
ಡಾ. ಬಿ.ಆರ್. ಅಂಬೇಡ್ಕರ್ 68ನೇ ಮಹಾ ಪರಿನಿರ್ವಾಣ ದಿನ: ಜಿಲ್ಲಾಡಳಿತ ನಮನ
Friday, December 6, 2024
ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ 68ನೇ ಮಹಾ ಪರಿನಿರ್ವಾಣ ದಿನ ಪ್ರಯುಕ್ತ ಜಿಲ್ಲಾಡಳಿತದ ವತಿಯಿಂದ ಗೌರವ ಸಲ್ಲಿಸಲಾಯಿತು.
ನಗರದ ಕುದ್ಮುಲ್ ರಂಗರಾವ್ ಪುರಭವನ ಆವರಣದಲ್ಲಿರುವ ಅಂಬೇಡ್ಕರ್ ಅವರ ಪ್ರತಿಮೆಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ, ಪೊಲೀಸ್ ಕಮೀಷನರ್ ಅನುಪಮ ಅಗ್ರವಾಲ್ ಅವರು ಪುಷ್ಪಾಪರ್ಚನೆ ಮಾಡುವುದರ ಮೂಲಕ ಸಂವಿಧಾನ ಶಿಲ್ಪಿಗೆ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್, ಅಪರ ಜಿಲ್ಲಾಧಿಕಾರಿ ಡಾ.ಜಿ ಸಂತೋಷ್ ಕುಮಾರ್, ಸಮಾಜ ಕಲ್ಯಾಣ ಉಪನಿರ್ದೇಶಕಿ ಹೇಮಲತಾ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ, ಸಹಾಯಕ ನಿರ್ದೇಶಕ ಸುರೇಶ್ ಅಡಿಗ ಮತ್ತಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ನಡೆದ ಮಾನವ ಸರಪಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಸ್ಥಾನ ಬಂದಿದ್ದು, ಸರಕಾರ ನೀಡಿದ ಪ್ರಶಸ್ತಿ ಫಲಕವನ್ನು ಜಿಲ್ಲಾಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಿದರು.