ಏಕತೆಗಾಗಿ ಸಾಹಿತಿಗಳು ಕರ್ಯನಿರ್ವಹಿಸಬೇಕು: ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್
ಉಡುಪಿ: ಸಾಹಿತಿಗಳು, ಕಲಾವಿದರು ಮತ್ತು ಸಾಹಿತ್ಯ ಸಮ್ಮೇಳನಗಳು ಭಾರತೀಯರ ಏಕತೆಗಾಗಿ ಕೆಲಸ ಮಾಡಬೇಕು ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಆಶಿಸಿದರು.
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಉಡುಪಿ ಜಿಲ್ಲಾ ಘಟಕ ವತಿಯಿಂದ ಕುಂಜಿಬೆಟ್ಟು ಶಾರದಾ ಕಲ್ಯಾಣ ಮಂಟಪದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕರಾವಳಿಯ ಸಾಹಿತಿಗಳು, ಕಲಾವಿದರು, ಲೇಖಕರು, ಕವಿಗಳು, ಚುಟುಕು ಬರಹಗಾರರ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.
ಹಿಂದೆ ಕನ್ನಡ ಮಾತನಾಡುವವರ ಕ್ಷೇತ್ರಗಳು ಹರಿದು ಹಂಚಿಹೋಗಿದ್ದವು. ಅದನ್ನು ಒಗ್ಗೂಡಿಸುವ ಸಲುವಾಗಿ ಬೆಂಗಳೂರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ಸ್ಥಾಪಿಸಲಾಯಿತು. ಆ ಮೂಲಕ ಕನ್ನಡಿಗರನ್ನು ಒಂದುಗೂಡಿಸಲಾಗಿತ್ತು. ಇಂದು ಸಾಹಿತಿಗಳು ಭಾರತೀಯರ ಏಕತೆಗಾಗಿ ಕೆಲಸ ಮಾಡಬೇಕು ಎಂದರು.
ರಾಜಕೀಯಕ್ಕೆ ಬರುವ ಮೊದಲು ನಾನು ಯಾವ ಜಾತಿ ಎಂಬುದು ಗೊತ್ತಿರಲಿಲ್ಲ. ಆನಂತರ ತಿಳಿಯಿತು ಮೈಸೂರು ಅರಸು ಮನೆತನದವರು ಕೂಡಾ ಒಬಿಸಿಗೆ ಸೇರಿದವರೆಂದು. ಅಂಥ ಒಂದು ಸಮುದಾಯವನ್ನು ಪ್ರತಿನಿಧಿಸುತ್ತಿರುವುದಕ್ಕೆ ಹೆಮ್ಮೆ ಇದೆ ಎಂದರು.
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ, ಸಾಹಿತ್ಯ ಕಾರ್ಯಕ್ರಮಗಳ ಮೂಲಕ ಜನರ ಮನಸ್ಸನ್ನು ಗೆಲ್ಲುವ ಪ್ರಯತ್ನ ಶ್ಲಾಘನೀಯ ಎಂದರು.
ಈ ಮೊದಲು ಬಲಪಂಥೀಯ ಸಾಹಿತಿಗಳಿಗೆ ವೇದಿಕೆಗಳೇ ಇರಲಿಲ್ಲ. ಕೆಲವರನ್ನು ಓಲೈಕೆ ಮಾಡುತ್ತಿದ್ದ ಸಾಹಿತಿಗಳು ಬಿಜೆಪಿ ಮತ್ತು ಬಲಪಂಥೀಯರನ್ನು ತೆಗಳುವ ಕೆಲಸ ಮಾಡುತ್ತಿದ್ದರು ಎಂದು ವಿಷಾದಿಸಿದರು.
ಸಂಸದ ಕೋಟ ಶ್ರೀನಿವಾಸ ಪೂಜಾರಿ. ಶಾಸಕರಾದ ಗುರುರಾಜ ಗಂಟಿಹೊಳೆ, ಗುರ್ಮೆ ಸುರೇಶ್ ಶೆಟ್ಟಿ ಮತ್ತು ಕಿರಣ್ ಕುಮಾರ್ ಕೊಡ್ಗಿ, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಬಿಜೆಪಿ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ವಿಠಲ ಪೂಜಾರಿ, ಬಿಜೆಪಿ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಈಶ್ವರ ನಾಯ್ಕ್, ನಗರ ಬಿಜೆಪಿ ಅಧ್ಯಕ್ಷ ದಿನೇಶ ಅಮೀನ್, ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ರೈತ ಮೋರ್ಚಾ ಅಧ್ಯಕ್ಷ ಕಮಲಾಕ್ಷ ಹೆಬ್ಬಾರ್, ಪರಿಶಿಷ್ಟ ಜಾತಿ ಮೋರ್ಚಾದ ಚಂದ್ರ ಪಂಚವಟಿ, ಪರಿಶಿಷ್ಟ ಪಂಗಡದ ಕುಮಾರ್ ದಾಸ, ಅಲ್ಪಸಂಖ್ಯಾತ ಮೋರ್ಚಾದ ರುಡಾಲ್ಫ್ ಡಿ'ಸೋಜಾ ಮತ್ತು ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎ. ಎನ್. ಮಹಾಂತೇಶ್ ಇದ್ದರು.
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ವಿಜಯ್ ಕುಮಾರ್ ಕೊಡವೂರು ಸ್ವಾಗತಿಸಿದರು. ಜ್ಞಾನಸುಧಾ ಕಾಲೇಜಿನ ಶಮಿತಾ ನಿರೂಪಿಸಿದರು. ಒಬಿಸಿ ಜಿಲ್ಲಾ ಕಾರ್ಯದರ್ಶಿ ರವೀಂದ್ರ ತಿಂಗಳಾಯ ವಂದಿಸಿದರು.