
Mangalore: ಅವಕಾಶಗಳನ್ನು ಬಳಸದಿರುವುದೇ ಬದುಕಿನ ಸೋಲು: ಸುರೇಶ್ ನಾವೂರು
Wednesday, July 3, 2024
ಮಂಗಳೂರು: ವಿದ್ಯಾರ್ಥಿಗಳು ಲಭ್ಯವಿರುವ ಅವಕಾಶಗಳನ್ನು ಬಳಸಿಕೊಂಡು ಯಶಸ್ಸನ್ನು ಸಾಧಿಸಬೇಕು. ವಿದ್ಯಾರ್ಥಿಗಳು ಆಸಕ್ತಿಯಿರುವ ಕ್ಷೇತ್ರಗಳನ್ನು ಆಯ್ದುಕೊಂಡು ಎದುರಾಗುವ ಸವಾಲುಗಳನ್ನು ಎದುರಿಸಿ ಜೀವನದಲ್ಲಿ ಯಶಸ್ಸನ್ನು ಸಾಧಿಸಬೇಕು. ಲಭ್ಯವಿರುವ ಅವಕಾಶಗಳನ್ನು ಬಳಸದೆ ಇರುವುದೇ ಬದುಕಿನ ಸೋಲು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಹಾಗೂ ವಕೀಲ ಸುರೇಶ್ ಬಿ. ನಾವೂರು ಅಭಿಪ್ರಾಯಪಟ್ಟರು.
ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಸ್ನಾತಕೋತ್ತರ ವಿಭಾಗಗಳ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಮಾತನಾಡಿ, ವಿದ್ಯಾರ್ಥಿಗಳು ವ್ಯಕ್ತಿತ್ವ ವಿಕಸನಕ್ಕೆ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಹೆಚ್ಚಿನ ಗಮನಹರಿಸಬೇಕು ಎಂದರು. ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕ ಡಾ. ಎ. ಸಿದ್ಧಿಕ್ ಸ್ನಾತಕೋತ್ತರ ವಿಭಾಗಗಳ ಕಾರ್ಯಸಾಧನೆಗಳ ವರದಿ ಮಂಡಿಸಿದರು.
ಕಾರ್ಯಕ್ರಮದಲ್ಲಿ ರ್ಯಾಂಕ್ ವಿಜೇತರು ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸ್ನಾತಕೋತ್ತರ ಅರ್ಥಶಾಸ್ತ್ರ ವಿಭಾಗದ ಸಂಯೋಜಕ ಪ್ರೊ. ರಾಮಕೃಷ್ಣ ಬಿ.ಎಂ., ಡಾ. ಮೀನಾಕ್ಷಿ ಎಂ.ಎಂ., ಉಪನ್ಯಾಸಕಿ ಶೀತಲ್ ಕೆ. ಸ್ನಾತಕೋತ್ತರ ವಿಭಾಗಗಳ ಸಂಯೋಜಕರುಗಳಾದ ಡಾ. ನಾಗರತ್ನ ಎನ್. ರಾವ್, ಡಾ. ಸಂಜಯ್ ಅಣ್ಣಾರಾವ್, ಡಾ. ಕೇಶವಮೂರ್ತಿ ಉಪಸ್ಥಿತರಿದ್ದರು.