ಪೇಜಾವರ ಶ್ರೀ ವಿರುದ್ಧ ಅವಹೇಳನಕಾರಿ ಹೇಳಿಕೆ: ಸಿಎಂ ವಿರುದ್ಧ ಕಾನೂನು ಹೋರಾಟ
ಉಡುಪಿ: ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ವಿರುದ್ದ ಅವಹೇಳನಕಾರಿಯಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ವಿರುದ್ದ ಕಾನೂನು ಹೋರಾಟ ನಡೆಸುವುದಾಗಿ ವಿ.ಹಿಂ.ಪ. ಪ್ರಾಂತ ಕಾರ್ಯಾಧ್ಯಕ್ಷ ಡಾ.ಎಂಬಿ ಪುರಾಣಿಕ್ ಹೇಳಿದರು.
ಶುಕ್ರವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ನ.23ರಂದು ಬೆಂಗಳೂರಿನ ವಿ.ವಿ.ಪುರಂನಲ್ಲಿರುವ ವಾಸವಿ ವಿದ್ಯಾನಿಕೇತನ ಸಭಾಂಗಣದಲ್ಲಿ ನಡೆದ ಸಂತ ಸಮಾವೇಶದಲ್ಲಿ ಪೇಜಾವರ ಶ್ರೀ ಸೇರಿದಂತೆ 50ಕ್ಕೂ ಹೆಚ್ಚು ಸಂತರು ಭಾಗವಹಿಸಿದ್ದರು. ಆ ಸಭೆಯಲ್ಲಿ ಪೇಜಾವರ ಶ್ರೀಗಳು ಆಡಿರುವ ಮಾತನ್ನು ತಿರುಚಿ ಕೆಲವು ಪತ್ರಿಕೆಗಳು ಪ್ರಕಟಿಸಿವೆ. ಆ ಮೂಲಕ ಸಮಾಜ ಸ್ವಾಸ್ಥ್ಯ ಕೆಡಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.
ಅಲ್ಲದೇ ಬೀಮ್ ಆರ್ಮಿ ಏಕತಾ ಮಿಷನ್ ಕರ್ನಾಟಕ ವತಿಯಿಂದ ವಿಜಯಪುರದಲ್ಲಿ ನಡೆದ ಪ್ರತಿಭಟನೆಯಲ್ಲಿ ಮತೀನ್ ಕುಮಾರ್, ಪರಶುರಾಮ್, ಹುಸೇನಪ್ಪ ಛಲವಾದಿ, ಸಂತೋಷ್ ಟಕ್ಕೆ, ಆಶಾ ಹೊಣೇರಿ, ಖಾಯಮ್ ಚೌದ್ರಿ ಅವರು ಪೇಜಾವರ ಮಠದ ಯತಿಗಳ ಬಗ್ಗೆ ತುಚ್ಛವಾಗಿ ಅಶ್ಲೀಲ ಪದಗಳಿಂದ ನಿಂದಿಸಿದ್ದಾರೆ. ಶ್ರೀಗಳ ತೇಜೊವಧೆ ನಡೆಸುತ್ತಿರುವವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಉಡುಪಿ ಜಿಲ್ಲಾ ಎಸ್.ಪಿ.ಯವರಿಗೆ ಮನವಿ ನೀಡಲಾಗಿದೆ. ಪೊಲೀಸ್ ಮಹಾನಿರ್ದೇಶಕರಿಗೂ ದೂರು ನೀಡಲಾಗಿದೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ವಿಹಿಂಪ ಪ್ರಾಂತ ಕಾರ್ಯದರ್ಶಿ ಜಗನ್ನಾಥ ಶಾಸ್ತ್ರಿ, ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್, ಪ್ರಮುಖರಾದ ಪ್ರೇಮಾನಂದ ಶೆಟ್ಟಿ, ಬಸವರಾಜ್, ಪೊಳಲಿ ಗಿರಿಪ್ರಕಾಶ ತಂತ್ರಿ ಉಪಸ್ಥಿತರಿದ್ದರು.