
Udupi: ಮರ ಕಡಿದ ಗುತ್ತಿಗೆದಾರನಿಗೆ ದಂಡ
ಉಡುಪಿ: ಅನುಮತಿ ಇಲ್ಲದೆ ನಗರದ ಭುಜಂಗ ಪಾರ್ಕ್ನಲ್ಲಿದ್ದ ನಾಲೈದು ಮರಗಳನ್ನು ಕಡಿದು ಹಾಕಿದ ಗುತ್ತಿಗೆದಾರನ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಪೌರಾಯುಕ್ತರು ಗುತ್ತಿಗೆದಾರನನ್ನು ತರಾಟೆಗೆ ತೆಗೆದುಕೊಂಡು 25 ಸಾವಿರ ರೂ. ದಂಡ ವಿಧಿಸಿದ್ದಾರೆ.
ಪಾರ್ಕ್ನಲ್ಲಿ ಬೆಳೆದು ನಿಂತ ಮರಗಳನ್ನು ಅಪಾಯಕಾರಿ ಎಂಬ ನೆಲೆಯಲ್ಲಿ ಪಾರ್ಕ್ ನಿರ್ವಹಣೆ ಮಾಡುತ್ತಿರುವ ಗುತ್ತಿಗೆದಾರ ಸುರೇಶ್ ಎಂಬವರ ಸೂಚನೆಯಂತೆ ಕಾರ್ಮಿಕರು ಕಡಿಯುತ್ತಿದ್ದರು. ಅದಕ್ಕೆ ಪಾರ್ಕ್ನಲ್ಲಿ ವಾಯು ವಿಹಾರ ನಡೆಸುವ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೂ ಕಾರ್ಮಿಕರು ನಾಲೈದು ಮರಗಳನ್ನು ಕಡಿದು ಹಾಕಿದ್ದರು. ಮತ್ತೂ ಉಳಿದ ಮರಗಳನ್ನು ಕಡಿಯಲು ಸಿದ್ಧತೆ ಮಾಡುತ್ತಿದ್ದಾಗ ಸ್ಥಳಕ್ಕೆ ಆಗಮಿಸಿದ ಪೌರಾಯುಕ್ತ ರಾಯಪ್ಪ ಮರ ಕಡಿಯುವುದನ್ನು ತಡೆದರು.
ಈ ವೇಳೆ ಗುತ್ತಿಗೆದಾರನನ್ನು ಸ್ಥಳಕ್ಕೆ ಕರೆಸಿ, ಯಾವುದೇ ಅನುಮತಿ ಇಲ್ಲದೇ ಮರ ಕಡಿದಿರುವುದಕ್ಕೆ ತೀವ್ರ ತರಾಟೆಗೆ ತೆಗೆದುಕೊಂಡು, 25 ಸಾವಿರ ರೂ. ದಂಡ ಪಾವತಿಸುವಂತೆ ಮತ್ತು ಒಂದು ಮರದ ಬದಲು 10 ಸಸಿ ನೆಡುವಂತೆ ಗುತ್ತಿಗೆದಾರನಿಗೆ ಪೌರಾಯುಕ್ತರು ಸೂಚಿಸಿದರು.
ಈ ಸಂದರ್ಭದಲ್ಲಿ ಪರಿಸರ ಇಂಜಿನಿಯರ್ ಸ್ನೇಹಾ ಕೆ.ಎಸ್. ಇದ್ದರು.
ಮಾಹಿತಿ ತಿಳಿದು ಅರಣ್ಯ ಇಲಾಖೆಯ ಉಪವಲಯ ಅರಣ್ಯಾಧಿಕಾರಿಗಳೂ ಸ್ಥಳಕ್ಕೆ ಭೇಟಿ ನೀಡಿದರು.