ಮುಖ್ಯಮಂತ್ರಿ ನೈತಿಕತೆ ಕಳೆದುಕೊಂಡಿದ್ದಾರೆ: ನಳಿನ್ ಕುಮಾರ್ ಕಟೀಲು
ಮಂಗಳೂರು: ರಾಜ್ಯದಲ್ಲಿ ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರಕಾರ ಹಗರಣಗಳಿಂದ ಕೂಡಿದೆ. ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಬಿಡುಗಡೆ ಆಗುತ್ತಿಲ್ಲ. ಶಾಸಕರ ನಿಧಿಯ ಯೋಜನೆಗಳಿಗೂ ಅನುದಾನ ಬಿಡುಗಡೆ ಆಗಿಲ್ಲ. ಯಡಿಯೂರಪ್ಪ, ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯದಿಂದ ಜಿಲ್ಲೆಗೆ ಕೋಟ್ಯಂತರ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ಮಾಜಿ ಸಂಸದ, ಬಿಜೆಪಿ ನಾಯಕ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ದ. ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಸರಾ ಕಾರ್ಯಕ್ರಮದಲ್ಲೂ ಮುಖ್ಯಮಂತ್ರಿಗಳು ರಾಜಕೀಯ ಮಾತುಗಳನ್ನಾಡಿದ್ದಾರೆ ಏಂದು ದೂರಿದರು.
ರಾಜ್ಯ ಸರಕಾರದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ರೈತರ ಆತ್ಮಹತ್ಯೆ ದೊಡ್ಡ ಪ್ರಮಾಣದಲ್ಲಿ ನಡೆದಿದೆ. ಮುಖ್ಯಮಂತ್ರಿಯವರ ಮೇಲೆ ಎಫ್ಐಆರ್ ದಾಖಲಾದರೂ ಅವರು ರಾಜೀನಾಮೆ ಕೊಟ್ಟಿಲ್ಲ. ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ ಎಂದರು.
ನಾನು ವಿಧಾನ ಪರಿಷತ್ ಅಭ್ಯರ್ಥಿಯ ಆಕಾಂಕ್ಷಿ ಯಾಗಿರಲಿಲ್ಲ. ಪಕ್ಷ ನನಗೆ ಮೂರು ಬಾರಿ ಸಂಸದನಾಗುವ ಅವಕಾಶ, ರಾಜ್ಯಾಧ್ಯಕ್ಷನಾಗುವ ಅವಕಾಶ ಕೊಟ್ಟಿದೆ. ಅದಕ್ಕಾಗಿ ನಾನು ಪಕ್ಷಕ್ಕೆ ಋಣಿಯಾಗಿದ್ದೇನೆ. ಮುಂದೆಯೂ ಕಾರ್ಯಕರ್ತನಾಗಿ ಪಕ್ಷ ಸಂಘಟನೆಯ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ರಾಷ್ಟ್ರದಲ್ಲಿ ಗ್ರಾಮ ಪಂಚಾಯತುಗಳ ಬಲವರ್ಧನೆಗೆ ನರೇಂದ್ರ ಮೋದಿ ನಾಯಕತ್ವದ ಎನ್ ಡಿಎ ಸರಕಾರ ಕಾರಣ. ಗ್ರಾಮ ಪಂಚಾಯತುಗಳಿಗೆ ಕೇಂದ್ರದಿಂದ ನೇರವಾಗಿ ಅನದಾನ ಬಿಡುಗಡೆ, ನರೇಗಾ, ಸುವರ್ಣ ಗ್ರಾಮ ಮೊದಲಾದ ಕಾರ್ಯಕ್ರಮಗಳ ಜಾರಿಯಲ್ಲಿ ಬಿಜೆಪಿಯ ವಿಧಾನ ಪರಿಷತ್ ಶಾಸಕ ಕೋಟ ಶ್ರೀನಿವಾಸ ಪೂಜಾರಿ ಸಕ್ರಿಯರಾಗಿದ್ದರು. ಅವರು ಲೋಕಸಭೆಗೆ ಸ್ಪರ್ಧಿಸಿದ ಆಯ್ಕೆಯಾದ
ಕಾರಣ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನಡೆಯುತ್ತಿದೆ. ಕಿಶೋರ್ ಕುಮಾರ್ ಬಿಜೆಪಿ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. ಕಿಶೋರ್ ಕುಮಾರ್ ಅವರನ್ನು ಭಾರೀ ಅಂತರದಿಂದ ಗೆಲ್ಲಿಸಬೇಕೆಂದು ನಳಿನ್ ಕುಮಾರ್ ಮತದಾರರಲ್ಲಿ ಮನವಿ ಮಾಡಿದರು.
ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಉಪಾಧ್ಯಕ್ಷ ರಾಕೇಶ್ ರೈ, ಜಿಲ್ಲಾ ವಕ್ತಾರ ರಾಜಗೋಪಾಲ ರೈ, ವಿಧಾನ ಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು, ಜಿಲ್ಲಾ ಬಿಜೆಪಿ ಕೋಶಾಧಿಕಾರಿ ಸಂಜಯ ಪ್ರಭು ಉಪಸ್ಥಿತರಿದ್ದರು.