
ಡ್ರಗ್ಸ್ ಜಾಲದ ವಿರುದ್ಧ ಕರ್ನಾಟಕ ಸರ್ಕಾರ ಯುದ್ಧವನ್ನೇ ಸಾರಿದೆ: ಡಾ. ಜಿ. ಪರಮೇಶ್ವರ್
Saturday, November 30, 2024
ಮಂಗಳೂರು: ಡ್ರಗ್ಸ್ ಜಾಲದ ವಿರುದ್ಧ ಕರ್ನಾಟಕ ಸರ್ಕಾರ ಯುದ್ಧವನ್ನೇ ಸಾರಿದೆ. ಡ್ರಗ್ಸ್ ಪೂರೈಸುವ ಪೆಡ್ಲರ್ಗಳ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಶನಿವಾರ ಅವರು ಪೊಲೀಸ್ ವಸತಿಗೃಹ ಹಾಗೂ ನೂತನ ಠಾಣಾ ಕಟ್ಟಡಗಳ ಉದ್ಘಾಟನೆ ನೆರವೇರಿಸಿದ ಬಳಿಕ ಸುದ್ದಿಗಾರರಲ್ಲಿ ಮಾತನಾಡಿದರು.
ಡ್ರಗ್ಸ್ ಹಾವಳಿ ಬಗ್ಗೆ ಸದನದಲ್ಲಿ ಮುಖ್ಯಮಂತ್ರಿ ಮತ್ತು ನಾನು ಮಾತನಾಡಿದ್ದೇವೆ. ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಕಳೆದ ಒಂದು ವರ್ಷದಲ್ಲಿ ರಾಜ್ಯದಲ್ಲಿ 250 ಕೋಟಿ ರು. ಮೌಲ್ಯದ ಡ್ರಗ್ಸ್ನ್ನು ವಶಪಡಿಸಿ ನಾಶಪಡಿಸಲಾಗಿದೆ. ಡ್ರಗ್ಸ್ ಜಾಲದ ಹಿಂದಿನ ಶಕ್ತಿಗಳನ್ನು ಮಟ್ಟಹಾಕುವ ಕೆಲಸ ನಡೆಯುತ್ತಿದೆ. ಈ ಜಾಲದ ಹಿಂದೆ ಇಲ್ಲಿಗೆ ವಿದ್ಯಾಭ್ಯಾಸಕ್ಕೆ ಆಗಮಿಸುವ ವಿದೇಶಿ ವಿದ್ಯಾರ್ಥಿಗಳ ಕೈವಾಡವೂ ಪತ್ತೆಯಾಗುತ್ತಿದ್ದು, ಅಂತಹವರ ಬಗ್ಗೆ ಆಯಾ ದೇಶಗಳ ರಾಯಭಾರ ಕಚೇರಿಗೆ ಮಾಹಿತಿ ನೀಡಿ ಅವರ ನ್ನು ಗಡಿಪಾರು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಕೆಲವು ಕಡೆಗಳಲ್ಲಿ ಗೂಂಡಾ ಕಾಯ್ದೆ ಹಾಕಿದ್ದು, ಈ ವಿಚಾರದಲ್ಲಿ ಯಾವುದೇ ಹೊಂದಾಣಿಕೆಯ ಪ್ರಶ್ನೆಯೇ ಇಲ್ಲ ಎಂದರು.