
Mangalore: ರಸ್ತೆಯಲ್ಲಿ ನಮಾಝ್ ಮಾಡಿದ ವಿಚಾರ-ಶರಣ್ ಪಂಪ್ ವೆಲ್ ಸೇರಿ ವಿ.ಹೆಚ್.ಪಿ. ಮುಖಂಡರ ಮೇಲೆ ಪ್ರಕರಣ ದಾಖಲಿಸಿರುವುದು ಖಂಡನೀಯ: ವೇದವ್ಯಾಸ ಕಾಮತ್
ಮಂಗಳೂರು: ನಗರದ ಕಂಕನಾಡಿ ಮಸೀದಿಯ ಮುಂದಿನ ರಸ್ತೆಯಲ್ಲಿ ನಮಾಝ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಸ್ವತಃ ಮಸೀದಿಯ ಆಡಳಿತ ಮಂಡಳಿಯೇ ವಿಷಾದ ವ್ಯಕ್ತಪಡಿಸಿ ಇನ್ನು ಮುಂದೆ ಹೀಗಾಗದಂತೆ ಎಚ್ಚರ ವಹಿಸುತ್ತೇವೆಂದು ವಿವಾದಕ್ಕೆ ತೆರೆ ಎಳೆದರೂ, ಪೊಲೀಸರು ಮಾತ್ರ ಜಿಲ್ಲೆಯ ಕಾಂಗ್ರೆಸ್ ಮುಖಂಡರ ಆಣತಿಯಂತೆ ಶರಣ್ ಪಂಪ್ ವೆಲ್ ಸೇರಿದಂತೆ ವಿ.ಹಿಂ.ಪ. ಮುಖಂಡರ ಮೇಲೆಯೇ ಪ್ರಕರಣ ದಾಖಲಿಸಿರುವುದು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವೇ ಇಲ್ಲ, ಇದು ಅಕ್ಷಮ್ಯವೆಂದು ಶಾಸಕ ವೇದವ್ಯಾಸ ಕಾಮತ್ ಅವರು ಪ್ರಕಟಣೆಯಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ನಾಯಕರು ಮಂಗಳೂರು ಪೊಲೀಸರ ವಿರುದ್ಧ ಮುಗಿಬಿದ್ದ ಬೆನ್ನಲ್ಲೇ ಮಣಿದಿರುವ ಪೊಲೀಸ್ ಇಲಾಖೆ ಏಕಪಕ್ಷಿಯವಾಗಿ ನಡೆದುಕೊಂಡು ಈ ಪ್ರಕರಣದಲ್ಲಿ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದ ಇನ್ಸ್ಪೆಕ್ಟರ್ ಅವರಿಗೆ ಕಡ್ಡಾಯ ರಜೆ ಶಿಕ್ಷೆ ವಿಧಿಸಿದ್ದಾರೆ. ಅಲ್ಲದೇ ರಸ್ತೆಯಲ್ಲಿ ನಮಾಜ್ ಮಾಡಿದ್ದನ್ನು ಪ್ರಶ್ನಿಸಿದ್ದ ಶರಣ್ ಪಂಪ್ ವೆಲ್ ಸೇರಿದಂತೆ ವಿ.ಹಿಂ.ಪ ಮುಖಂಡರ ಮೇಲೆಯೇ ಪ್ರಕರಣ ದಾಖಲಿಸಲಾಗಿದೆ. ಇದು ಜನಸಾಮಾನ್ಯರಿಗೆ ಯಾವ ಸಂದೇಶ ನೀಡುತ್ತಿದೆ ಎಂಬುದನ್ನು ಕಾಂಗ್ರೆಸ್ ನಾಯಕರು ಹಾಗೂ ಪೊಲೀಸ್ ಇಲಾಖೆಯೇ ಉತ್ತರಿಸಬೇಕು ಎಂದರು.
ಪ್ರಸ್ತುತ ಕಾಂಗ್ರೆಸ್ ನಾಯಕರು ಪೊಲೀಸರನ್ನು ತಮ್ಮ ಕಪಿಮುಷ್ಟಿಯಲ್ಲಿ ಹಿಡಿದಿಟ್ಟುಕೊಂಡು ಜಿಲ್ಲೆಯಲ್ಲಿ ವ್ಯವಸ್ಥಿತವಾಗಿ ಗೊಂದಲದ ವಾತಾವರಣವನ್ನು ಸೃಷ್ಟಿಸಿ ಎಲ್ಲದಕ್ಕೂ ಹಿಂದೂ ಮುಖಂಡರನ್ನೇ ಹೊಣೆಯಾಗಿಸುವ ಷಡ್ಯಂತ್ರ ನಡೆಯುತ್ತಿದೆ. ಇದು ಹೀಗೇ ಮುಂದುವರಿದು ಜನಸಾಮಾನ್ಯರ ಆಕ್ರೋಶದ ಕಟ್ಟೆಯೊಡೆದರೆ ಕಾಂಗ್ರೆಸ್ ಹಾಗೂ ಪೊಲೀಸ್ ಇಲಾಖೆಯೇ ನೇರ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಸಿ ಕೂಡಲೇ ಹಿಂದೂ ಮುಖಂಡರ ಮೇಲೆ ದುರುದ್ದೇಶಪೂರಿತವಾಗಿ ದಾಖಲಿಸಿರುವ ಪ್ರಕರಣವನ್ನು ಹಿಂಪಡೆಯಬೇಕು ಎಂದು ಶಾಸಕರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.