ನಿವೃತ್ತಿ ಆರ್ಥಿಕ ಸೌಲಭ್ಯಕ್ಕಾಗಿ ಧರಣಿ ಸತ್ಯಾಗ್ರಹ
ಮಂಗಳೂರು: ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಲ್ಲಿ 2022ರ ಜು.1 ರಿಂದ 2024 ರ 31ರ ವರೆಗೆ ನಿವೃತ್ತರಾದ ನೌಕರರಿಗೆ 7ನೇ ವೇತನ ಆಯೋಗದಡಿ ನಿವೃತ್ತಿ ಆರ್ಥಿಕ ಸೌಲಭ್ಯ ನೀಡುವಂತೆ ಒತ್ತಾಯಿಸಿ ನಿವೃತ್ತ ನೌಕರರು ಅ. 1ರಂದು ವಿಶ್ವ ನಾಗರಿಕರ ದಿನಾಚರಣೆ ಸಂದರ್ಭ ಕಪ್ಪು ಪಟ್ಟಿ ಧರಿಸಿ ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ನಿವೃತ್ತ ನೌಕರರ ವೇದಿಕೆಯ ರಾಜ್ಯ ಮಹಾ ಪ್ರಧಾನ ಸಂಚಾಲಕ ಎಂ.ಪಿ.ಎಂ. ಷಣ್ಮುಖಯ್ಯ, ರಾಜ್ಯಾದ್ಯಂತ ಏಕಕಾಲಕ್ಕೆ ಎಲ್ಲ ಜಿಲ್ಲೆಗಳಲ್ಲೂ ಜಿಲ್ಲಾಧಿಕಾರಿ ಕಚೇರಿ ಎದುರು ಈ ಧರಣಿ ಸತ್ಯಾಗ್ರಹ ನಡೆಯಲಿದೆ ಎಂದರು.
ನಿರ್ದಿಷ್ಟ ಅವಧಿಯಲ್ಲಿ ನಿವೃತ್ತರಾದ ಸರ್ಕಾರಿ ನೌಕರರಿಗೆ 6ನೇ ವೇತನ ಆಯೋಗದ ಲೆಕ್ಕಾಚಾರದ ಅನುಸಾರ ಡಿ.ಸಿ.ಆರ್.ಜಿ. ಕಮ್ಯುಟೇಶನ್, ಗಳಿಕೆ ರಜೆ ನಗದೀಕರಣಗಳ ನಿವೃತ್ತಿ ಆರ್ಥಿಕ ಸೌಲಭ್ಯ ನೀಡಲಾಗಿದೆ. ಇದು ನೌಕರರಿಗೆ ಮಾಡಿರುವ ಅನ್ಯಾಯವಾಗಿದೆ. ಈ ಬಗ್ಗೆ ಈಗಾಗಲೇ ರಾಜ್ಯದ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರ ಮೂಲಕ ಮನವಿ ಸಲ್ಲಿಸಲಾಗಿದೆ. ಸೆ. 18ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಿವೃತ್ತ ನೌಕರರ ರಾಜ್ಯ ಮಟ್ಟದ ಪ್ರತಿಭಟನಾ ಸಮಾವೇಶ ನಡೆಸಿ ರಾಜ್ಯದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಉಭಯ ಸಂಘಟನೆಗಳ
ರಾಜ್ಯಾಧ್ಯಕ್ಷರಿಗೆ ಹಕ್ಕೊತ್ತಾಯ ಸಲ್ಲಿಸಲಾಗಿದೆ. ರಾಜ್ಯದ ಕಾರ್ಯಾಂಗದಲ್ಲಿ 7.50 ಲಕ್ಷ ನೌಕರರಲ್ಲಿ 1.50 ಲಕ್ಷಕ್ಕೂ ಅಧಿಕ ಖಾಲಿ ಹುದ್ದೆಗಳಿಗೆ 30 ರಿಂದ 40 ವರ್ಷ ಸುದೀರ್ಘ ಸೇವೆ ಸಲ್ಲಿಸಿದ ನಮ್ಮನ್ನು ಕಡೆಗಣಿಸಲಾಗಿದೆ. ಈ ಹಿನ್ನೆಲೆಯಲ್ಲಿ ಈ ಪ್ರತಿಭಟನೆಗೆ ಮುಂದಾಗಿರುವುದಾಗಿ ಅವರು ಹೇಳಿದರು.
ನಿವೃತ್ತ ಸರ್ಕಾರಿ ನೌಕರರಾದ ಮಂಜುಳಾ, ಮೋಹನ್ ಬಂಗೇರ, ಸಿರಿಲ್ ರಾಬರ್ಟ್ ಡಿಸೋಜಾ, ನಾರಾಯಣ, ಶಿವಶಂಕರ್, ಏಕಾಂತಪ್ಪ, ಬಿ.ಎಸ್. ನಾಗರಾಜ್ ಉಪಸ್ಥಿತರಿದ್ದರು.