Mangalore: ಕ್ರೀಡೆಯಲ್ಲಿ ಭಾಗವಹಿಸುವುದೇ ಸೊಗಸು: ಶುಭ ಕೆ.ಎಚ್.
Thursday, April 18, 2024
ಮಂಗಳೂರು: ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಾದರೆ ನಿತ್ಯ ನಿರಂತರವಾಗಿ ತಯಾರಿ ಮಾಡಬೇಕು. ಅಲ್ಲದೇ, ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಕ್ರೀಡೆಯಲ್ಲಿ ಭಾಗವಹಿಸುವುದೇ ಸೊಗಸು ಮುಖ್ಯ ಎಂದು ಅಂತಾರಾಷ್ಟ್ರೀಯ ಕ್ರೀಡಾಪಟು ಹಾಗೂ ಡಾ. ದಯಾನಂದ ಪೈ ಹಾಗೂ ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ಶುಭ ಕೆ.ಎಚ್. ಹೇಳಿದರು.
ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಏರ್ಪಡಿಸಿದ್ದ ವಾರ್ಷಿಕ ಕ್ರೀಡಾ ದಿನವನ್ನು ಉದ್ಘಾಟಿಸಿ ಮಾತನಾಡಿದರು. ಸತತ ಶ್ರದ್ಧೆ ಹಾಗೂ ಪರಿಶ್ರಮದಿಂದ ಸಾಧನೆಯ ಹಾದಿ ಸುಲಭವಾಗುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ, ವಿದ್ಯಾರ್ಥಿಗಳಿಗೆ ಅಭಿನಂದಿಸಿ, ಶಿಸ್ತು ಹಾಗೂ ಸಂಯಮದಿಂದ ಎಲ್ಲಾ ಕ್ರೀಡೆಗಳಲ್ಲಿ ಭಾಗವಹಿಸುವಂತೆ ಸಲಹೆ ನೀಡಿದರು.
ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಕೇಶವ ಮೂರ್ತಿ ಟಿ. ಸ್ವಾಗತಿಸಿದರು. ಸ್ನಾತಕೋತ್ತರ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕಿ ಶಮಾ ನಿರೂಪಿಸಿದರು. ದೈಹಿಕ ಶಿಕ್ಷಣ ವಿಭಾಗದ ಕಾರ್ತಿಕ್ ವಂದಿಸಿದರು.
ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ವಿಭಾಗದ ದಿವಾಕರ್ ಶೆಟ್ಟಿ, ಕ್ರೀಡಾ ವಿದ್ಯಾರ್ಥಿ ಕಾರ್ಯದರ್ಶಿ ಓಬಳಪ್ಪ, ಹಾಗೂ ತೃತೀಯ ಬಿಕಾಂನ ದಿಯಾ ಟಿ. ಸಾಲಿಯಾನ್ ಮತ್ತು ವಿವಿಧ ವಿಭಾಗಗಳ ಉಪನ್ಯಾಸಕರು ಉಪಸ್ಥಿತರಿದ್ದರು.