Mangalore: ಬಿಜೆಪಿಯಿಂದ ಭ್ರಷ್ಟಾಚಾರಕ್ಕೆ ಕುಮ್ಮಕ್ಕು: ಅಶ್ವಿನ್ ಕುಮಾರ್ ರೈ
ಮಂಗಳೂರು: ಭ್ರಷ್ಟಾಚಾರ ಮುಕ್ತ ಭಾರತ ಮಾಡುವುದಾಗಿ ಹೇಳಿಕೊಂಡು ಅಧಿಕಾರಕ್ಕೇರಿದ ನರೇಂದ್ರ ಮೋದಿ ಕಳೆದ 10 ವರ್ಷದಲ್ಲಿ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡಿದ್ದಾರೆ. ತನ್ನ ವಿರುದ್ಧ ಧ್ವನಿ ಎತ್ತುವವರನ್ನು ಇಡಿ, ಐಟಿ, ಸಿಬಿಐ ಮೂಲಕ ದಾಳಿ ನಡೆಸಿ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ದ.ಕ.ಜಿಲ್ಲಾ ವಾರ್ ರೂಂ ಮತ್ತು ಕಮ್ಯುನಿಕೇಶನ್ ಸೆಂಟರ್ನ ಉಸ್ತುವಾರಿ ಅಶ್ವಿನ್ ಕುಮಾರ್ ರೈ ಆರೋಪಿಸಿದ್ದಾರೆ.
ನಗರದ ಕಾಂಗ್ರೆಸ್ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮೋದಿ ಧಕ್ಕೆ ತಂದಿದ್ದಾರೆ. ಪ್ರತಿಪಕ್ಷಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ರಾಜ್ಯದ ಮುಖ್ಯಮಂತ್ರಿಗಳನ್ನೇ ಬಂಧಿಸಿ ಜೈಲಿಗೆ ತಳ್ಳುತ್ತಿದ್ದಾರೆ. ಒಂದೇ ಚುನಾವಣೆ ಎನ್ನುವ ಮೂಲಕ ಒಕ್ಕೂಟ ವ್ಯವಸ್ಥೆಗೆ ಅಪಚಾರ ಎಸಗುತ್ತಿದ್ದಾರೆ. ಭ್ರಷ್ಟಾಚಾರದ ಆರೋಪದ ಮೇರೆಗೆ ಇಡಿ, ಐಟಿ ದಾಳಿಗೊಳಗಾದವರು ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ ಪರಿಶುದ್ಧರಾಗುತ್ತಾರೆ. ಭಾವನಾತ್ಮಕ ವಿಚಾರಗಳನ್ನು ಕೆದಕಿ ಮತದಾರರನ್ನು ವಂಚಿಸುತ್ತಿದ್ದಾರೆ ಎಂದರು.
ಕಳೆದ ಬಾರಿ ಬಿಜೆಪಿ ಘೋಷಿಸಿದ 550 ಪ್ರಣಾಳಿಕೆಗಳ ಪೈಕಿ ಶೇ.10ರಷ್ಟು ಕೂಡ ಜಾರಿಯಾಗಿಲ್ಲ. ಹಾಗಾಗಿ ಬಿಜೆಪಿಯ ಹೊಸ ಪ್ರಣಾಳಿಕೆಯಲ್ಲಿ ಯಾವುದೇ ಹುರುಳಿಲ್ಲ. ಹಳೆಯ ಗ್ಯಾರಂಟಿಗಳನ್ನು ಜಾರಿಗೊಳಿಸಿದ ಬಳಿಕ ಹೊಸ ಪ್ರಣಾಳಿಕೆ ಘೋಷಣೆ ಮಾಡಿದ್ದರೆ ಅದಕ್ಕೆ ಅರ್ಥವಿರುತ್ತಿತ್ತು ಎಂದ ಅಶ್ವಿನ್ ಕುಮಾರ್ ರೈ, ಜಿಎಸ್ಟಿ ಸಂದಾಯದಲ್ಲಿ ಕರ್ನಾಟಕ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಆದರೆ, ರಾಜ್ಯಕ್ಕೆ ಸಿಗಬೇಕಾದ ಅನುದಾನ ಸಮರ್ಪಕವಾಗಿ ಬಿಡುಗಡೆಗೊಳಿಸುತ್ತಿಲ್ಲ. ಸದ್ಯ ನಮಗೆ ಶೇ.12-13ರಷ್ಟು ಅನುದಾನ ಬರುತ್ತಿದೆ. ಅದು ಸಾಲದು. ನಮಗೆ ಶೇ.30ರಷ್ಟು ಅನುದಾನ ಬರಬೇಕಾಗಿದೆ ಎಂದರು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಯುವ ವಕೀಲರು, ಸಂಘಟನಾ ಶಕ್ತಿಯುಳ್ಳವರು. ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ. ಅವರನ್ನು ಈ ಬಾರಿ ಗೆಲ್ಲಿಸುವ ಅನಿವಾರ್ಯತೆ ಇದೆ ಎಂದರು.
ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಪಕ್ಷದ ಮುಖಂಡರಾದ ನವೀನ್ ಡಿಸೋಜ, ಶುಭೋದಯ ಆಳ್ವ, ಮುಹಮ್ಮದ್ ವಳವೂರ್, ನೀರಜ್ಪಾಲ್, ಟಿ.ಕೆ.ಸುಧೀರ್, ಶಬ್ಬೀರ್ ಎಸ್, ಮೊಹಶೀರ್ ಸಾಮಣಿಗೆ, ದುರ್ಗ ಪ್ರಸಾದ್ ಉಪಸ್ಥಿತರಿದ್ದರು.