ಕೇಂದ್ರದ ಸಂವಿಧಾನ ವಿರೋಧಿ ಧೋರಣೆ ಖಂಡನೀಯ: ಅಶೋಕ ಕುಮಾರ್ ಕೊವೂರು
Tuesday, September 24, 2024
ಉಡುಪಿ: ಚುನಾಯಿತ ಸರ್ಕಾರವನ್ನು ಹೇಗಾದರೂ ಮಾಡಿ ಬೀಳಿಸಿ, ಬಿಜೆಪಿ ಸರ್ಕಾರ ತರಲು ಪ್ರಯತ್ನಿಸುತ್ತಿರುವ ಬಿಜೆಪಿ ತನ್ನಿಂದ ಆಯ್ಕೆಯಾದ ರಾಜ್ಯಪಾಲರ ಮುಖಾಂತರ ಜನರಿಂದ ಆಯ್ಕೆಯಾದ ಸರಕಾರವನ್ನು ಬೀಳಿಸುವ ಷಡ್ಯಂತ್ರ ರೂಪಿಸುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ್ ಕೊವೂರು ಹೇಳಿದ್ದಾರೆ.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ ಹತ್ತು ವರ್ಷಗಳಲ್ಲಿ ಐಟಿ ಇಡಿ ಸಿಬಿಐ ಬಳಸಿ 443 ವಿರೋಧ ಪಕ್ಷದ ಶಾಸಕರನ್ನು ತನ್ನ ಪಕ್ಷಕ್ಕೆ ಸೇರಿಸಿಕೊಂಡಿದೆ. ಹಲವಾರು ಭ್ರಷ್ಟಾಚಾರ ಪ್ರಕರಣಗಳಿಂದ ಬೇಸತ್ತ ರಾಜ್ಯದ ಜನತೆ ಕಳೆದ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿದ್ದರು. ಚುನಾವಣೆಯಲ್ಲಿ ರಾಜ್ಯದ ಜನರನ್ನು ಎದುರಿಸಲಾಗದೆ ಮತ್ತು ಕಾಂಗ್ರೆಸ್ ಪಕ್ಷದ ಜನಪ್ರಿಯತೆ ಸಹಿಸದೆ ಬಿಜೆಪಿ ದ್ವೇಷ ರಾಜಕೀಯ ಮಾಡುತ್ತಿದೆ. ರಾಜ್ಯಪಾಲರು ಅರ್ಜಿ ಪಡೆಯುವಾಗ ಅದರ ಸತ್ಯಾಸತ್ಯತೆ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಆದರೆ, ಅವರು ದೆಹಲಿಯ ನಾಯಕರು ಹೇಳುವ ಮಾತನ್ನು ಕೇಳಿ ತಮ್ಮ ವ್ಯಕ್ತಿತ್ವಕ್ಕೆ ಧಕ್ಕೆ ತಂದುಕೊಂಡರು. ರಾಜ್ಯಪಾಲರ ಕ್ರಮ ಪ್ರಜಾಪ್ರಭುತ್ವದ ಕಗ್ಗೊಲೆ. ಇಂದು ಕರ್ನಾಟಕ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಕರಾಳ ದಿನವಾಗಿದ್ದು ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ಇರುವ ಸಿದ್ದರಾಮಯ್ಯ ಅವರನ್ನು ತುಳಿಯುವ ಪ್ರಯತ್ನ ಬಿಜೆಪಿಯಿಂದ ನಡೆಯುತ್ತಿದೆ ಎಂದು ಅಶೋಕ್ ಕುಮಾರ್ ಕೊಡುವೂರು ಪ್ರತಿಕ್ರಿಯಿಸಿದ್ದಾರೆ.