
ಮುಂದಿನ ವರ್ಷದಿಮದ ಅಂತರಾಷ್ಟರೀಯ ಮಟ್ಟದ ಗಾಳಿಪಟ ಸ್ಪರ್ಧೆ: ಸಚಿವ ದಿನೇಶ್ ಗುಂಡುರಾವ್
ಮಂಗಳೂರು: ಈ ವರ್ಷ ಗಾಳಿಪಟ ಉತ್ಸವಕ್ಕೆ ಅಂತರಾಷ್ಟ್ರೀಯ ಮಟ್ಟದಿಂದ ಕೂಡ ಹವ್ಯಾಸಿ ಗಾಳಿಪಟ ಹಾರಿಸುವವರು ಬಂದಿದ್ದು, ಮುಂದಿನ ವರ್ಷದಿಂದ ಗಾಳಿಪಟ ಉತ್ಸವದೊಂದಿಗೆ ಅಂತರಾಷ್ಟ್ರೀಯ ಮಟ್ಟದ ಗಾಳಿಪಟ ಸ್ಪರ್ಧೆಯನ್ನಾಗಿ ಆಯೋಜಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್ ಹೇಳಿದರು.
ಅವರು ಇಂದು ಕರಾವಳಿ ಉತ್ಸವ ಹಿನ್ನೆಲೆಯಲ್ಲಿ ಒಎನ್ಜಿಸಿ-ಎಂಆರ್ಪಿಎಲ್ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ತಣ್ಣೀರುಬಾವಿ ಬೀಚ್ನಲ್ಲಿ ಚಾಲನೆ ನೀಡಿ ಮಾತನಾಡಿದರು.
ಬರುವ ವರ್ಷದಿಂದ ಕ್ಯಾಲೇಂಡರ್ನಲ್ಲಿ ಅಂತರಾಷ್ಟ್ರೀಯ ಮಟ್ಟದ ಗಾಳಿಪಟ ಉತ್ಸವ ಎಂಬುವುದು ಕ್ಯಾಲೇಂಡರ್ನಲ್ಲಿ ಬರುವಂತೆ ವ್ಯವಸ್ಥೆ ಮಾಡಿ ಇನ್ನು ಪ್ರತೀ ವರ್ಷ ಒಂದೇ ದಿನಾಂಕದಂದು ಉತ್ಸವವನ್ನು ಆಯೋಜಿಸುವಂತೆ ವ್ಯವಸ್ಥೆ ಮಾಡಲಾಗುವುದು. ದ.ಕ. ಜಿಲ್ಲೆಯ ಕ್ಯಾಲೆಂಡರ್ನಲ್ಲಿ ಪ್ರತೀ ವರ್ಷ ಕರಾವಳಿ ಉತ್ಸವ, ಬೀಚ್ ಉತ್ಸವ, ಕ್ರೀಡೆ ಈ ರೀತಿಯಲ್ಲಿ ವರ್ಷ ಪೂರ್ತಿಯ ಮಾಹಿತಿಯನ್ನು ನೀಡುವ ನಿಟ್ಟಿನಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
ಜನರ ಮನಸುಗಳನ್ನು ಬೆಸೆಯುವ ಇಂತಹ ಕಾರ್ಯಕ್ರಮ ಮಂಗಳೂರಿನಲ್ಲಿ ಆಯೋಜನೆ ಮಾಡಿರುವುದು ಖುಷಿ ತಂದಿದೆ. ಟೀಮ್ ಮಂಗಳೂರು ನೇತೃತ್ವದಲ್ಲಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ರಾಜ್ಯ ಸರಕಾರ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಈ ಕಾರ್ಯಕ್ರಮ ಆಯೋಜನೆಗೊಂಡಿದೆ. ಈ ಬಾರಿ ದೇಶ ವಿದೇಶದ ಗಾಳಿಪಟ ಪಟುಗಳು ಪಾಲ್ಗೊಳ್ಳುತ್ತಿರುವುದು ಹೆಮ್ಮೆಯ ವಿಚಾರ. ಮುಂದಿನ ದಿನಗಳಲ್ಲಿ ಇದನ್ನು ಸ್ಪರ್ಧೆಯ ರೀತಿಯಲ್ಲಿ ಆಯೋಜನೆ ಮಾಡಲು ಚಿಂತನೆ ಮಾಡಲಾಗಿದೆ. ಇಂತಹ ಕಾರ್ಯಕ್ರಮಗಳಿಂದ ನಮ್ಮ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಗುವುದು ಮಾತ್ರವಲ್ಲದೆ ಮನಸ್ಸಿಗೆ ಉಲ್ಲಾಸ ನೀಡುತ್ತದೆ. ಎರಡು ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮದಲ್ಲಿ ಮಂಗಳೂರಿನ ಜನರು ಪಾಲ್ಗೊಳ್ಳಬೇಕು ಎಂದರು.
