Mangalore: ಪ.ಗೋ. ಪ್ರಶಸ್ತಿಗೆ ವಾರ್ತಾಭಾರತಿ ವರದಿಗಾರ ಕೆ.ಎಂ. ಇಸ್ಮಾಯಿಲ್ ಕಂಡಕರೆ ಆಯ್ಕೆ
ಮಂಗಳೂರು: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಪ.ಗೋ. ಪ್ರಶಸ್ತಿಗೆ ವಾರ್ತಾಭಾರತಿ ವರದಿಗಾರ ಕೆ.ಎಂ. ಇಸ್ಮಾಯಿಲ್ ಕಂಡಕರೆ ಆಯ್ಕೆಯಾಗಿದ್ದಾರೆ.
2023 ರ ಏ. 6ರಂದು ವಾರ್ತಾಭಾರತಿ ಪತ್ರಿಕೆಯಲ್ಲಿ ಪ್ರಕಟವಾದ ‘ರಸ್ತೆ ಕೊಡಿ ಇಲ್ಲದಿದ್ದರೆ ಸಾವಿಗೆ ದಾರಿ ಮಾಡಿಕೊಡಿ’ ಎಂಬ ವರದಿ ಪ್ರಶಸ್ತಿಗೆ ಆಯ್ಕೆಯಾಗಿದೆ.
ಹಿರಿಯ ಪತ್ರಕರ್ತ ಕೇಶವ ಕುಂದರ್, ಪತ್ರಿಕೋದ್ಯಮ ಉಪನ್ಯಾಸಕ ಗುರುಪ್ರಸಾದ್ ಆಯ್ಕೆ ಸಮಿತಿಯಲ್ಲಿದ್ದರು. ಪ್ರಶಸ್ತಿಯು 10,001 ರೂ. ನಗದು, ಪ್ರಶಸ್ತಿ ಫಲಕ, ಸ್ಮರಣಿಕೆ ಒಳಗೊಂಡಿವೆ.
ಪರಿಚಯ:
ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಿಂದ ಡಿಪ್ಲೋಮಾ ಇನ್ ಜರ್ನಲಿಸಮ್ನಲ್ಲಿ ಸರ್ಟಿಫಿಕೇಟ್ ಕೋರ್ಸ್ ಪಡೆದಿರುವ ಇಸ್ಮಾಯಿಲ್ ಚಿತ್ತಾರ ವಾಹಿನಿ, ಜನಮಿತ್ರ ಪ್ರಾದೇಶಿಕ ದಿನ ಪತ್ರಿಕೆ ಕೊಡಗು ಜಿಲ್ಲಾ ವರದಿಗಾರ, ಪ್ರಜಾಸತ್ಯ ಮತ್ತು ಆಂದೋಲನ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದಾರೆ. ಈಗ ವಾರ್ತಾಭಾರತಿ ದಿನ ಪತ್ರಿಕೆಯ ಕೊಡಗು ಜಿಲ್ಲಾ ವಿಶೇಷ ವರದಿಗಾರರಾಗಿ ಒಂದು ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದಾರೆ.
ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘ ಮತ್ತು ಕುಶಾಲನಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತ ಸಂಘದ ಅತ್ಯುತ್ತಮ ಕ್ರೀಡಾ ವರದಿ ಪ್ರಶಸ್ತಿ, ಪಡೆದಿದ್ದಾರೆ.
2021ರಲ್ಲಿ ಇಸ್ಮಾಯಿಲ್ ಅವರ ಚೊಚ್ಚಲ ಕೃತಿ ‘ಮರಿಯಮ್’ ಬಿಡುಗಡೆಗೊಂಡಿತ್ತು. ಫುಟ್ಬಾಲ್ ಕ್ರೀಡಾಪಟು ಮತ್ತು ತರಬೇತುದಾರರಾಗಿದ್ದು, ಕರ್ನಾಟಕ ರಾಜ್ಯ ಫುಟ್ಬಾಲ್ ಸಂಸ್ಥೆಯ ತೀರ್ಪುಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭ ಮೇ 9ರಂದು ಬೆಳಗ್ಗೆ 11 ಗಂಟೆಗೆ ಮಂಗಳೂರು ಪತ್ರಿಕಾ ಭವನದಲ್ಲಿ ನಡೆಯಲಿದೆ. ಮಂಗಳೂರು ವಿವಿ ಕುಲಪತಿ ಪಿ.ಎಲ್. ಧರ್ಮ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಮುಖ್ಯ ಅತಿಥಿಯಾಗಿ ಭಾಗವಹಿಸುವರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸುವರು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.