲಿ ಅಂಬಿಕಾ ಎನ್ನುವ ’ಮಾದರಿ’ ಶಿಕ್ಷಣ ಸಂಸ್ಥೆಯ ನಿರ್ಮಾಣದ ಹಿಂದಿನ ಶಕ್ತಿಯಾಗಿದ್ದರು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ. ತಿಳಿಸಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದಲ್ಲಿ ನಟ್ಟೋಜ ಶಿವಾನಂದ ರಾವ್ ಅವರಿಗೆ ನುಡಿನಮನ ಸಲ್ಲಿಸಿದರು.
ಪುತ್ತೂರಿನಲ್ಲಿ ವಿಶ್ವ ಹಿಂದೂ ಪರಿಷತ್ನ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಮಾಜಿ ಶಾಸಕ ರಾಮ ಭಟ್ ಅವರ ಆಪ್ತವರ್ಗದಲ್ಲಿ ಗುರುತಿಸಿಕೊಂಡಿದ್ದು, ರಾಜಕೀಯವಾಗಿಯೂ ಸಾಕಷ್ಟು ಜವಾಬ್ದಾರಿ ನಿರ್ವಹಿಸಿದ್ದರು ಎಂದು ನೆನಪಿಸಿಕೊಂಡರು.
ಕಾಲೇಜಿನ ಐಕ್ಯೂಎಸಿ ಘಟಕದ ಸಂಯೋಜಕರಾದ ಚಂದ್ರಕಾಂತ ಗೋರೆ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು, ಉಪನ್ಯಾಸಕರು ಶಿವಾನಂದ ನಟ್ಟೋಜ ಅವರಿಗೆ ಮೌನ ಪ್ರಾರ್ಥನೆ ಸಲ್ಲಿಸಿ, ಪುಷ್ಪನಮನ ಸಲ್ಲಿಸಿದರು.
