ಹಿಂಸೆಗೆ ತಿರುಗಿದ ಕಾಂಗ್ರೆಸ್ ಪ್ರತಿಭಟನೆ: ಬಸ್ಸಿಗೆ ಕಲ್ಲು ತೂರಾಟ, ಮಹಿಳೆಗೆ ಗಾಯ
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿಸಿದ ರಾಜ್ಯಪಾಲರ ವಿರುದ್ಧ ಖಂಡನೆ ವ್ಯಕ್ತಪಡಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಇಂದು ಮಹಾನಗರ ಪಾಲಿಕೆ ಮುಂಭಾಗ ನಡೆದ ಪ್ರತಿಭಟನೆ ಹಿಂಸೆಯ ರೂಪ ಪಡೆಯಿತು. ಪ್ರತಿಭಟನೆಯ ವೇಳೆ ಉದ್ರಿಕ್ತ ಕಾರ್ಯಕರ್ತರು ಖಾಸಗಿ ಬಸ್ಸಿಗೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಬಸ್ಸಿನ ಮುಂಭಾಗದ ಗಾಜಿಗೆ ಹಾನಿಯಾಗಿದೆ. ಪ್ರಯಾಣಿಕ ಮಹಿಳೆಯೊಬ್ಬರಿಗೆ ಗಾಯವಾಗಿದೆ.
ಇದೇ ವೇಳೆ ಟಯರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಪಡಿಸಿಕೊಂಡರು. ತಕ್ಷಣ ಪೊಲೀಸರು ಟಯರ್ ಮೇಲೆ ನೀರು ಸಿಂಪಡಿಸಿ ಬೆಂಕಿಯನ್ನು ನಂದಿಸಿದರು. ಪ್ರತಿಭಟನೆಗೆ ಮೊದಲು ಮಂಗಳೂರಿನ ಲೇಡಿಹಿಲ್ ಬ್ರಹ್ಮಶ್ರೀ ನಾರಾಯಣಗುರು ವೃತ್ತದಿಂದ ನೂರಾರು ಪ್ರತಿಭಟನಾಕಾರರು ಲಾಲ್ಭಾಗ್ನ ಮನಪಾ ಕಚೇರಿ ಮುಂಭಾಗದವರೆಗೆ ಪಾದಯಾತ್ರೆ ನಡೆಸಿದರು. ಬಳಿಕ ಮನಪಾ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಆಕ್ರೋಶ ವ್ಯಕ್ತಪಡಿಸಿ, "ರಾಜ್ಯಪಾಲರು ಅಸಂವಿಧಾನಿಕವಾಗಿ ನಡೆದುಕೊಂಡಿದ್ದಾರೆ. ಮುಖ್ಯಮಂತ್ರಿ ಅವರಿಗೆ ಕಳಂಕ ತರಿಸಲು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ. ಸಿಎಂ ಮೇಲೆ ಈವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ರಾಜಕೀಯ ಪ್ರೇರಿತವಾಗಿ ರಾಜ್ಯದ ಜನತೆಗೆ, ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಸ್ಥರಗೊಳಿಸುವ ಪ್ರಯತ್ನ ನಡೆಯುತ್ತಿದೆ. ರಾಜ್ಯಪಾಲರು, ಸಿಬಿಐ, ಇಡಿ, ಐಟಿಯನ್ನು ದುರುಪಯೋಗ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಳಂಕ ತರಲು ಯತ್ನಿಸುತ್ತಿದ್ದಾರೆ. ಹೈಕಮಾಂಡ್ ಸೇರಿದಂತೆ ನಾವೆಲ್ಲರೂ ಸಿದ್ದರಾಮಯ್ಯ ಅವರೊಂದಿಗೆ ಇದ್ದೇವೆ. ರಾಷ್ಟ್ರಪತಿಗಳು ತಕ್ಷಣ ರಾಜ್ಯಪಾಲರನ್ನು ಹಿಂದಕ್ಕೆ ತೆಗೆದುಕೊಳ್ಳಬೇಕಿದೆ. ಇಲ್ಲದಿದ್ದಲ್ಲಿ ಪ್ರಾಸಿಕ್ಯೂಷನ್ ಆರ್ಡರ್ ಅನ್ನು ಹಿಂಪಡೆಯಬೇಕು. ಇಲ್ಲದಿದ್ದಲ್ಲಿ ರಾಷ್ಟ್ರಪತಿಗಳ ಬಳಿಗೆ ಹೋಗುವ ಅನಿವಾರ್ಯತೆಯಿದೆ ಎಂದು ಒತ್ತಾಯಿಸುತ್ತೇವೆ" ಎಂದರು.
ನಗರದ ಸ್ಟೇಟ್ಬ್ಯಾಂಕ್ನಿಂದ ಜೋಕಟ್ಟೆಗೆ ಸಂಚರಿಸುವ ಬಿಜೆಪಿ ನಾಯಕ ನೌಫಲ್ ಎಂಬವರಿಗೆ ಸೇರಿದ ‘ಮೌಲಾ’ 2ಸಿ ಸಿಟಿ ಬಸ್ಸಿಗೆ 10ರಿಂದ 15 ಮಂದಿ ಇದ್ದ ತಂಡ ಕಲ್ಲುತೂರಿದೆ. ಬಸ್ಸಿನಲ್ಲಿ ಹತ್ತು ಮಂದಿ ಪ್ರಯಾಣಿಕರಿದ್ದು, ಚಾಲಕನ ಸೀಟಿನ ಹಿಂದೆ ಕುಳಿತಿದ್ದ ಮಹಿಳೆಯೊಬ್ಬರಿಗೆ ಸಣ್ಣಪುಟ್ಟ ಗಾಯವಾಗಿದೆ. ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶಾಹುಲ್ ಹಮೀದ್, ಕಿಶೋರ್ ಶೆಟ್ಟಿ, ಅನ್ಸರ್ ಎಂಬ ಮೂವರನ್ನು ಬಂಧಿಸಲಾಗಿದೆ. ಉಳಿದವರಿಗಾಗಿ ಶೋಧ ಮುಂದುವರೆದಿದೆ.
ಮುಖಂಡರಾದ ರಮಾನಾಥ ರೈ, ಹರೀಶ್ ಕುಮಾರ್, ಐವನ್ ಡಿಸೋಜಾ, ಪದ್ಮರಾಜ್, ಶಕುಂತಳಾ ಶೆಟ್ಟಿ, ಅಶೋಕ್ ರೈ, ಇಬ್ರಾಹಿಮ್ ಕೋಡಿಜಾಲ್, ಮಿಥುನ್ ರೈ , ಪ್ರವೀಣ್ ಚಂದ್ರ ಆಳ್ವ, ಜಿ. ಎ. ಬಾವ, ಶಾಲೆಟ್ ಪಿಂಟೋ, ನವೀನ್ ಡಿ. ಸೋಜಾ, ರಮಾನಂದ ಪೂಜಾರಿ, ಪ್ರತಿಭಾ ಕುಳಾಯಿ, ಎಂ.ಎಸ್. ಮುಹಮ್ಮದ್, ವಿಶ್ವಾಸ್ ಕುಮಾರ್ ದಾಸ್, ಅಪ್ಪಿ ಮೊದಲಾದವರಿದ್ದರು.

