ನಾಳೆ ಮೂಡುಬಿದಿರೆಯಲ್ಲಿ ಗಾಂಧಿ ನಡಿಗೆ: ಪದ್ಮಪ್ರಸಾದ್ ಜೈನ್
Tuesday, October 1, 2024
ಮೂಡುಬಿದಿರೆ: ನಾಳೆ ಕಾಂಗ್ರೆಸ್ ಪಕ್ಷದ ವತಿಯಿಂದ ಮೂಡುಬಿದಿರೆಯಲ್ಲಿ ಗಾಂಧಿ ನಡಿಗೆ ನಡೆಯಲಿದೆ ಎಂದು ಕೆಪಿಸಿಸಿ ವಕ್ತಾರ ಪದ್ಮಪ್ರಸಾದ್ ಜೈನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಅವರು ಮಂಗಳವಾರ ಮೂಡುಬಿದಿರೆ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ 1924ರಲ್ಲಿ ಬೆಳಗಾವಿಯಲ್ಲಿ ಗಾಂಧಿ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಸಮಾವೇಶಕ್ಕೆ 100 ವರ್ಷ ಸಂದ ನೆನಪಿಗಾಗಿ ಕರ್ನಾಟಕ ಸರ್ಕಾರವು ಗಾಂಧಿ ನಡಿಗೆ ಕಾರ್ಯಕ್ರಮವನ್ನು ಗಾಂಧಿಜಯಂತಿ ದಿನವಾದ ನಾಳೆ (ಅ.2) ರಾಜ್ಯಾದ್ಯಂತ ಹಮ್ಮಿಕೊಂಡಿದ್ದು ಅದರಂತೆ ಮೂಡುಬಿದಿರೆಯಲ್ಲಿಮಾಜಿ ಸಚಿವ ಅಭಯಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರ ನೇತೃತ್ವದಲ್ಲಿ ಬೆಳಿಗ್ಗೆ 9.30ಕ್ಕೆ ಸ್ವರಾಜ್ಯ ಮೈದಾನದಿಂದ ಗಾಂಧಿ ನಡಿಗೆ ಆರಂಭವಾಗಲಿದ್ದು ಸಮಾಜ ಮಂದಿರದವರೆಗೆ ಪಾದಯಾತ್ರೆ ನಡೆಯಲಿದೆ.
ಬಳಿಕ 10 ಗಂಟೆಗೆ ಸಮಾಜ ಮಂದಿರದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಇದೇ ಸಂದರ್ಭದಲ್ಲಿ ರಾಜ್ಯ ಮಟ್ಟದಲ್ಲಿ ನಡೆಯುವ ಕಾರ್ಯಕ್ರಮವನ್ನು ನೇರ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ಪಕ್ಷದ ಕಾರ್ಯಕರ್ತರು, ಗಾಂಧಿ ತತ್ವದ ಅನುಯಾಯಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಅವರು ವಿನಂತಿಸಿದರು. ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಮೊಯಿದ್ದೀನ್ ಉಪಸ್ಥಿತರಿದ್ದರು.