ಕರ್ನಾಟಕದಲ್ಲಿ ರಾಜ್ಯ ಸರಕಾರ ಸುಭದ್ರವಾಗಿದೆ: ಸಚಿವ ದಿನೇಶ್ ಗುಂಡೂರಾವ್
ಬಂಟ್ವಾಳ: ಕರ್ನಾಟಕದಲ್ಲಿ ಸರಕಾರ ಸುಭದ್ರವಾಗಿದೆ, ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದು, ಐದು ವರ್ಷ ಪೂರ್ಣಗೊಳಿಸಲಿದ್ದಾರೆ. ವಿಪಕ್ಷಗಳ ಅಪಪ್ರಚಾರಕ್ಕೆ ಕಿವಿಗೊಡದಿರಿ ಎಂದುದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಶುಕ್ರವಾರ ಸಂಜೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳಿಂದ ವಿಧಾನಪರಿಷತ್ಗೆ ನಡೆಯುವ ಉಪಚುನಾವಣೆ ಹಿನ್ನೆಲೆಯಲ್ಲಿ ಪಾಣೆಮಂಗಳೂರು ಮತ್ತು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಚುನಾಯಿತ ಪ್ರತಿನಿಧಿಗಳ ಮತ್ತು ಕಾರ್ಯಕರ್ತರ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರಾಜು ಪೂಜಾರಿ ಅವರು ಪಕ್ಷ ಹೆಮ್ಮೆ ಪಡುವ ಅಭ್ಯರ್ಥಿ, ಜನರ ಹತ್ತಿರ ಇರುವ ವ್ಯಕ್ತಿಯಾಗಿದ್ದು, ಉದಾಸೀನ ಮಾಡದೆ, ಎಲ್ಲರೂ ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಬೇಕು ಎಂದರು.
ಅಧ್ಯಕ್ಷತೆಯನ್ನು ಡಿಸಿಸಿ ಅಧ್ಯಕ್ಷ ಕೆ. ಹರೀಶ್ ಕುಮಾರ್ ವಹಿಸಿದ್ದರು. ಅಭ್ಯರ್ಥಿ ರಾಜು ಪೂಜಾರಿ ಮಾತನಾಡಿ, ಈ ಬಾರಿ ತನ್ನನ್ನು ಆಯ್ಕೆ ಮಾಡುವ ಮೂಲಕ ಪಕ್ಷವನ್ನು ಬಲಗೊಳಿಸಲು ಕರೆ ನೀಡಿದರು.
ಮಾಜಿ ಸಚಿವ ರಮಾನಾಥ ರೈ ಮಾತನಾಡಿ, ಚುನಾಯಿತ ಜನಪ್ರತಿನಿಧಿಗಳು ಹಾಗೂ ಪದಾಧಿಕಾರಿಗಳು ಪಕ್ಷದ ಋಣ ತೀರಿಸುವ ಕಾರ್ಯ ಮಾಡಬೇಕು. ಬಿಜೆಪಿ ಸೋಲಿಸುವುದು ನಮ್ಮ ಟಾರ್ಗೆಟ್ ಎಂದರು.
ವಿಧಾನಪರಿಷತ್ತು ಸದಸ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಡಾ. ಮಂಜುನಾಥ ಭಂಡಾರಿ ಮಾತನಾಡಿ, ರಾಜು ಪೂಜಾರಿ ಅವರ ಪಕ್ಷನಿಷ್ಠೆ ಕುರಿತು ವಿವರಿಸಿದರು.
ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಎ.ಬಾವಾ, ಪಕ್ಷ ಪ್ರಮುಖರಾದ ಅಶ್ವನಿ ಕುಮಾರ್ ರೈ, ಚಂದ್ರಪ್ರಕಾಶ್ ಶೆಟ್ಟಿ, ಪಿಯೂಸ್ ಎಲ್ ರೋಡ್ರಿಗಸ್, ಅಬ್ಬಾಸ್ ಆಲಿ, ಪದ್ಮನಾಭ ರೈ, ಸುಭಾಶ್ಚಂದ್ರ ಶೆಟ್ಟಿ, ಪದ್ಮಶೇಖರ ಜೈನ್, ಎಂ.ಎಸ್. ಮಹಮ್ಮದ್, ಮಾಯಿಲಪ್ಪ ಸಾಲಿಯಾನ್, ಅಶ್ವನಿ ಕುಮಾರ್ ರೈ, ಪುರಸಭಾಧ್ಯಕ್ಷ ವಾಸು ಪೂಜಾರಿ, ಬುಡಾ ಅಧ್ಯಕ್ಷ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ ಸ್ವಾಗತಿಸಿದರು. ಬಂಟ್ವಾಳ ಬ್ಲಾಕ್ ಅಧ್ಯಕ್ಷ ಬಾಲಕೃಷ್ಣ ಅಂಚನ್ ವಂದಿಸಿ, ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರ್ವಹಿಸಿದರು.