ಅ. 11ರಂದು ಕೇಂದ್ರ ಮೈದಾನದಲ್ಲಿ ‘ಕುಡ್ಲದ ಪಿಲಿ ಪರ್ಬ’
ಮಂಗಳೂರು: ತುಳುನಾಡಿನ ನೆಲದ ಪರಂಪರೆಯ ಗತವೈಭವವನ್ನು ಮರುಕಳಿಸುವ ನಿಟ್ಟಿನಲ್ಲಿ ಹಾಗೂ ರಾಷ್ಟ್ರಮಟ್ಟದ ಮಾನ್ಯತೆ ಪಡೆದುಕೊಳ್ಳುತ್ತಿರುವ ಹುಲಿವೇಷ ಕುಣಿತದ ಕಲಾ ಶ್ರೇಷ್ಠತೆಯನ್ನು ಮುಂದಿನ ತಲೆಮಾರಿಗೆ ದಾಟಿಸುವ ಸದುದ್ದೇಶದಿಂದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಅಕ್ಟೋಬರ್ 11ರಂದು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಮೂರನೇ ವರ್ಷದ ‘ಕುಡ್ಲದ ಪಿಲಿ ಪರ್ಬ’ ಸ್ಪರ್ಧೆ ನಡೆಯಲಿದೆ.
ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಪ್ರತಿಷ್ಠಾನದ ಗೌರವಾಧ್ಯಕ್ಷ ಗಿರಿಧರ ಶೆಟ್ಟಿ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮಾರ್ಗದರ್ಶನ ಹಾಗೂ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಆಯೋಜಿಸಿದ್ದ ಕುಡ್ಲದ ಪಿಲಿಪರ್ಬ ಬೆಳಗ್ಗೆ 10 ಗಂಟೆಗೆ ಉದ್ಘಾಟನೆಗೊಳ್ಳಲಿದೆ ಎಂದರು.
ಈ ಬಾರಿ ವಿಧಾನ ಪರಿಷ್ ಉಪ ಚುನಾವಣೆಯ ನೀತಿ ಸಂಹಿತೆ ಇರುವುದರಿಂದ ರಾತ್ರಿ 10 ಗಂಟೆಯೊಳಗೆ ಕಾರ್ಯಕ್ರಮ ಮುಕ್ತಾಯಗೊಳಿಸಬೇಕಾಗಿದೆ. ಹೀಗಾಗಿ ಸೀಮಿತವಾಗಿ ಕರಾವಳಿಯ
ಜನಪ್ರತಿಯ 10 ಹುಲಿ ವೇಷ ತಂಡಗಳಿಗೆ ಮಾತ್ರ ಸ್ಪರ್ಧೆಯಲ್ಲಿ ಅವಕಾಶ ಕಲ್ಪಿಸಲಾಗಿದೆ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ರಿಷಬ್ ಶೆಟ್ಟಿ, ರಾಜ್ ಬಿ.ಶೆಟ್ಟಿ, ಬಿಗ್ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ, ರಾಕೇಶ್ ಅಡಿಗ, ದೇವದಾಸ್ ಕಾಪಿಕಾಡ್, ಭೋಜರಾಜ್ ವಾಮಂಜೂರು ಮತ್ತಿತರ ಗಣ್ಯರು ಆಗಮಿಸಲಿದ್ದಾರೆ ಎಂದರು.
ಪಿಲಿಪರ್ಬದಲ್ಲಿ ಭಾಗವಹಿಸುವ ಹುಲಿವೇಷ ತಂಡಗಳು ವೈಭವದ ಮೆರವಣಿಗೆಯ ಮೂಲಕ ವೇದಿಕೆಗೆ ಪ್ರವೇಶ ಮಾಡಲಿದ್ದು, 20 ನಿಮಿಷಗಳ ಪ್ರದರ್ಶನ ನೀಡಲಿವೆ. ಪ್ರತಿ ತಂಡವೂ ಅಕ್ಕಿಮುಡಿ
