ಬಾಕಿ ಅನುದಾನ ಬಿಡುಗಡೆಗೆ ಮುಖ್ಯಮಂತ್ರಿಗೆ ಯಶಪಾಲ್ ಸುವರ್ಣ ಮನವಿ
ಉಡುಪಿ: ರಾಜ್ಯ ಸರ್ಕಾರ ಶಾಲಾ ಕಾಲೇಜು ನಿರ್ವಹಣೆ ಅನುದಾನ, ಅಂಗನವಾಡಿ ಕಾರ್ಯಕರ್ತೆಯರ ಸಂಬಳ ಸಹಿತ ಹಲವು ಬಾಕಿ ಅನುದಾನವನ್ನು ತುರ್ತಾಗಿ ಬಿಡುಗಡೆ ಮಾಡುವಂತೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಮುಖ್ಯಮಂತ್ರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ನೀಡಲಾಗುವ ನಿರ್ವಹಣೆ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಲ್ಲಿ ವಿದ್ಯುತ್ ಬಿಲ್ ಪಾವತಿ ಮಾಡಲಾಗದೆ ಮೆಸ್ಕಾಂ ಅಧಿಕಾರಿಗಳು ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಸೂಚನೆ ನೀಡಿರುವ ಸನ್ನಿವೇಶ ನಿರ್ಮಾಣವಾಗಿದೆ.
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸಮರ್ಪಕವಾಗಿ ಗೌರವಧನ ಪಾವತಿಯಾಗದೆ ಸಂಕಷ್ಟಕ್ಕೊಳಗಾಗಿದ್ದಾರೆ.
ಪ್ರಾಕೃತಿಕ ವಿಕೋಪ ಹಾನಿ ಬಗ್ಗೆ ಜಿಲ್ಲಾಡಳಿತ ಪರಿಶೀಲನೆ ನಡೆಸಿ ಅಂದಾಜು 234 ಕೋಟಿ ರೂ. ನಷ್ಟ ಕುರಿತು ಸರಕಾರಕ್ಕೆ ವರದಿ ಸಲ್ಲಿಸಿದೆ. ಪ್ರಾಕೃತಿಕ ವಿಕೋಪದಿಂದ ಹಾನಿಗೊಳಗಾದ ರಸ್ತೆ, ಚರಂಡಿ, ಶಾಲೆ ಮತ್ತು ಅಂಗನವಾಡಿ ಇತ್ಯಾದಿ ಕಟ್ಟಡ ದುರಸ್ತಿಗೆ ಸರಕಾರ ತುರ್ತಾಗಿ ಅನುದಾನ ಬಿಡುಗಡೆ ಮಾಡಬೇಕಾಗಿದೆ.
ರಾಜ್ಯ ಸರಕಾರ ಕಳೆದ 4 ತಿಂಗಳಿನಿಂದ ಹೈನುಗಾರರಿಗೆ ನೀಡಬೇಕಾದ ಲೀಟರ್ಗೆ 5 ರೂ. ಪ್ರೋತ್ಸಾಹ ಧನ ಬಿಡುಗಡೆ ಮಾಡದೇ ಹೈನುಗಾರರು ಆರ್ಥಿಕವಾಗಿ ಸಂಕಷ್ಟಕ್ಕೀಡಾಗಿದ್ದು, ಆ ಮೊತ್ತವನ್ನೂ ಏಕ ಕಂತಿನಲ್ಲಿ ಬಿಡುಗಡೆ ಮಾಡಬೇಕು ಮತ್ತು ಸರಕಾರದ ವಿವಿಧ ನಿಗಮ, ಮಂಡಳಿಗಳ ಸಿಬ್ಬಂದಿಗಳಿಗೆ ಕಳೆದ 4-6 ತಿಂಗಳಿಂದ ವೇತನ ಪಾವತಿಯಾಗದೆ ತೊಂದರೆಗೊಳಗಾಗಿದ್ದು, ತಕ್ಷಣ ನಿಗಮ ಮಂಡಳಿಗಳ ಸಿಬ್ಬಂದಿಗಳ ವೇತನ ಪಾವತಿಗೆ ಶೀಘ್ರ ಕ್ರಮ ಕೈಗೊಳ್ಳುವಂತೆ ಶಾಸಕ ಯಶಪಾಲ್ ಸುವರ್ಣ ಮನವಿ ಮಾಡಿದ್ದಾರೆ.