
Mangalore: ಪ್ರವಾಸೋದ್ಯಮ ಆಕರ್ಷಣೆಗೆ ಕಾರ್ಯಕ್ರಮಗಳ ಕ್ಯಾಲೆಂಡರ್: ಯು.ಟಿ. ಖಾದರ್
ಮಂಗಳೂರು: ಜಿಲ್ಲೆಯಲ್ಲಿ ಪ್ರವಾಸೋದ್ಯಮವನ್ನು ಇನ್ನಷ್ಟು ಆಕರ್ಷಿಸಲು ವಿವಿಧ ಕಾರ್ಯಕ್ರಮಗಳನ್ನು ಪ್ರತಿ ತಿಂಗಳು ಆಯೋಜಿಸಲಾಗುವುದು ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದ್ದಾರೆ.
ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಈಗಾಗಲೇ ನಡೆಯುತ್ತಿರುವ ವಿವಿಧ ಕಾರ್ಯಕ್ರಮಗಳನ್ನು ಹಾಗೂ ಉತ್ಸವಗಳನ್ನು ಬಳಸಿಕೊಂಡು ಹೊಸದಾಗಿ ಇನ್ನಷ್ಟು ಕಾರ್ಯಕ್ರಮ ಏರ್ಪಡಿಸಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಬಲ ನೀಡಲಾಗುವುದೆಂದರು.
ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ. ಮಾತನಾಡಿ, ಪ್ರತಿ ತಿಂಗಳು ಒಂದೊಂದು ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು. ಅಂತರಾಷ್ಟ್ರೀಯ ಗಾಳಿಪಟ ಉತ್ಸವ, ಸ್ಟ್ರೀಟ್ಫುಡ್ ಫೆಸ್ಟಿವಲ್, ಪೆಡಲ್ ಫೆಸ್ಟಿವಲ್, ಪುಸ್ತಕ ಪ್ರದರ್ಶನ, ನದಿ ಉತ್ಸವ, ಕರಾವಳಿ ಉತ್ಸವ, ಬೀಚ್ ಉತ್ಸವ, ಮ್ಯಾರಥಾನ್, ಆಟೋಕ್ರಾಸ್ ಮತ್ತಿತರ ಕಾರ್ಯಕ್ರಮಗಳನ್ನು ಪ್ರತಿ ತಿಂಗಳು ಏರ್ಪಡಿಸಲಾಗುವುದು. ಇದಕ್ಕಾಗಿಪ್ರಾಯೋಜಕರು, ಸಂಘಟಕರು ಹಾಗೂ ಶಿಕ್ಷಣ ಸಂಸ್ಥೆಗಳನ್ನು ತೊಡಗಿಸಿಕೊಳ್ಳಲಾಗುವುದು ಎಂದರು.
ಪ್ರತಿ ತಿಂಗಳು ಒಂದೊಂದು ಕಾರ್ಯಕ್ರಮವನ್ನು ಆಯೋಜಿಸಿ ವಾರ್ಷಿಕ ಕ್ಯಾಲೆಂಡರ್ ರಚಿಸಲಾಗುವುದು. ಪ್ರತಿ ವರ್ಷವೂ ಇದರಂತೆ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.
ಮೂಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಆನಂದ್ ಕೆ, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಜಿ. ಉಪಸ್ಥಿತರಿದ್ದರು.