ಕೈಗಾರಿಕಾ ವಿಪತ್ತು ನಿರ್ವಹಣೆ: ಸ್ಥಳೀಯ ಸಮಿತಿ ರಚನೆಗೆ ಜಿಲ್ಲಾಧಿಕಾರಿ ಸೂಚನೆ
ಮಂಗಳೂರು: ಕೈಗಾರಿಕೆ ಮತ್ತು ಕಾರ್ಖಾನೆಗಳಲ್ಲಿ ಅನಾಹುತ ಮತ್ತು ವಿಪತ್ತುಗಳ ನಿರ್ವಹಣೆಗೆ ಸ್ಥಳೀಯ ಮಟ್ಟದಲ್ಲಿ ಬಿಕ್ಕಟ್ಟು ಪರಿಹಾರ ಸಮಿತಿಗಳನ್ನು ರಚಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಸೂಚಿಸಿದ್ದಾರೆ
ಅವರು ಪಣಂಬೂರು ಎಂಸಿಎಫ್ನಲ್ಲಿ ಬುಧವಾರ ನಡೆದ ದಕ್ಷಿಣ ಕನ್ನಡ ಜಿಲ್ಲಾ ಬಿಕ್ಕಟ್ಟು ಪರಿಹಾರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪಣಂಬೂರು, ಬೈಕಂಪಾಡಿ, ಸುರತ್ಕಲ್ ಆಸುಪಾಸಿನಲ್ಲಿ ಹಲವು ಸಣ್ಣ, ಮಧ್ಯಮ ಮತ್ತು ಬೃಹತ್ ಕೈಗಾರಿಕೆಗಳಿವೆ. ಯಾವುದೇ ರೀತಿಯಲ್ಲಿ ಎದುರಾಗಬಹುದಾದ ವಿಪತ್ತು ಹಾಗೂ ದುರ್ಘಟನೆಗಳ ನಿರ್ವಹಣೆಗೆ ಕೈಗಾರಿಕೆಗಳು ಸನ್ನದ್ಧವಾಗಿರಬೇಕು ಈ ನಿಟ್ಟಿನಲ್ಲಿ ತಮ್ಮದೇ ಆದ ವಿಪತ್ತು ನಿರ್ವಹಣೆ ಯೋಜನೆಯನ್ನು ಮಾಡಿಕೊಂಡಿರಬೇಕು ಎಂದು ಅವರು ತಿಳಿಸಿದರು.
ಸ್ಥಳೀಯ ಮಟ್ಟದಲ್ಲಿ ಆಯಾ ಸ್ಥಳಕ್ಕೆ ಹೊಂದಿಕೊಂಡಂತೆ ಕೈಗಾರಿಕಾ ಪ್ರತಿನಿಧಿಗಳು ಸ್ಥಳೀಯ ಸಂಸ್ಥೆಗಳು ಮತ್ತು ಸರಕಾರಿ ಆಸ್ಪತ್ರೆಗಳ ವೈದ್ಯರನ್ನೊಳಗೊಂಡ, ಸ್ಥಳಿಯ ಬಿಕ್ಕಟ್ಟು ನಿರ್ವಹಣಾ ಸಮಿತಿಯನ್ನು ರಚಿಸಬೇಕು. ಇದರಿಂದ ಕೈಗಾರಿಕಾ ಪ್ರದೇಶದಲ್ಲಿ ಯಾವುದೇ ವಿಪತ್ತು ಎದುರಾದರೂ ಅದನ್ನು ನಿರ್ವಹಿಸುವುದರ ಜೊತೆಗೆ ಇತರ ಕೈಗಾರಿಕೆ ಘಟಕಗಳಿಗೆ ಹರಡದಂತೆ ನಿರ್ವಹಿಸಲು ಸಾಧ್ಯವಾಗಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಕೈಗಾರಿಕೆಗಳು ಸ್ಥಳೀಯ ಪ್ರದೇಶಕ್ಕೆ ಅನುಗುಣವಾಗಿ ಬಿಕ್ಕಟ್ಟು ನಿರ್ವಹಣೆ ಯೋಜನೆ ತಯಾರಿಸಿ ಅದನ್ನು ಜಿಲ್ಲಾ ವಿಪತ್ತು ನಿರ್ವಹಣೆ ಯೋಜನೆಯೊಂದಿಗೆ ಸೇರಿಸಿಕೊಳ್ಳಬೇಕು. ಕೈಗಾರಿಕಾ ಪ್ರದೇಶಗಳಲ್ಲಿ ಸಂಭವಿಸಬಹುದಾದ ಅನಿರೀಕ್ಷಿತ ಅನಾಹುತಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಇದು ಪ್ರಮುಖವಾಗಲಿದೆ. ರಕ್ಷಣಾ ಸಲಕರಣೆಗಳು ಮಾನವ ಶಕ್ತಿ ಹಾಗೂ ಇತರ ಸಂಪನ್ಮೂಲಗಳ ವಿವರಗಳನ್ನು ಕೈಗಾರಿಕಾ ಘಟಕಗಳು ಆಗಿಂದಾಗೆ ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ನೈಸರ್ಗಿಕ ವಿಪತ್ತು ಕೈಗಾರಿಕಾ ಅಪಾಯ ಮತ್ತು ಸಂಭವನೀಯ ವಿಪತ್ತುಗಳು ಸಂಭವಿಸಿದಾಗ ಕೈಗೊಳ್ಳುವ ಕಾರ್ಯವಿಧಾನಗಳ ಬಗ್ಗೆ ಎಲ್ಲಾ ಕೈಗಾರಿಕಾ ಘಟಕಗಳು ಮಾಹಿತಿ ಹೊಂದಿರಬೇಕು. ಪ್ರಾಥಮಿಕ ಹಂತದಲ್ಲಿ ಸಮುದಾಯದ ಸ್ವಸಹಾಯ ಅಗತ್ಯವಿದ್ದು, ಈ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಅಪಾಯಕಾರಿ ಕಾರ್ಖಾನೆಗಳ ಸುತ್ತಮುತ್ತಲಿನ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ನಡೆಸುವಂತೆ ಅವರು ತಿಳಿಸಿದರು.
ಜಿಲ್ಲೆಯಲ್ಲಿರುವ ಅತಿ ಅಪಾಯಕಾರಿ ಉತ್ಪನ್ನಗಳನ್ನು ತಯಾರಿಸುವ ಕಾರ್ಖಾನೆಗಳು ಆಗಿಂದಾಗೆ ಅಣುಕು ಪ್ರದರ್ಶನಗಳನ್ನು ನಡೆಸಿ ತಮ್ಮ ವಿಪತ್ತು ನಿರ್ವಹಣೆ ಸಾಮಥ್ರ್ಯವನ್ನು ಪರಿಶೀಲಿಸುತ್ತಿರಬೇಕು. ಕಾಲಕಾಲಕ್ಕೆ ತುರ್ತು ಪರಿಸ್ಥಿತಿ ಯೋಜನೆಗಳನ್ನು ಪರಿಷ್ಕರಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಟೋನಿ ಮರಿಯಪ್ಪ, ಕಾರ್ಖಾನೆಗಳ ಉಪನಿರ್ದೇಶಕ ಎಂ.ಎಸ್ ಮಹಾದೇವ್, ಎಂಸಿಎಫ್ ಮುಖ್ಯ ಉತ್ಪಾದನಾಧಿಕಾರಿ ಗಿರೀಶ್, ಜಿಲ್ಲಾ ವಿಪತ್ತು ನಿರ್ವಹಣಾ ಸಮನ್ವಯಾಧಿಕಾರಿ ವಿಜಯ್ ಕುಮಾರ್, ವಿವಿಧ ಕೈಗಾರಿಕಾ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಸಭೆಯ ನಂತರ ಎಂಸಿಎಫ್ ಕಾರ್ಖಾನೆಯಲ್ಲಿ ಅಮೋನಿಯ ಸೋರಿಕೆ ದುರ್ಘಟನೆಯನ್ನು ನಿರ್ವಹಿಸುವ ಬಗ್ಗೆ ಜಿಲ್ಲಾಧಿಕಾರಿ ಅವರ ಉಪಸ್ಥಿತಿಯಲ್ಲಿ ಅಣುಕು ಪ್ರದರ್ಶನ ನಡೆಯಿತು.