ವಿಧಾನ ಪರಿಷತ್ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಮಾತನಾಡಿ, ಗಾಳಿಪಟ ಉತ್ಸವದಿಂದ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಹೆಚ್ಚಿನ ಬೆಂಬಲ ಸಿಗುತ್ತದೆ. ಇಂದು ಮತ್ತು ನಾಳೆ ಸಾವಿರಾರು ಮಂದಿ ಆಸಕ್ತರು, ಪ್ರವಾಸಿಗರು ಇಲ್ಲಿ ನೆರೆಯುತ್ತಾರೆ. ಮಂಗಳೂರಿನಲ್ಲಿ ಇಂತಹ ಕಾರ್ಯಕ್ರಮಗಳು ಆಯೋಜನೆಗೊಳ್ಳಲಿ. ಇದಕ್ಕೆ ಜನಪ್ರತಿನಿಧಿಗಳು ವಿವಿಧ ಇಲಾಖೆಗಳು ಮಾತ್ರವಲ್ಲದೆ ಜನರು ಬೆಂಬಲ ನೀಡಬೇಕು ಎಂದು ಕರೆ ನೀಡಿದರು.
ವೇದಿಕೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಎಂಆರ್ ಪಿಎಲ್ ನಿರ್ದೇಶಕ ನಂದಕುಮಾರ್, ಮೇಯರ್ ಮನೋಜ್ ಕುಮಾರ್, ಮನಪಾ ವಿಪಕ್ಷ ನಾಯಕ ಅನಿಲ್ ಕುಮಾರ್, ಟೀಮ್ ಮಂಗಳೂರಿನ ಸರ್ವೇಶ್ ರಾವ್ ಮತ್ತಿತರರು ಉಪಸ್ಥಿತರಿದ್ದರು.
ಮಂಜುಳಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ದೇಶದಲ್ಲಿಯೇ ಉತ್ತಮ ಬೀಚ್:
ಗಾಳಿಪಟ ಹಾರಿಸಲು ಈ ಪ್ರದೇಶ ಉತ್ತಮ ಸ್ಥಲ ಅವಕಾಶವಿದ್ದು, ಉತ್ತಮ ಗಾಳಿಯೂ ಇದೆ ಆದುದರಿಂದ ಇದು ಒಂದು ಉತ್ತಮ ಸ್ಥಳವಾಗಿದೆ. ಈ ರೀತಿಯ ಸ್ಥಳ ದೇಶದಲ್ಲಿಯೇ ಇಲ್ಲ ಎಂದು ಗ್ರೀಸ್ ಗಾಳಿಪಟ ಹಾರಾಟಗಾರ ಹೇಳಿದ್ದು, ಅವರು ಒಂದು ವಾರಗಳ ಕಾಲ ಇಲ್ಲಿ ಇದ್ದು ಯುವಕರಿಗೆ ತರಬೇತಿ ನೀಡುವುದಾಗಿ ತಿಳಿಸಿದ್ದಾರೆ. ಯುವಜನತೆ ಕಲಿದು ಗಾಳಿಪಟ ಹವ್ಯಾಸಿಗರಾಗಿ ಎಂದು ಸಲಹೆ ನೀಡಿದರು.
ಹಬ್ಬದ ರೀತಿಯಲ್ಲಿ ಆಚರಿಸೋಣ:
ಟೀಂ ಮಂಗಳೂರಿನೊಂದಿಗೆ ರಾಜ್ಯ ಸರ್ಕಾರ, ಜಿಲ್ಲಾಡಳಿತ ಮಂಗಳೂರು ಮಹಾನಗರ ಪಾಲಿಕೆ, ಮೂಡಾ ಯಾವಾಗಲೂ ಇದೆ. ಇದನ್ನು ಕೇಲವ ಟೀಂ ಮಂಗಳೂರಿನವರು ಮಾಡುತ್ತಿಲ್ಲ. ಪ್ರಯೋಜತರನ್ನು ನಾವೇ ಮಾಡಿಕೊಟ್ಟಿದ್ದೇವೆ. ಇದರಲ್ಲಿ ರಾಜಕೀಯ ಮಾಡುವುದುಬೇಡ, ಇದನ್ನು ಹಬ್ಬದ ರೀತಿಯಲ್ಲಿ ಆಚರಿಸೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್ ಹೇಳಿದರು.