ಜಿಲ್ಲೆಯಲ್ಲಿ ತಗ್ಗಿದ ಮಳೆ ಅಬ್ಬರ: ನದಿಗಳ ಹರಿವು ಇಳಿಮುಖ

ಜಿಲ್ಲೆಯಲ್ಲಿ ತಗ್ಗಿದ ಮಳೆ ಅಬ್ಬರ: ನದಿಗಳ ಹರಿವು ಇಳಿಮುಖ


ಮಂಗಳೂರು: ಮೂರು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿದ್ದ ಮಳೆ ಕಳೆದ ರಾತ್ರಿಯಿಂದ ಕೊಂಚ ತಗ್ಗಿದೆ. ನೆರೆಯ ಭೀತಿಯಲ್ಲಿದ್ದ ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಇಳಿಮುಖವಾಗಿದೆ. 

ಕಳೆದ ಒಂದು ವಾರದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿತ್ತು. ಎಲ್ಲೆಡೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿತ್ತು. ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದವು. ನೀರು ನುಗ್ಗಿರುವ ಪ್ರದೇಶಗಳ ಮನೆ ಮಂದಿಯನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿತ್ತು. ವ್ಯಾಪಕ ಮಳೆಯಿಂದ ಮಂಗಳೂರು ಮತ್ತು ಬೆಂಗಳೂರನ್ನು ಸಂಪರ್ಕಿಸುವ ಮುಖ್ಯ ಎರಡೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚಾರಕ್ಕೆ ತೊಂದರೆ ಉಂಟಾದ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ನಲ್ಲಿ ಸಂಚಾರ ನಿಷೇಧಿಸಲಾಗಿದ್ದು, ಸಂಪಾಜೆ ಘಾಟಿಯಲ್ಲಿ ರಾತ್ರಿ ೮ರ ಬಳಿಕ ವಾಹನ ಸಂಚಾರಕ್ಕೆ ನಿಷೇಧಿಸಲಾಗಿತ್ತು. ಕೆತ್ತಿಕಲ್ ಪ್ರದೇಶದಲ್ಲಿ ಗುಡ್ಡ ಕುಸಿತದ ಭೀತಿಯೂ ಎದುರಾಗಿದೆ. 

ಈ ನಡುವೆ ನಿನ್ನೆ ರಾತ್ರಿಯಿಂದ ಮಳೆ ಕೊಂಚ ಬಿಡುವು ಪಡೆದಿದ್ದು, ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಇಳಿಮುಖವಾಗಿದೆ. ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆ ಬಿಡುವು ಪಡೆದಿರುವ ಹಿನ್ನೆಲೆಯಲ್ಲಿ ಅಸ್ತವ್ಯಸ್ತವಾಗಿರುವ ಜನಜೀವನವೂ ಸಮತೋಲನಕ್ಕೆ ಬರುವಂತಿದೆ. ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದೂ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಭಾರೀ ಮಳೆಯಿಂದಾಗಿ ಸಂಭವಿಸಿದ ಅವಘಡಗಳಿಂದ ಜಿಲ್ಲೆಯಲ್ಲಿ ಈವರೆಗೆ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಈ ಪೈಕಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ನಾಲ್ವರು ಸಾವನ್ನಪ್ಪಿದ್ದಾರೆ. 

ಶಿರಾಡಿ ಘಾಟ್ ಪ್ರದೇಶ ಮತ್ತು ಕುಮಾರ ಪರ್ವತ ಶ್ರೇಣಿ ಪ್ರದೇಶಗಳಲ್ಲಿ ವರುಣನ ಆರ್ಭಟದಿಂದ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು ಸುಬ್ರಹ್ಮಣ್ಯ-ಪಂಜ ರಸ್ತೆಗೆ ನೆರೆ ನೀರು ಬಂದಿದೆ. ಸ್ಥಳದಲ್ಲಿ ಪೊಲೀಸ್, ಗೃಹರಕ್ಷಕ ದಳ, ದೇಗುಲದ ಸುರಕ್ಷತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಯಾತ್ರಾರ್ಥಿಗಳು ನದಿತೀರಕ್ಕೆ ಹೋಗದಂತೆ ಎಚ್ಚರಿಕೆ ನೀಡಲಾಗುತ್ತಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಜಿಲ್ಲೆಯ ಶಾಲೆ, ಪಿಯುಸಿ ತರಗತಿಗಳಿಗೆ ರಜೆ ನೀಡಲಾಗಿತ್ತು. ಜಿಲ್ಲೆಗೆ ಆರೆಂಜ್ ಆಲರ್ಟ್ ಘೋಷಣೆಯಾಗಿದೆ. ಇಂದು ಬೆಳಗಿನ 8.30ರ ತನಕ ಜಿಲ್ಲೆಯಲ್ಲಿ ಕಳೆದ 24 ತಾಸಿನಲ್ಲಿ ಸರಾಸರಿ 56.9 ಮಿಲಿ ಮೀಟರ್ ಮಳೆಯಾಗಿದೆ. ನೇತ್ರಾವತಿ ನದಿ ನೀರಿನ ಮಟ್ಟ 7.5 ಮೀಟರ್ ಹರಿಯುತ್ತಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article