ಪ್ರಕೃತಿ ವಿಕೋಪ ಸಂತ್ರಸ್ತರಿಗೆ ತಕ್ಷಣ ಪರಿಹಾರ ನೀಡಲು ಬಿಜೆಪಿ ಆಗ್ರಹ
ಮಂಗಳೂರು: ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯ ಅಬ್ಬರಕ್ಕೆ ಜಿಲ್ಲೆಯ ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಮಳೆಯ ಕಾರಣದಿಂದ ಗುಡ್ಡೆ ಕುಸಿತ, ನೆರೆನೀರು ಕೃಷಿಭೂಮಿ ಗಳಿಗೆ ನುಗ್ಗಿರುವ ಪರಿಣಾಮವಾಗಿ ಅಪಾರ ಪ್ರಮಾಣದ ಆಸ್ತಿ ಪಾಸ್ತಿ ಗಳು, ಬೆಳೆಹಾನಿ, ಸಾವು ನೋವುಗಳು ಸಂಭವಿಸಿದ್ದಕ್ಕಾಗಿ ದಕ್ಷಿಣ ಕನ್ನಡ ಜಿಲ್ಲಾ ಬಿ.ಜೆ.ಪಿ. ಅಧ್ಯಕ್ಷ ಸತೀಶ್ ಕುಂಪಲ ಖೇದ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯ ಜೀವನದಿ ನೇತ್ರಾವತಿ ಮತ್ತು ಕುಮಾರಧಾರ ನದಿಗಳಿಗೆ ಹೆಚ್ವಿನ ನೀರು ಹರಿದು ಬರುತ್ತಿರುವುದರಿಂದ ರೈತರು ಬೆಳೆಸಿರುವ ಕೃಷಿ ಜಮೀನುಗಳು ಜಲಾವೃತ ಗೊಂಡು ತೀವ್ರ ತರ ನಷ್ಟವಾಗಿದೆ.
ಜಿಲ್ಲೆಯ ವಿವಿಧ ತಾಲೂಕಿನಲ್ಲಿ ನಡೆದ ಪ್ರತ್ಯೇಕ ಮಳೆಯ ಅವಘಡದಲ್ಲಿ 9 ಜನರ ಪ್ರಾಣ ಬಲಿಯಾಗಿದೆ. ಹಲವಾರು ಜನರಿಗೆ ಗಂಭೀರ ಗಾಯಗಳಾಗಿದೆ. 10 ಕ್ಕೂ ಹೆಚ್ಚು ಮನೆಗಳು ಸಂಪೂರ್ಣ ಧರಶಾಯಿ ಯಾಗಿದೆ. 300 ಕ್ಕೂ ಹೆಚ್ಚು ಮನೆಗಳಿಗೆ ಭಾಗಶ ಹಾನಿ ಯಾಗಿದೆ ಎಂದು ವರದಿಯಾಗಿದ್ದು, ಪ್ರಕೃತಿ ವಿಕೋಪದಲ್ಲಿ ಸಂತ್ರಸ್ತರಾದವರಿಗೆ ಸರ್ಕಾರ ತಕ್ಷಣ ಪರಿಹಾರ ಧನವನ್ನು ನೀಡಿ ಆಸರೆ ಕಲ್ಪಿಸುವ ಕೆಲಸ ಮಾಡಬೇಕಿದೆ. ಸೂರು ಕಳೆದು ನಿರಾಶ್ರಿತರಾದ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ಹಣ, ರೈತರ ಬೆಳೆಹಾನಿಯ ಪರಿಹಾರ ಗಳನ್ನು ಸರ್ಕಾರ ಕೂಡಲೇ ನೀಡಬೇಕೆಂದು ಬಿಜೆಪಿ ಆಗ್ರಹಿಸುತ್ತದೆ. ಜಿಲ್ಲೆಯ ಉಸ್ತುವಾರಿ ಸಚಿವರು ಪ್ರಾಕೃತಿಕ ವಿಕೋಪ ಭಾದಕದ ಬಗ್ಗೆ ಅಧಿಕಾರಿಗಳ ಸಭೆಯನ್ನು ಕೂಡಲೇ ಕರೆದು ಜಿಲ್ಲಾಡಳಿತಕ್ಕೆ ಚುರುಕು ಮುಟ್ಟಿಸುವ ಕಾರ್ಯ ಮಾಡಬೇಕೆಂದು ಅವರು ಒತ್ತಾಯಿಸಿದ್ದಾರೆ.