Udupi: ನಗರಸಭೆಯಿಂದ ವಿಶ್ವ ಪರಿಸರ ದಿನಾಚರಣೆ
Wednesday, June 5, 2024
ಉಡುಪಿ: ಸ್ಥಳೀಯ ನಗರಸಭೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬುಧವಾರ ಕರಾವಳಿ ಬೈಪಾಸ್ ಬಳಿ ಇರುವ ಡಿವೈಡರ್ನಲ್ಲಿ ನಗರಸಭೆ ಪೌರಾಯುಕ್ತ ರಾಯಪ್ಪ ಗಿಡ ನೆಡುವ ಮೂಲಕ ಚಾಲನೆ ನೀಡಿದರು.
ಪರಿಸರ ರಕ್ಷಣೆ ನಮ್ಮ ಹೊಣೆ. ಆದರೆ, ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವುದು, ಅಭಿವೃದ್ಧಿ ಹೆಸರಲ್ಲಿ ಮರಗಳನ್ನು ಕಡಿಯುವ ಮೂಲಕ ಪರಿಸರ ಹಾಳು ಮಾಡುತ್ತಿದ್ದೇವೆ. ಪರಿಸರದ ಬಗ್ಗೆ ಪ್ರತಿಯೊಬ್ಬ ನಾಗರಿಕರಿಗೂ ತಿಳಿವಳಿಕೆ ಇರಬೇಕು ಎಂದರು.
ಪರಿಸರ ಸಂರಕ್ಷಣೆ ನಿಟ್ಟಿನಲ್ಲಿ ನಗರಸಭೆ ವತಿಯಿಂದ ತ್ಯಾಜ್ಯವನ್ನು ಮೂಲದಲ್ಲೇ ಹಸಿಕಸ, ಒಣಕಸವನ್ನಾಗಿ ಬೇರ್ಪಡಿಸಿ ಮರುಬಳಕೆ ಮಾಡಲಾಗುತ್ತಿದೆ. ಉಡುಪಿಯನ್ನು ತ್ಯಾಜ್ಯ ಮುಕ್ತ ನಗರವನ್ನಾಗಿಸಲು ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ನಗರಸಭೆಯೊಂದಿಗೆ ಕೈಜೋಡಿಸಬೇಕು ಎಂದರು.
ಈ ಸಂದರ್ಭದಲ್ಲಿ ನಗರಸಭೆಯ ಪರಿಸರ ಅಭಿಯಂತರೆ ಸ್ನೇಹ ಕೆ.ಎಸ್, ಪ್ರಭಾರ ಆರೋಗ್ಯ ನಿರೀಕ್ಷಕ ಮನೋಹರ್, ಹರೀಶ್ ಬಿಲ್ಲವ, ಸುರೇಂದ್ರ ಹೋಬಳಿದಾರ್, ನಗರಸಭೆಯ ಸೂಪರ್ವೈಸರ್ಗಳು ಇದ್ದರು.