
ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ
Wednesday, October 23, 2024
ಮಂಗಳೂರು: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮವನ್ನು ನಗರದ ಖಾಸಗಿ ಕಾಲೇಜಿನಲ್ಲಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ರಾಣಿ ಚೆನ್ನಮ್ಮರ ಭಾವಚಿತ್ರಕ್ಕೆ ಹೂವು ಹಾಕಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಪತ್ರಾಂಕಿತ ಸಹಾಯಕರು ಹಾಗೂ ಬರಹಗಾರರಾದ ಬೆನೆಟ್ ಜಿ. ಅಮ್ಮಣ್ಣಾ ಮಾತನಾಡಿ ಕಿತ್ತೂರು ರಾಣಿ ಚೆನ್ನಮ್ಮ 200 ವರ್ಷಗಳ ಹಿಂದೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ದೇಶಕ್ಕಾಗಿ ಪ್ರಾಣ ತೆತ್ತ ವೀರ ವನಿತೆ ಎಂದು ಇತಿಹಾಸದಲ್ಲಿ ಅಮರರಾಗಿದ್ದಾರೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಶ್ರುತಿ ಶೆಟ್ಟಿ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಪ್ರೇರಕದಾಯಕವಾಗಿದ್ದು, ಸ್ವಾತಂತ್ರ್ಯ ಹೋರಾಟಗಾರರು ಸಲ್ಲಿಸಿದ ಸೇವೆ ಈ ಭೂಮಿಯಲ್ಲಿ ಅಜರಾಮರವಾಗಿ ಉಳಿಯುತ್ತದೆ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಪ್ರಾಸ್ತಾವಿಕ ಮಾತನಾಡಿದರು, ಉಪ ಪ್ರಾಂಶುಪಾಲ ಡಾ.ಪ್ರಾಭಾಕರ್ ನೀರ್ಮಾರ್ಗ ಸ್ವಾಗತಿಸಿದರು. ವಿದ್ಯಾರ್ಥಿನಿ ಮನ್ವಿತಾ ವಂದಿಸಿದರು.