
ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ಗ್ರಂಥಾಲಯ ಸಪ್ತಾಹ ಮತ್ತು ಪುಸ್ತಕ ಪ್ರದರ್ಶನ ಉದ್ಘಾಟನೆ
ಪುತ್ತೂರು: ಪುಸ್ತಕಗಳು ಮತ್ತು ಓದು ಜೀವನದ ಅವಿಭಾಜ್ಯ ಅಂಗ. ವಿದ್ಯಾರ್ಥಿಗಳು ಗ್ರಂಥಾಲಯದಲ್ಲಿರುವ ಪುಸ್ತಕಗಳನ್ನು ಓದುವ ಅಭ್ಯಾಸವನ್ನು ರೂಢಿಸಿಕೊಳ್ಳುವ ಮೂಲಕ ತಮ್ಮ ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು. ಅದರಲ್ಲೂ ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಮೊಬೈಲ್ ಗೇಮ್ಗಳಲ್ಲಿ ಕಾಲ ಕಳೆಯುವ ಬದಲಿಗೆ ಉತ್ತಮ ಪುಸ್ತಕಗಳನ್ನು ತಮ್ಮ ಬದುಕಿನ ಒಡನಾಡಿಯನ್ನಾಗಿಸಿಕೊಳ್ಳಬೇಕು ಎಂದು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ವಂ. ಡಾ. ಆಂಟನಿ ಪ್ರಕಾಶ್ ಮೊಂತೇರೊ ಹೇಳಿದರು.
ನವಂಬರ್ 14 ರಿಂದ ನವಂಬರ್ 20 ರವರೆಗೆ ಭಾರತದಲ್ಲಿ ಆಚರಿಸಲ್ಪಡುವ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಕಾಲೇಜು ಗ್ರಂಥಾಲಯದಲ್ಲಿ ನವಂಬರ್ 14 ರಿಂದ 23 ರವರೆಗೆ ಆಯೋಜಿಸಿದ ಪುಸ್ತಕ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಂಥಾಲಯದಲ್ಲಿ ನಮ್ಮ ಜೀವನದ ಮೌಲ್ಯಗಳನ್ನು ಹೆಚ್ಚಿಸಿಕೊಳ್ಳುವ ಪುಸ್ತಕಗಳ ಆಸ್ತಿಯೇ ಇದೆ. ವಿದ್ಯಾರ್ಥಿಗಳಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸ ಕ್ಷೀಣಿಸುತ್ತಿದ್ದು, ಅವರಲ್ಲಿ ಓದುವ, ಬರೆಯುವ ಕ್ರಿಯಾಶೀಲತೆಯನ್ನು ಬೆಳೆಸುವ ಸದುದ್ದೇಶದಿಂದ ಕಾಲೇಜಿನಲ್ಲಿ ನವೆಂಬರ್ ತಿಂಗಳನ್ನು ‘ಗ್ರಂಥಾಲಯ ತಿಂಗಳಾಗಿ’ ಘೋಷಿಸಿದ್ದು, ಗ್ರಂಥಾಲಯ ಸಪ್ತಾಹದ ಅಂಗವಾಗಿ ವಿದ್ಯಾರ್ಥಿಗಳಿಗೆ ಪುಸ್ತಕ ವಿಮರ್ಶೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಮತ್ತು ಹತ್ತು ದಿವಸದ ಪುಸ್ತಕ ಪ್ರದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಲೆ, ಸಾಹಿತ್ಯ, ವ್ಯಕ್ತಿತ್ವ ವಿಕಸನ, ಸ್ಪರ್ಧಾತ್ಮಕ ಮತ್ತು ಆತ್ಮಚರಿತ್ರೆಗಳನ್ನೊಳಗೊಂಡಿರುವ ಸುಮಾರು 500ಕ್ಕೂ ಮಿಕ್ಕಿದ ಪುಸ್ತಕಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ.
ಕಾಲೇಜಿನ ಆಯ್ಕೆ ಶ್ರೇಣಿ ಗ್ರಂಥಪಾಲಕ ಅಬ್ದುಲ್ ರಹಿಮಾನ್ ಅವರು ಸ್ವಾಗತಿಸಿದರು. ಸ್ನಾತಕೋತ್ತರ ವಿಭಾಗದ ಗ್ರಂಥಪಾಲಕ ಮನೋಹರ್ ಎಸ್.ಜಿ. ವಂದಿಸಿ, ಕನ್ನಡ ವಿಭಾಗದ ಉಪನ್ಯಾಸಕಿ ಡಾ. ಮೈತ್ರಿ ಭಟ್ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಗ್ರಂಥಾಲಯ ಸಿಬ್ಬಂದಿಗಳಾದ ಝೀಟಾ ನೊರೋನ್ಹಾ, ಕ್ಯಾಥರೀನ್ ರೆಬೆಲ್ಲೋ ಹಾಗೂ ವಿದ್ಯಾರ್ಥಿಗಳಾದ ಜೀವನ್, ಲವಿತ್ ಕುಮಾರ್, ಗಾಯತ್ರಿ ಸಹಕರಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪ ಪ್ರಾಂಶುಪಾಲ ಡಾ. ವಿಜಯಕುಮಾರ್ ಮೊಳೆಯಾರ, ಸಾರ್ವಜನಿಕ ಸಂಪರ್ಕಾಧಿಕಾರಿ ಭಾರತಿ ಎಸ್. ರೈ, ಕಚೇರಿ ಅಧೀಕ್ಷಕಿ ರುಫೀನಾ ಡಿ’ಸೋಜಾ, ಗ್ರಂಥಾಲಯ ಸಲಹಾ ಸಮಿತಿಯ ಸದಸ್ಯರು, ಸ್ನಾತಕ ಮತ್ತು ಸ್ನಾತಕೋತ್ತರ ವಿಭಾಗದ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.