ಸರ್ಕಾರ ಅಸ್ಥಿರಗೊಳಿಸಲು ರಾಜ್ಯಪಾಲರ ಬಳಕೆ: ಡಾ. ಮಂಜುನಾಥ ಭಂಡಾರಿ
ಉಡುಪಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ತನಿಖೆಗೆ ಒಳಪಡಿಸಲು ಆದೇಶ ನೀಡುವ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಯತ್ನಿಸಿದೆ. ಅದಕ್ಕಾಗಿ ರಾಜ್ಯಪಾಲರನ್ನು ಬಳಸಿಕೊಳ್ಳಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಹೇಳಿದರು.
ಸೋಮವಾರ ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
ರಾಜ್ಯಪಾಲರು ಅಮಿಷ್ ಶಾ ಏಜೆಂಟರಂತೆ ವರ್ತಿಸಬಾರದು. ಪ್ರಾಸಿಕ್ಯೂಷನ್ ಅನುಮತಿ ಹಿಂಪಡೆಯಬೇಕು. ನೈತಿಕತೆ ಇದ್ದರೆ ರಾಜಿನಾಮೆ ನೀಡಿ ವಾಪಾಸು ಹೋಗಲಿ ಎಂದು ಆಗ್ರಹಿಸಿದರು.
ಮಾಜಿ ಸಂಸದ ಕೆ. ಜಯಪ್ರಕಾಶ ಹೆಗ್ಡೆ ಮಾತನಾಡಿ, ಸಿಎಂ ವಿರುದ್ದ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವ ವಿಚಾರವನ್ನು ರಾಜ್ಯಪಾಲರು ಗಂಭೀರವಾಗಿ ಪರಿಗಣಿಸಬೇಕಿತ್ತು. ಸಾಕಷ್ಟು ಕಾನೂನು ಚರ್ಚೆ ನಡೆಸಿ, ತೀರ್ಮಾನಿಸಬೇಕಿತ್ತು.
ಖಾಸಗಿ ವ್ಯಕ್ತಿಗಳು ದೂರು ನೀಡಿದ ದಿನವೇ ಶೋಕಾಸ್ ನೋಟಿಸ್ ಜಾರಿಗೊಳಿಸಿರುವುದು ಸರಿಯೇ? ಘನತೆವೆತ್ತ ರಾಜ್ಯಪಾಲರ ಈ ನಡೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಸಿಎಂ ಸಿದ್ದರಾಮಯ್ಯ ಅವರ ರಾಜಕೀಯದ ಕೊನೆಯ ದಿನಗಳಲ್ಲಿ ಅವರ ವ್ಯಕ್ತಿತ್ವಕ್ಕೆ ಕಪ್ಪುಚುಕ್ಕಿ ಇಡುವ ಪ್ರಯತ್ನ ಸಫಲವಾಗದು ಎಂದರು.
1984ರಿಂದ ಸಿದ್ದರಾಮಯ್ಯ ಜೊತೆ ಕೆಲಸ ಮಾಡಿದ್ದೇನೆ. ಹಿಂದುಳಿದ ವರ್ಗ, ಮೀನುಗಾರರು ಸೇರಿದಂತೆ ಹಣಕಾಸು ಸಚಿವರಾಗಿ ಅವರ ಅಧಿಕಾರಾವಧಿಯಲ್ಲಿ ಕೈಗೊಂಡ ತೀರ್ಮಾನಗಳು ವಿವಾದ ರಹಿತವಾಗಿದ್ದು, ಸಾಮಾನ್ಯ ಜನರಿಗೆ ಉಪಕಾರಿಯಾಗಿದ್ದವು ಎಂದರು.
ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ಪ್ರಸಾದ್ರಾಜ್ ಕಾಂಚನ್, ಮುನಿಯಾಲು ಉದಯ್ ಕುಮಾರ್ ಶೆಟ್ಟಿ, ಕಿಶನ್ ಹೆಗ್ಡೆ ಕೊಳ್ಕೆಬೈಲ್ ಮೊದಲಾದವರಿದ್ದರು.