ಮೀನು ಕಾರ್ಖಾನೆಯ ದುರ್ವಾಸನೆಗೆ ಕೂಡಲೇ ಜಿಲ್ಲಾಡಳಿತ ಕ್ರಮಕೈಗೊಳ್ಳಲಿ: ಶಾಸಕ ಕಾಮತ್
ಮಂಗಳೂರು: ಉಳ್ಳಾಲದ ಮೀನು ಕಾರ್ಖಾನೆಯಿಂದ ಹೊರ ಬರುತ್ತಿರುವ ದುರ್ವಾಸನೆಯಿಂದ ನಗರದ ಹಲವು ಪ್ರದೇಶಗಳ ಜನರು ತೀವ್ರ ಸಮಸ್ಯೆ ಎದುರಿಸುತ್ತಿದ್ದು, ಕೂಡಲೇ ಜಿಲ್ಲಾಡಳಿತ ಅಗತ್ಯ ಕ್ರಮಕೈಗೊಳ್ಳಬೇಕೆಂದು ಶಾಸಕ ವೇದವ್ಯಾಸ ಕಾಮತ್ ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
ನೇತ್ರಾವತಿ ನದಿಯ ದಡದಲ್ಲಿರುವ ಉಳ್ಳಾಲದ ಮೀನುಗಾರಿಕೆ ಕಾರ್ಖಾನೆಯಲ್ಲಿ ಮೀನುಗಳನ್ನು ಸಂಸ್ಕರಿಸುವಾಗ ಹೊರ ಬರುವ ದುರ್ವಾಸನೆಯಿಂದ ಬೋಳಾರ್, ಮುಳಿಹಿತ್ಲು, ಜೆಪ್ಪು ಮುಂತಾದ ಹಲವು ಪ್ರದೇಶದ ನಿವಾಸಿಗಳು ಉಸಿರಾಡಲೂ ಸಹ ಕಷ್ಟ ಪಡುತ್ತಿದ್ದಾರೆ. ಇಲ್ಲಿನ ಮಕ್ಕಳ, ವೃದ್ದರ, ರೋಗಿಗಳ ಸ್ಥಿತಿಯಂತೂ ಹೇಳತೀರದ್ದಾಗಿದೆ. ಸದಾ ಮೂಗು ಮುಚ್ಚಿಕೊಂಡೇ ಇರಬೇಕಾದ ಪರಿಸ್ಥಿತಿಯಿದ್ದು ಅವರಲ್ಲಿ ಅನೇಕರು ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಬಗ್ಗೆ ಅಲ್ಲಿನ ಅನೇಕರು ನನ್ನ ಗಮನಕ್ಕೆ ತಂದಿದ್ದು ಈ ಬಗ್ಗೆ ಮುಳಿಹಿತ್ಲು ಶ್ರೀ ಅಂಬಾಮಹೇಶ್ವರಿ ಸೇವಾ ಟ್ರಸ್ಟ್ ನವರು ಜಿಲ್ಲಾಧಿಕಾರಿಗಳಿಗೂ ದೂರು ನೀಡಿದ್ದಾರೆ.
ಇದು ಮುಂದಿನ ದಿನಗಳಲ್ಲಿ ಸ್ಥಳೀಯ ನಿವಾಸಿಗಳಿಗೆ ಇನ್ನಷ್ಟು ಗಂಭೀರ ಆರೋಗ್ಯ ಸಮಸ್ಯೆಯುಂಟುಮಾಡುವ ಸಾಧ್ಯತೆಯಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಿಲ್ಲಾಡಳಿತ, ಉಸ್ತುವಾರಿ ಸಚಿವರು ವಿಶೇಷ ಆದ್ಯತೆಯ ಮೇರೆಗೆ ಕ್ರಮಕೈಗೊಳ್ಳಬೇಕು ಆ ಮೂಲಕ ಸ್ವಚ್ಛ ಹಾಗೂ ಆರೋಗ್ಯಕರ ವಾತಾವರಣ ನಿರ್ಮಿಸಲು ಸಹಕರಿಸಬೇಕು ಎಂದು ಶಾಸಕರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.