
ಸೇತುವೆ ಶಿಥಿಲ: ಬದಲಿ ಸಂಚಾರ ವ್ಯವಸ್ಥೆ
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸೌಪರ್ಣಿಕಾ ನದಿಗೆ ಅಡ್ಡಲಾಗಿ ಕುಂದಾಪುರ-ಬೈಂದೂರು ರಾಷ್ಟ್ರೀಯ ಹೆದ್ದಾರಿ-67ರ ಮುಳ್ಳಿಕಟ್ಟೆ ಸಮೀಪದ ಅರಾಟೆಯಲ್ಲಿರುವ ಹಳೆಯ ಸೇತುವೆ (ಕೆಎಂ272+840 ಕೊಲ್ಲೂರು) ಮೇಲೆ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. 1966ರಲ್ಲಿ ನಿರ್ಮಿಸಲಾದ ಈ ಸೇತುವೆ ಇತ್ತೀಚಿಗೆ ತೀರಾ ಶಿಥಿಲಗೊಂಡಿದ್ದು ವಾಹನ ಸಂಚಾರಕ್ಕೆ ಯೋಗ್ಯವಲ್ಲದ ಕಾರಣ ಅಪಘಾತಗಳುಂಟಾಗದಂತೆ ತಡೆಯಲು ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ.
ಸುಮಾರು 58 ವರ್ಷ ಹಳೆಯದಾದ ಸೇತುವೆ ಇದಾಗಿದ್ದು, ಎಮ್/ಎಸ್ ಅಸ್ಸಿಸ್ಟೆಮ್ ಇಂಡಿಯಾ ಲಿಮಿಟೆಡ್ ಚೆನ್ನೈ ವತಿಯಿಂದ ನೇಮಿಸಲಾದ ತಜ್ಞರ ತಪಾಸಣಾ ವರದಿಯಲ್ಲಿ ಶಿಥಿಲಗೊಂಡಿರುವ ಬಗ್ಗೆ ತಿಳಿಸಿರುವ ಹಿನ್ನೆಲೆಯಲ್ಲಿ ಬಗ್ಗೆ ಅರಾಟೆ ಹಳೆ ಸೇತುವೆಯಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಿ ಪಕ್ಕದಲ್ಲಿರುವ ಹೊಸ ಸೇತುವೆಯಲ್ಲಿ ಸಂಚರಿಸಲು ತಿಳಿಸುವಂತೆ ಉಡುಪಿ ಜಿಲ್ಲಾಧಿಕಾರಿಯವರಲ್ಲಿ ಕೋರಿದ್ದರು.
ಈ ಕೋರಿಕೆಯನ್ವಯ ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿರಿಸಿಕೊಂಡು ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989ರ ಕಲಂ 221(ಎ)(2) & (5) ರನ್ವಯ ಕುಂದಾಪುರ-ಬೈಂದೂರು ರಾಷ್ಟ್ರೀಯ ಹೆದ್ದಾರಿ-66 ರ ಮುಳ್ಳಿಕಟ್ಟೆ ಸಮೀಪದ ಅರಾಟೆ ಹಳೆ ಸೇತುವೆಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಈ ಸೇತುವೆಯಲ್ಲಿ ಸಂಚರಿಸುವ ವಾಹನಗಳಿಗೆ ಪಕ್ಕದಲ್ಲೇ ಚತುಷ್ಪಥ ಹೆದ್ದಾರಿಯಲ್ಲಿ ನಿರ್ಮಾಣಗೊಂಡ ಹೊಸ ಸೇತುವೆಯಲ್ಲಿ ಬದಲಿ ಸಂಚಾರ ವ್ಯವಸ್ಥೆಯನ್ನು ಮಾಡುವಂತೆ ಸೂಚಿಸಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಆದೇಶಿಸಿದ್ದಾರೆ.
ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ ಹಿನ್ನೆಲೆಯಲ್ಲಿ ಕನ್ನಡಕುದ್ರು (ಮೂವತ್ತುಮುಡಿ) ಕ್ರಾಸ್ ಬಳಿಯಿಂದ ಅರಾಟೆಯವರೆಗೆ ಹಳೆಯ ಸೇತುವೆ ಇರುವ ಭಾಗದಲ್ಲಿ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಪಕ್ಕದಲ್ಲೇ ಚತುಷ್ಪಥ ಹೆದ್ದಾರಿ ಕಾಮಗಾರಿ ವೇಳೆ ನಿರ್ಮಾಣಗೊಂಡ ಹೊಸ ಸೇತುವೆಯಲ್ಲಿಯೇ ಎರಡೂ ಕಡೆಗಳ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಕುಂದಾಪುರದಿಂದ ಸಂಚರಿಸುವವರು ಕನ್ನಡಕುದ್ರು ಬಳಿಯಿಂದ ಅರಾಟೆಯವರೆಗೆ ಎಡ ಭಾಗದ ಹೊಸ ಹೆದ್ದಾರಿಯಲ್ಲಿಯೇ ಸಂಚರಿಸಬೇಕು. ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದ್ದು, ಹೊಸ ಸೇತುವೆಯಲ್ಲಿಯೇ ಎರಡೂ ಕಡೆಗಳ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.
ಕುಂದಾಪುರ ಭಾಗದಲ್ಲಿಯೇ ಇದು ಅತೀ ಉದ್ದದ ಸೇತುವೆಯಾಗಿದ್ದು, 615 ಮೀ. ಉದ್ದವಿದೆ. ಕಳೆದ ಮಳೆಗಾಲದಲ್ಲಿ ಇದೆ ರಾ.ಹೆ. 66ರ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕಾಳಿ ನದಿಗೆ ನಿರ್ಮಿಸಲಾಗಿದ್ದ ಹಳೆಯ ಸೇತುವೆಯು ಕುಸಿದು ಬಿದ್ದು, ಸಂಪರ್ಕವೇ ಕಡಿತಗೊಂಡಿತ್ತು. ಆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅರಾಟೆಯ ಈ ಹಳೆಯ ಸೇತುವೆಯ ಸಹಿತ ಬೇರೆ ಬೇರೆ ಹಳೆ ಸೇತುವೆಗಳ ಸಾಮರ್ಥ್ಯ ವರದಿ ಪಡೆಯಲಾಗಿದೆ ಎನ್ನಲಾಗುತ್ತಿದೆ.
ಇದು ರಾಷ್ಟ್ರೀಯ ಹೆದ್ದಾರಿ ಆಗಿರುವ ಕಾರಣ ಪ್ರತಿನಿತ್ಯ ಬಸ್ಗಳು, ಸರಕು ಸಾಗಾಟದ ಘನ ವಾಹನಗಳು ಸೇರಿದಂತೆ ಲಘು ವಾಹನಗಳು ಸಾವಿರಾರು ಸಂಖ್ಯೆಯಲ್ಲಿ ಸಂಚರಿಸುತ್ತಿರುತ್ತವೆ. ಮುಂದಿನ ಆದೇಶದವರೆಗೆ ಹೊಸ ಹೆದ್ದಾರಿಯ ಒಂದೇ ಮಾರ್ಗದಲ್ಲಿ ಎರಡೂ ಕಡೆಗಳ ವಾಹನಗಳನ್ನು ಬಿಡಲಾಗಿದ್ದು, ಒಂದೆರಡು ದಿನದಲ್ಲಿಯೇ ಸುಲಭ ಸಂಚಾರಕ್ಕೆ ಮಾರ್ಗ ಮಧ್ಯೆ ಅಳವಡಿಸಿದ ರಿಫ್ಲೆಕ್ಟರ್ ಕೋನ್ ಹಾನಿಗೀಡಾಗಿದೆ. ಸೇತುವೆ ಆರಂಭದಿಂದ ವಾಹನಗಳನ್ನು ತಿರುವು ಪಡೆದು ಇನ್ನೊಂದು ಭಾಗದಲ್ಲಿ ಹೆದ್ದಾರಿಗೆ ಜೋಡಿಸಿಕೊಳ್ಳುವ ಹಲವು ಮೀಟರ್ ಅಂತರದ ಸಂಚಾರ ನಿಜಕ್ಕೂ ತ್ರಾಸದಾಯಕವಾಗಿದೆ.ಹೊಸ ಕ್ರಮದ ಆದೇಶವಾಗಿದ್ದರೂ ಸೇತುವೆಯಲ್ಲಿ ರಾತ್ರಿ ವೇಳೆ ಸಮರ್ಪಕವಾದ ಬೆಳಕಿನ ವ್ಯವಸ್ಥೆ ಕಲ್ಪಿಸಿಲ್ಲ. ಸೇತುವೆಯಲ್ಲಿ ರಾತ್ರಿ ವೇಳೆ ಅಪಘಾತ ಸಂಭವಿಸದಂತೆ, ಜಾಗರೂಕತೆಯಿಂದ ಸಂಚರಿಸಬೇಕಾಗಿದೆ.