Subramanya: ಸುಬ್ರಹ್ಮಣ್ಯದ ಐನೆಕಿದುವಿನ ಮನೆಗೆ ಶಂಕಿತರ ಭೇಟಿ ಪ್ರಕರಣ-ಪೊಲೀಸ್ ಅಧಿಕಾರಿಗಳು, ನಕ್ಸಲ್ ನಿಗ್ರಹ ದಳದ ಅಧಿಕಾರಿಗಳು ಭೇಟಿ
ಸುಬ್ರಹ್ಮಣ್ಯ: ಐನೆಕಿದು ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಶನಿವಾರ ಸಂಜೆ ವೇಳೆ ನಾಲ್ವರು ಶಂಕಿತರು ಭೇಟಿ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಾಗೂ ನಕ್ಸಲ್ ನಿಗ್ರಹ ದಳದವರು ವಿವಿಧ ಆಯಾಮಗಳಲ್ಲಿ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಶನಿವಾರ ಸಂಜೆ ೬.೩೦ರ ಸುಮಾರಿಗೆ ಐನೆಕಿದು ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಇಬ್ಬರು ಹೆಂಗಸರು, ಇಬ್ಬರು ಪುರುಷರು ಇರುವ ನಾಲ್ವರು ಶಂಕಿತರು ಆಗಮಿಸಿದ್ದರು. ಮನೆಯಲ್ಲಿ ಸುಮಾರು ೩೦-೪೫ ನಿಮಿಷ ಸಮಯದಷ್ಟು ಇದ್ದ ತಂಡದ ಸದಸ್ಯರು ಮನೆಯಿಂದ ಊಟ, ಅಕ್ಕಿ, ಸಕ್ಕರೆ ಪಡೆದು ಬಂದ ದಾರಿಯತ್ತ ತೆರಳಿದ್ದರು.
ಭಾನುವಾರ ಬೆಳಗ್ಗೆ ನಕ್ಸಲ್ ನಿಗ್ರಹ ದಳದ ಡಿವೈಎಸ್ಪಿ ರಾಘವೇಂದ್ರ, ಪುತ್ತೂರು ಉಪವಿಭಾಗ ಡಿವೈಎಸ್ಪಿ ಅರುಣ್ನಾಗೇಗೌಡ, ಸುಬ್ರಹ್ಮಣ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ಕಾರ್ತಿಕ್ ಸೇರಿದಂತೆ ನಕ್ಸಲ್ ನಿಗ್ರಹ ದಳದ ಅಧಿಕಾರಿಗಳು, ಸಿಬ್ಬಂದಿಗಳು, ಗುಪ್ತದಳದ ಅಧಿಕಾರಿಗಳು ಭೇಟಿ ನೀಡಿ ಮನೆಯವರಿಂದ ಮಾಹಿತಿ ಪಡೆದರು.
ಶನಿವಾರ ಸಂಜೆ ವೇಳೆ ಸಣ್ಣದಾಗಿ ಮಳೆಯಾಗುತ್ತಿದ್ದ ಸಂದರ್ಭದಲ್ಲಿ ಅರಣ್ಯ ಪ್ರದೇಶದಿಂದ ಕಾಡಂಚಿನ ಮನೆಯ ಬಳಿಗೆ ಶಂಕಿತರು ಆಗಮಿಸಿದ್ದು, ಶಂಕಿತರು ನಡೆದುಕೊಂಡು ಬರುವ ವೇಳೆ ತಂಡಕ್ಕೆ ವ್ಯಕ್ತಿಯೊಬ್ಬರು ಸಿಕ್ಕಿದು, ಆತನ ಬಳಿ ಅವರು ಮಾತನಾಡಿ, ಅಲ್ಲಿಂದ ರಸ್ತೆಯ ಬದಿಯ ಮನೆಯೊಂದಕ್ಕೆ ತೆರಳುವವರಿದ್ದರು, ಆದರೆ ಆ ಮನೆಯ ಜಾಗಕ್ಕೆ ಸೋಲಾರ್ ಬೇಲಿ ಅಳವಡಿಸಲಾಗಿದ್ದರಿಂದ ಮತ್ತೊಂದು ಮನೆಗೆ ಭೇಟಿ ನೀಡಿದ್ದಾರೆ ಎಂದು ಅಂದಾಜಿಸಲಾಗಿದೆ.
ಕಲರ್ ವಸ್ತ್ರ ಧರಿಸಿದ್ದ ಶಂಕಿತರು ತಲೆಗೆ ಬಟ್ಟೆ ಕಟ್ಟಿಕೊಂಡಿದ್ದು, ತಾವು ಯಾರೆಂದು ನಿಮಗೆ ತಿಳಿದಿದೆಯಾ ಎಂದು ಮನೆಯವರಲ್ಲಿ ಕೇಳಿದ್ದು, ಕಳೆದ ವಾರ ನಮ್ಮ ತಂಡದ ಸದಸ್ಯರೇ ಕೂಜಿಮಲೆ ಎಸ್ಟೇಟ್ ಅಂಗಡಿಗೆ ಹೋಗಿದ್ದು ಎಂದು ತಿಳಿಸಿದ್ದಾರೆ. ಬಳಿಕ ಕೆಲ ವಿಚಾರಗಳ ಬಗ್ಗೆ ಮನೆಯವರಲ್ಲಿ ಮಾತು ಕತೆ ನಡೆಸಿದ್ದಾರೆ. ಮನೆಯ ಹೊರಗಿದ್ದ ಕೆಲಸದವರಲ್ಲೂ ಮಾತನಾಡಿದ್ದಾರೆ ಎಂದು ತಿಳಿದುಬಂದಿದೆ. ನಾವು ಬರುವ ವೇಳೆ ನಮ್ಮನ್ನು ವ್ಯಕ್ತಿಯೊಬ್ಬರು ನೋಡಿದ್ದು, ಅವರು ಹೊರಗೆ ಮಾಹಿತಿ ನೀಡಬಹುದು, ನಾವು ಇಲ್ಲಿ ತುಂಬ ಹೊತ್ತು ಇರುವುದು ಸರಿಯಲ್ಲ ಎಂದು ಅಲ್ಲಿಂದ ಅರಣ್ಯದತ್ತ ತೆರಳಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಶಂಕಿತರು ತಮ್ಮ ಜೊತೆಗೆ ತಂದಿದ್ದ ಗನ್ನ್ನು ಗೋಡೆಗೆ ಒರಗಿಸಿಟ್ಟಿದ್ದರು ಎನ್ನಲಾಗಿದೆ.