ಇನ್ನೋವಾಗೆ ಲಾರಿ ಢಿಕ್ಕಿ: ಇಬ್ಬರಿಗೆ ಗಾಯ
ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಕ್ಷೀರಸಾಗರ ಪೆಟ್ರೋಲ್ ಬಂಕ್ ಬಳಿ ಮಂಗಳೂರು ಕಡೆಯಿಂದ ಹೊಸಪೇಟೆ ಕಡೆಗೆ ಕಲ್ಲಿದ್ದಲು ಸಾಗಾಟ ಮಾಡುತ್ತಿದ್ದ ಲಾರಿಯೊಂದು ಆದರ ಚಾಲಕನ ನಿರ್ಲಕ್ಷ ಹಾಗೂ ಅತೀ ವೇಗದ ಚಾಲನೆಯಿಂದ ಏಕಾಏಕಿ ಹೆದ್ದಾರಿಯಲ್ಲಿ ನಿಲ್ಲಿಸಿದ್ದು, ಈ ಸಂದರ್ಭ ಅದೇ ದಿಕ್ಕಿನಲ್ಲಿ ಚಲಿಸುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಈ ಸಂದರ್ಭ ಕಾರಿನಲ್ಲಿದ್ದ ಚಾಲಕ ಕೊಕ್ಕರಕಲ್ ನಿವಾಸಿ ರೋಹನ್ (36) ಹಾಗೂ ಪ್ರಯಾಣಿಕ ಅಂಗರಗುಡ್ಡೆ ನಿವಾಸಿ ರಮೇಶ್ ದೇವಾಡಿಗ (35) ಗಾಯಗೊಂಡು ಮುಕ್ಕ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಪಘಾತದ ರಭಸಕ್ಕೆ ಇನ್ನೋವಾ ಕಾರಿನ ಎದುರು ಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರಿನಲ್ಲಿ ಸಿಲುಕಿಕೊಂಡವರನ್ನು ಹೊರಗೆಳೆಯಲು ಸ್ಥಳೀಯರು ಹರಸಾಹಸ ಪಡಬೇಕಾಯಿತು.
ಅಪಘಾತದ ಬಳಿಕ ಸ್ವಲ್ಪ ಹೊತ್ತಿನಲ್ಲಿಕಾರಿನಲ್ಲಿದ್ದ ಪರ್ಸ್ ಹಾಗೂ ಎಟಿಎಂ ಕಾರ್ಡ್ ಅನ್ನು ಯಾರೋ ಕಳ್ಳತನ ಮಾಡಿದ್ದಾರೆ ಎಂದು ಕಾರಿನ ಮಾಲಕ ದೂರಿದ್ದಾರೆ
ಅಪಘಾತದ ಸಂದರ್ಭ ಕೆಲ ಹೊತ್ತು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದ್ದು ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.