
Mangalore: ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ
ಮಾನಸಿಕ ಒತ್ತಡ, ಖಿನ್ನತೆಯ ನಿವಾರಣೆಗೆ ಅಷ್ಟಾಂಗ ಯೋಗಗಳು ಸಹಕಾರಿ: ಗೋಪಾಲಕೃಷ್ಣ ದೇಲಂಪಾಡಿ
ಮಂಗಳೂರು: ವಿದ್ಯಾರ್ಥಿಗಳಲ್ಲಿ ಮಾನಸಿಕ ಒತ್ತಡ, ಖಿನ್ನತೆಯ ನಿವಾರಣೆಗೆ ಅಷ್ಟಾಂಗ ಯೋಗಗಳು ಸಹಕಾರಿ ಎಂದು ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ, ಅಂತರಾಷ್ಟ್ರೀಯ ಯೋಗ ತೀರ್ಪುಗಾರ ಗೋಪಾಲಕೃಷ್ಣ ದೇಲಂಪಾಡಿ ಹೇಳಿದರು.
ಅವರು ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜು, ಕೊಡಿಯಲ್ಬೈಲ್ನಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಸಂದರ್ಭದಲ್ಲಿ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿ, ಸಕಾರಾತ್ಮಕ ಮನಸ್ಸಿನ, ಆರೋಗ್ಯವಂತ ವ್ಯಕ್ತಿಯು ಸಮಾಜಕ್ಕೆ ಹೆಚ್ಚಿನ ಕೊಡುಗೆ ನೀಡಬಲ್ಲ. ಮಾನಸಿಕ ಮತ್ತು ದೈಹಿಕ ಶಾಂತಿ ಸಂಯಮಗಳನ್ನು ಕಾಯ್ದುಕೊಳ್ಳಲು ಸಾಧಿಸಲಾಗುವ ಉನ್ನತ ಜೀವನ ಶಿಕ್ಷಣವೇ ಯೋಗ. ಯೋಗ ಆರೋಗ್ಯವರ್ಧಕ ಹಾಗೂ ರೋಗ ನಿವಾರಕ. ಯೋಗ ಮತ್ತು ಧ್ಯಾನದ ಮೂಲಕ ಪ್ರತಿಯೊಬ್ಬರೂ ಉತ್ತಮ ಮನಸ್ಸು ಮತ್ತು ಆರೋಗ್ಯವನ್ನು ಪಡೆಯಬಹುದು ಎಂದರು.
‘ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ಎನ್ನುವ ಧ್ಯೇಯದೊಂದಿಗೆ ಯೋಗವನ್ನು ಸರ್ವರೂ ತಮ್ಮ ಜೀವನದಲ್ಲಿ ಅಭ್ಯಾಸ ಮಾಡಿಕೊಳ್ಳುವ ಮೂಲಕ ಆರೋಗ್ಯವಂತರಾಗಬೇಕು ಎಂದರು.
ವಿದ್ಯಾರ್ಥಿಗಳು ಯೋಗವನ್ನು ಪ್ರತಿನಿತ್ಯ ಅಭ್ಯಾಸ ಮಾಡುವುದರಿಂದ ಮನಸ್ಸನ್ನು ಏಕಾಗ್ರತೆಯಲ್ಲಿಡಲು ಸಾಧ್ಯ. ವಿಚಾರಗಳನ್ನು, ಚಿಂತನೆಗಳನ್ನು ಸುಲಭವಾಗಿ ತಿಳಿಯಲು ಸಹಕಾರಿಯಾಗುತ್ತದೆ. ಯೋಗ ನಮ್ಮ ಶರೀರ-ಮನಸ್ಸುಗಳಲ್ಲಿ ನವಚೈತನ್ಯವನ್ನು ಮೂಡಿಸುತ್ತದೆ. ಆ ನಿಟ್ಟಿನಲ್ಲಿ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜು ವಿದ್ಯಾರ್ಜನೆಯ ಜೊತೆಗೆ ಪ್ರತಿನಿತ್ಯಯೋಗವನ್ನೂ ಅಭ್ಯಾಸ ಮಾಡಿಸುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗೋಪಾಲಕೃಷ್ಣ ದೇಲಂಪಾಡಿ ಹಾಗೂ ಅವರ ಶಿಷ್ಯವೃಂದ ಸಂಸ್ಥೆಯ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಹಲವು ಯೋಗ ಪ್ರಾತ್ಯಕ್ಷಿಕೆಗಳನ್ನು ಪ್ರದರ್ಶಿಸಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ.ರಾಮಚಂದ್ರಭಟ್ ವಿಶ್ವ ಯೋಗ ದಿನಾಚರಣೆಯ ಕುರಿತು ಪ್ರಾಸ್ತಾವಿಕ ನುಡಿಗಳನ್ನಾಡಿ, ನಮ್ಮ ದೈನಂದಿನ ಚಟುವಟಿಕೆಯಲ್ಲಿ ನಾವು ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಬೋಧಕ ಮತ್ತು ಬೋಧಕೇತರ ವೃಂದದವರು ಉಪಸ್ಥಿತರಿದ್ದರು.