ಹಾರಿಸುವುದು ಕಡ್ಡಾಯವಾಗಿದ್ದು, ಕರಿಹುಲಿಗಳು, ಮರಿಹುಲಿಗಳು, ಹಿಮ್ಮೇಳ, ಧರಣಿ ಮಂಡಲ ಹೀಗೆ ಇಡೀ ಕೂಟವು ವೈವಿಧ್ಯತೆಯಿಂದ ಕೂಡಿರಲಿದೆ. ಅಂತಿಮವಾಗಿ ಅತ್ಯುತ್ತಮ ಪ್ರದರ್ಶನ ನೀಡಿದ ತಂಡಗಳಿಗೆ ಪ್ರಥಮ 5 ಲಕ್ಷ ರೂ., ದ್ವಿತೀಯ 3 ಲಕ್ಷ ರೂ., ತೃತೀಯ 2 ಲಕ್ಷ ರೂ. ಬಹುಮಾನ ನೀಡಿ ಗೌರವಿಸಲಾಗುವುದು. ಅಲ್ಲದೆ ಶಿಸ್ತಿನ ತಂಡ, ಅತ್ಯುತ್ತಮ ಹುಲಿ ಮೆರವಣಿಗೆ ತಂಡ, ಪರ್ಬದ ಪಿಲಿ, ಕಪ್ಪು ಪಿಲಿ, ಮರಿ ಹುಲಿ, ಮುಡಿ, ತಾಸೆ, ಬಣ್ಣಗಾರಿಕೆ, ಧರಣಿ ಮಂಡಲ ವಿಭಾಗಗಳಿಗೆ ಪ್ರತ್ಯೇಕ ಬಹುಮಾನ ನೀಡಲಾಗುವುದು. ವೈಯಕ್ತಿಕ ಬಹುಮಾನವಾಗಿ ತಲಾ 15 ಸಾವಿರ ರೂ. ಹಾಗೂ ಪ್ರತಿ ಹುಲಿವೇಷ
ತಂಡಕ್ಕೆ 50 ಸಾವಿರ ರೂ. ಗೌರವ ಮೊತ್ತ ನೀಡಲಾಗುವುದು. ರೋಲಿಂಗ್ನ್ನು ನಿರಂತರ ಮೂರು ವರ್ಷ ಒಂದೇ ತಂಡ ಅಥವಾ ಆ ತಂಡವರು ಪಡೆದರೆ ಬಳಿಕ ಅವರಿಗೇ ಅದನ್ನು ನೀಡಲಾಗುವುದು ಎಂದರು
ಕಾರ್ಯಕ್ರಮಕ್ಕೆ ಆಗಮಿಸಲಿರುವ ಗಣ್ಯರು, ದಾನಿಗಳಿಗೆ ವಿಶೇಷ ಆಸನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸ್ಪರ್ಧಾಕೂಟ ನಡೆಯುವ ಮೈದಾನದಲ್ಲಿ 5 ಸಾವಿರ ಮಂದಿ ಕುಳಿತು ವೀಕ್ಷಿಸಬಹುದಾದ ಸುಸಜ್ಜಿತ ಪ್ರೇಕ್ಷಕ ಗ್ಯಾಲರಿ ನಿರ್ಮಿಸಲಾಗಿದೆ. ಅಲ್ಲಿಯೇ ದೊಡ್ಡ ಪರದೆಯ ವ್ಯವಸ್ಥೆಯನ್ನೂ ಮಾಡಲಾಗಿದ್ದು ಮನೆಯಲ್ಲಿಯೇ ಕುಳಿತು ಕಾರ್ಯಕ್ರಮ ವೀಕ್ಷಿಸಲು ನೇರ ಪ್ರಸಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಮೈದಾನದಲ್ಲಿ ಅಚ್ಚುಕಟ್ಟಾದ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದು, ಸ್ವಚ್ಛತೆಗೆ ವಿಶೇಷ ಆದ್ಯತೆ ನೀಡಲಾಗಿದೆ ಎಂದರು.
ಈ ಬಾರಿ ಕುಡ್ಲ ಪಿಲಿ ಪರ್ಬ ಸ್ಪರ್ಧೆಯಲ್ಲಿ ತೀರ್ಪುಗಾರರು ಇರುತ್ತಾರೆ. ಆದರೆ ಯಾವುದೇ ಗೊಂದಲಗಳಿಗೆ ಆಸ್ಪದ ಆಗಬಾರದು ಎಂಬ ಕಾರಣಕ್ಕೆ ತೃತೀಯ ಅಂಪೈರ್ರನ್ನು ಬಳಸಿಕೊಳ್ಳಲಾಗುತ್ತದೆ. ತೃತೀಯ ಅಂಪೈರ್ಗಳು ನೀಡಿದ ತೀರ್ಮಾನವನ್ನೇ ಅಂತಿಮ ಎಂದು ಪರಿಗಣಿಸಲಾಗುತ್ತದೆ. ಹುಲಿ ವೇಷ ತಂಡ ವೇದಿಕೆಗೆ ಆಗಮಿಸಿ, ಪ್ರದರ್ಶನ ನೀಡಿ ನಿರ್ಗಮಿಸುವ ವರೆಗಿನ ಎಲ್ಲವನ್ನೂ ವಿಡಿಯೋ ದಾಖಲಿಸಿ, ಸೂಕ್ಷ್ಮವಾಗಿ ಪರಿಶೀಲಿಸಲಿದೆ. ಬಳಿಕ ತೃತೀಯ ಅಂಪೇರ್ಗಳು ನೀಡುವ ಫಲಿತಾಂಶವನ್ನೇ ತೀರ್ಪುಗಾರರು ಪರಿಗಣಿಸಲಿದ್ದಾರೆ ಎಂದರು.
ಪ್ರತಿಷ್ಠಾನ ಅಧ್ಯಕ್ಷ ದಿವಾಕರ್ ಪಾಂಡೇಶ್ವರ್, ಪದಾಧಿಕಾರಿಗಳಾದ ಅಶ್ವಿತ್ ಕೊಟ್ಟಾರಿ, ಜಗದೀಶ್ ಕದ್ರಿ, ಲಲಿತ್ ಮೆಂಡನ್, ಶಾನ್ ಕೋಡಿಕೆರೆ ಉಪಸ್ಥಿತರಿದ್ದರು.