ನ.19 ರಂದು ಉಪ್ಪಿನಂಗಡಿಯಲ್ಲಿ ರಾಷ್ಟ್ರೀಯ ಮಟ್ಟದ ವಿಶ್ವವಿದ್ಯಾನಿಲಯಗಳ ಕ್ರಾಸ್ಕಂಟ್ರಿ ಸ್ಪರ್ಧೆ
ಪುತ್ತೂರು: ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಮತ್ತು ಮಂಗಳೂರು ವಿಶ್ವವಿದ್ಯಾನಿಲಯಗಳ ಸಹಯೋಗದಲ್ಲಿ ಉಪ್ಪಿನಂಗಡಿಯಲ್ಲಿ ನ.19ರಂದು ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯಗಳ ಪುರುಷರ ಕ್ರಾಸ್ಕಂಟ್ರಿ ಚಾಂಪಿಯನ್ಶಿಫ್ ಕ್ರೀಡಾಕೂಟ ನಡೆಯಲಿದೆ. ದೇಶದ 150 ವಿಶ್ವವಿದ್ಯಾನಿಲಯಗಳ 1000 ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದು ಕ್ರೀಡಾಕೂಟ ಸಂಘಟನಾ ಸಮಿತಿ ಅಧ್ಯಕ್ಷರಾದ ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಅವರು ಶನಿವಾರ ಶಾಸಕರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಭಾರತೀಯ ವಿಶ್ವವಿದ್ಯಾನಿಯಲಗಳ ಒಕ್ಕೂಟದ ನಿರ್ದೇಶನದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಈ ಕ್ರೀಡಾಕೂಟವನ್ನು ವಹಿಸಿಕೊಂಡು ಉಪ್ಪಿನಂಗಡಿ ಕಾಲೇಜ್ಗೆ ಜವಾಬ್ದಾರಿಯನ್ನು ನೀಡಿರುತ್ತದೆ. ಜಿಲ್ಲೆಯಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಮಟ್ಟದ ಈ ಕ್ರೀಡಾಕೂಟ ಉಪ್ಪಿನಂಗಡಿಯಲ್ಲಿ ಆಯೋಜಿಸಲಾಗುತ್ತಿದೆ. ಈಗಾಗಲೇ ಉಪ್ಪಿನಂಗಡಿ ವ್ಯಾಪ್ತಿಯ ಬಹುತೇಕ ಶಿಕ್ಷಣ ಸಂಸ್ಥೆಗಳಲ್ಲಿ ಕ್ರೀಡಾಪಟುಗಳಿಗೆ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳು ಹಾಗೂ ಅಧಿಕಾರಿಗಳಿಗೆ ಉಚಿತ ಊಟೋಪಚಾರದ ವ್ಯವಸ್ಥೆ ಮಾಡಲಾಗಿದೆ. ಆಗಮಿಸುವವರಿಗೆ ಮಂಗಳೂರು ರೈಲ್ವೇ ನಿಲ್ದಾಣ ಮತ್ತು ವಿಮಾನ ನಿಲ್ದಾಣಗಳಿಂದ ಉಪ್ಪಿನಂಗಡಿಗೆ ಆಗಮಿಸಲು ವಾಹನದ ವ್ಯವಸ್ಥೆ ಮಾಡಲಾಗಿದೆ.
ನ.19ರಂದು ಮದ್ಯಾಹ್ನ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಾಲಯದಿಂದ ಕ್ರೀಡಾಜ್ಯೋತಿಯ ಭವ್ಯ ಮೆರವಣಿಗೆಯು ಉಪ್ಪಿನಂಗಡಿ ಪೇಟೆಯಲ್ಲಿ ಸಾಗಿ ಕಾಲೇಜು ಆವರಣಕ್ಕೆ ತಲುಪಲಿದೆ. ಸಂಜೆ 4 ಗಂಟೆಗೆ ಕ್ರಾಸ್ಕಂಟ್ರಿ ಸ್ಪರ್ಧೆ ಆರಂಭಗೊಳ್ಳಲಿದೆ. ಸಂಜೆ 5.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ರಾಜ್ಯ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಉದ್ಘಾಟಿಸಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್. ದ.ಕ. ಸಂಸದ ಬ್ರಿಜೇಶ್ ಚೌಟ, ಮಂಗಳೂರು ವಿಶ್ವವಿದ್ಯಾನಿಲಯದ ಉಪ ಕುಲಪತಿ ಪಿ.ಎಲ್ ಧರ್ಮ ಮತ್ತಿತರರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಘಟನಾ ಸಮಿತಿ ಕಾರ್ಯಾಧ್ಯಕ್ಷ ಚಂದ್ರಹಾಸ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಡಾ. ರಾಜಾರಾಂ ಕೆ ವಿ, ಪ್ರಾಂಶುಪಾಲ ಪ್ರೊ. ರವಿರಾಜ್. ಉಪನ್ಯಾಸಕ ಡಾ. ಪ್ರಮೋದ್ ಎಂ ಜಿ ಉಪಸ್ಥಿತರಿದ್ದರು.