Ajjarakaadu: ಸಮಾಜ ಇಂದು ಕ್ರೀಡೆಯನ್ನು ನೋಡುತ್ತಿರುವ ದೃಷ್ಟಿಕೋನ ಬದಲಾಗಿದೆ: ಡಾ. ಜೆರಾಲ್ಡ್ ಸಂತೋಷ್ ಡಿಸೋಜಾ
ಅಜ್ಜರಕಾಡು: ಕೇವಲ ಶ್ರೀಮಂತರ ಆಟ ಎಂದೇ ಕರೆಯಲ್ಪಡುವ ಟೆನ್ನಿಸ್ ಇಂದು ಶ್ರೀಸಾಮಾನ್ಯರು ಆಡುವ ಕ್ರೀಡೆಯಾಗಿ ಬದಲಾಗಿದೆ. ಯಾಕೆಂದರೆ, ಸಮಾಜ ಇಂದು ಕ್ರೀಡೆಯನ್ನು ನೋಡುತ್ತಿರುವ ದೃಷ್ಟಿಕೋನ ಬದಲಾಗಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಜೆರಾಲ್ಡ್ ಸಂತೋಷ್ ಡಿಸೋಜಾ ಹೇಳಿದರು.
ಇವರು ಉಡುಪಿಯ ಅಜ್ಜರಕಾಡಿನ ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ದೈಹಿಕ ಶಿಕ್ಷಣ ವಿಭಾಗ, ಮತ್ತು ಉಡುಪಿ ಜಿಲ್ಲಾ ಲಾನ್ ಟೆನ್ನಿಸ್ ಸಂಘ ಇವರ ಸಹಯೋಗದಲ್ಲಿ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಪುರುಷರ ಮತ್ತು ಮಹಿಳೆಯರ ಟೆನ್ನಿಸ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಪಂದ್ಯಾಕೂಟವನ್ನು ಅನುಭವಿ ಮತ್ತು ಅನ್ಮೋಲ್ ಟೆನ್ನಿಸ್ ಪ್ರಚಾರಕರಾದ ಶಶಿಧರ್ ಕಿದಿಯೂರು ಉದ್ಘಾಟಿಸಿ ಶುಭಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಭಾಸ್ಕರ್ ಶೆಟ್ಟಿ ಎಸ್. ಇವರು ವಹಿಸಿದ್ದರು. ಉಡುಪಿ ಜಿಲ್ಲಾ ಲಾನ್ ಟೆನ್ನಿಸ್ ಸಂಘದ ಡಾ. ರೋಶಣ್ ಕುಮಾರ್ ಶೆಟ್ಟಿ, ಉಡುಪಿಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ನಿರ್ದೇಶಕ ಡಾ. ರೋಶನ್ ಶೆಟ್ಟಿ, ಕಾಲೇಜಿನ ಐ.ಕ್ಯೂ.ಎ.ಸಿ. ಸಂಚಾಲಕ ಸೋಜಾನ್ ಕೆ. ಉಪಸ್ಥಿತರಿದ್ದರು.
ದೈಹಿಕ ಶಿಕ್ಷಣ ನಿರ್ದೇಶಕ ಡಾ. ರಾಮಚಂದ್ರ ಪಾಟ್ಕರ್ ಸ್ವಾಗತಿಸಿದರು. ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಡಾ. ರಾಜೇಂದ್ರ ನಿರೂಪಿಸಿ, ವಂದಿಸಿದರು.