ಕಾಂತಾರ ಕ್ರೆಡಿಟ್ ದೈವನರ್ತಕ ಸಮುದಾಯಕ್ಕೆ, ಪ್ರಶಸ್ತಿ ದೈವದ ಪಾದಕ್ಕೆ..
Thursday, October 10, 2024
ಮಂಗಳೂರು: ಕಾಂತಾರ ಸಿನಿಮಾ ಯಶಸ್ಸಿನ ಎಲ್ಲ ಹೆಗ್ಗಳಿಕೆ, ಪ್ರಶಸ್ತಿಗಳು ದೈವ ನರ್ತಕ ಸಮುದಾಯಕ್ಕೆ ಸಲ್ಲಬೇಕು ಎಂದು ಕಾಂತಾರ ಸಿನಿಮಾಗೆ ರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿದ ನಿರ್ದೇಶಕ, ನಟ ರಿಷಬ್ ಶೆಟ್ಟಿ ಹೇಳಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರಲ್ಲಿ ಮಾತನಾಡಿದ ಅವರು, ಈ ರಾಷ್ಟ್ರೀಯ ಪ್ರಶಸ್ತಿ ನಮ್ಮ ಇಡೀ ತಂಡಕ್ಕೆ ಸಲ್ಲಬೇಕು. ಸುಮಾರು 200-300 ಜನ ಒಂದು ಕೋರ್ ಟೀಮ್ ಆಗಿ ಕೆಲಸ ಮಾಡಿದ್ದೇವೆ. ಇದು ದೈವದ ಬಗ್ಗೆ, ದೈವ ನರ್ತಕರ ಬಗ್ಗೆ, ಅವರ ಸಮುದಾಯದ ಬಗ್ಗೆ ಇರುವ ಸಿನಿಮಾ. ರಾಷ್ಟ್ರೀಯ ಪ್ರಶಸ್ತಿಯ ಹಿರಿಮೆ ದೈವ ನರ್ತಕ ಸಮುದಾಯಕ್ಕೆ ಸೇರಬೇಕು. ದೈವದ ಆಶೀರ್ವಾದ ಇಲ್ಲದಿದ್ದರೆ ಸಿನಿಮಾ ಈ ಮಟ್ಟಕ್ಕೆ ಹೋಗುತ್ತಿರಲಿಲ್ಲ. ದೈವದ ಆಶೀರ್ವಾದದಿಂದ ಸಿನಿಮಾ ಇಲಿ ತನಕ ಬಂದಿದೆ. ಆ ದೈವಕ್ಕೆ, ದೈವದ ಪಾದಕ್ಕೆ ಈ ಪ್ರಶಸ್ತಿಯನ್ನು ಅರ್ಪಿಸುತ್ತೇನೆ. ಚಿತ್ರ ಮಾಡುವಾಗ ಪ್ರಶಸ್ತಿ ಬರುತ್ತದೆ ಎಂದುಕೊಂಡಿರಲಿಲ್ಲ. ಇದೆಲ್ಲ ಜನರ ಪ್ರೀತಿಯಿಂದ ಸಾಧ್ಯವಾಗಿದೆ ಎಂದು ರಿಷಬ್ ಶೆಟ್ಟಿ ಸಂತಸದಿಂದ ಹೇಳಿದರು.