Mangalore: ನೀಟ್ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ-ಉನ್ನತ ಮಟ್ಟದ ತನಿಖೆಯಾಗಲಿ: ಬಿ.ರಮಾನಾಥ ರೈ ಆಗ್ರಹ

Mangalore: ನೀಟ್ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ-ಉನ್ನತ ಮಟ್ಟದ ತನಿಖೆಯಾಗಲಿ: ಬಿ.ರಮಾನಾಥ ರೈ ಆಗ್ರಹ


ಮಂಗಳೂರು: ನೀಟ್-ಯುಜಿ ವೈದ್ಯಕೀಯ ಪ್ರವೇಶ ಪರೀಕ್ಷೆಯ ಹಗರಣಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್‌ನ ಮೇಲ್ವಿಚಾರಣೆಯಲ್ಲಿ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಬಿ.ರಮಾನಾಥ ರೈ ಆಗ್ರಹಿಸಿದ್ದಾರೆ.

ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀಟ್ ಫಲಿತಾಂಶ ನಾನಾ ಅನುಮಾನಗಳಿಗೆ ಕಾರಣವಾಗಿದ್ದು, ಇದರಿಂದಾಗಿ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಹಲವು ಮಂದಿ ವಿದ್ಯಾರ್ಥಿಗಳು ಆತ್ಮಹತ್ಯೆ ಹಾದಿ ಹಿಡಿಯುವಂತಾಗಿದೆ. ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಲು ಹಗರಣದ ಬಗ್ಗೆ ಪಾರದರ್ಶಕ ತನಿಖೆಯಾಗಬೇಕು ಎಂದರು. 

ದಕ್ಷಿಣ ಕನ್ನಡದಲ್ಲಿ ಹೆಚ್ಚು ಮೆಡಿಕಲ್ ಕಾಲೇಜುಗಳಿವೆ. ಈ ಹಿಂದೆ ಸಿಇಟಿ ಇರುವಾಗ ಸ್ಥಳೀಯ ವಿದ್ಯಾರ್ಥಿಗಳಿಗೆ ಹೆಚ್ಚು ಅವಕಾಶ ದೊರೆಯುತ್ತಿತ್ತು. ಆದರೆ ನೀಟ್ ಬಂದ ಮೇಲೆ ಸ್ಥಳೀಯರಿಗೆ ಅನ್ಯಾಯವಾಗಿದೆ ಎಂದು ಹೇಳಿದರು. 

ನೀಟ್‌ನಲ್ಲಿ ಒಂದೇ ಪರೀಕ್ಷಾ ಕೇಂದ್ರಕ್ಕೆ ಹೆಚ್ಚು ರ‍್ಯಾಂಕ್‌ಗಳು ಬಂದಿರುವುದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ. ಜೂನ್ 14ಕ್ಕೆ ಘೋಷಿಸಬೇಕಾದ ನೀಟ್ ಪರೀಕ್ಷೆಯ ಫಲಿತಾಂಶವನ್ನು ಲೋಕಸಭೆಯ ಚುನಾವಣೆಯ ಫಲಿತಾಂಶ ಹೊರಬಂದ ಜೂ.4ರಂದೇ ಪ್ರಕಟಿಸಿರುವುದು ಹಗರಣವನ್ನು ಮುಚ್ಚಿಟ್ಟು ಜನರ ಗಮನವನ್ನು ಬೇರೆ ಕಡೆಗೆ ಸೆಳೆಯಲು ನಡೆಸಿದ ಪ್ರಯತ್ನದಂತೆ ಭಾಸವಾಗುತ್ತಿದೆ ಎಂದರು. 

ನೀಟ್ ವಿರುದ್ಧ ತಮಿಳುನಾಡು ರಾಜ್ಯ ಸೇರಿದಂತೆ ಬೇರೆ ಬೇರೆ ರಾಜ್ಯಗಳು ಧ್ವನಿಯೆತ್ತಿದೆ. ಅದೇ ರೀತಿ ಕರ್ನಾಟಕವೂ ಕೂಡಾ ನೀಟ್ ಅನ್ನು ತಿರಸ್ಕರಿಸುವ ನಿಟ್ಟಿನಲ್ಲಿ ಹೋರಾಟ ನಡೆಸುತ್ತಿರುವ ಇತರ ರಾಜ್ಯಗಳೊಂದಿಗೆ ಕೈಜೋಡಿಸಬೇಕು. ಕರ್ನಾಟಕಕ್ಕೆ ನೀಟ್ ಬೇಡ ಹಿಂದಿನಂತೆ ಸಿಇಟಿ ಕೊಟ್ಟರೆ ಹೆಚ್ಚು ಮಂದಿಗೆ ಪ್ರಯೋಜನವಾಗುತ್ತದೆ ಎಂದು ಹೇಳಿದರು. 

ಈಗಾಗಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅನ್ಯಾಯಕ್ಕೊಳಗಾದ ವಿದ್ಯಾರ್ಥಿಗಳ ಪರ ನಿಂತಿದ್ದಾರೆ. ಸಂಸತ್ತಿನಲ್ಲಿ ಧ್ವನಿಯಾಗುವುದಾಗಿ ಹೇಳಿದ್ದಾರೆ. ಅವರ ಹೋರಾಟಕ್ಕೆ ನಾವು ಬೆಂಬಲ ನೀಡುತ್ತಿದ್ದೇವೆ ಎಂದು ಹೇಳಿದರು. 

ವಿದ್ಯಾರ್ಥಿ ಸಂಘಟನೆಗಳು ಮೌನ..

ನೀಟ್ ಪ್ರಶ್ನೆ ಪತ್ರಿಕೆಯ ಸೋರಿಕೆಯಾಗಿದೆ. ಫಲಿತಾಂಶ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕುತ್ತು ತಂದಿದೆ. ಪರೀಕ್ಷೆಯಲ್ಲಿನ ಅವ್ಯವಹಾರಗಳು ವಿದ್ಯಾರ್ಥಿಗಳನ್ನು ಹತಾಶಗೊಳಿಸಿವೆ. ಈ ವಿವಾದಕ್ಕೆ ಸಂಬಂಧಿಸಿ ಎನ್‌ಎಸ್ಯುಐ ಹೊರತುಪಡಿಸಿ ಬೇರೆ ಯಾವುದೇ ವಿದ್ಯಾರ್ಥಿ ಸಂಘಟನೆಗಳು ಧ್ವನಿಯೆತ್ತದಿರುವುದು ದುರದೃಷ್ಟಕರ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಪೂಜಾರಿ ಹೇಳಿದರು. 

ಮಾಜಿ ಮೇಯರ್‌ಗಳಾದ ಶಶಿಧರ ಹೆಗ್ಡೆ, ಅಶ್ರಫ್, ಹರಿನಾಥ್, ಕಾಂಗ್ರೆಸ್ ಧುರೀಣರಾದ ಇಬ್ರಾಹೀಂ ಕೋಡಿಜಾಲ್, ಶಾಲೆಟ್ ಪಿಂಟೊ, ಶಬೀರ್ ಸಿದ್ಧಕಟ್ಟೆ, ನಝೀರ್ ಬಜಾಲ್ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article