
ಫಲ ಪುಷ್ಪ ಪ್ರದರ್ಶನಕ್ಕೆ ಚಾಲನೆ
Thursday, January 23, 2025
ಮಂಗಳೂರು: ತೋಟಗಾರಿಕೆ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿ ಸಂಯುಕ್ತ ಆಶ್ರಯದಲ್ಲಿ ಹಾಗೂ ಸಿರಿ ತೋಟಗಾರಿಕೆ ಸಂಘ ಮಂಗಳೂರು ಹಾಗೂ ಇತರೆ ಅಭಿವೃದ್ಧಿ ಇಲಾಖೆಗಳ ಸಹಭಾಗಿತ್ವದಲ್ಲಿ ನಗರದ ಕದ್ರಿ ಉದ್ಯಾನವನದಲ್ಲಿ ಜ.26ರವರೆಗೆ ಆಯೋಜಿಸಿರುವ ಫಲಪುಷ್ಪ ಪ್ರದರ್ಶನ ಗುರುವಾರ ಆರಂಭಗೊಂಡಿದೆ. ದ.ಕ. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಪ್ರದರ್ಶನಕ್ಕೆ ಚಾಲನೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮೇಯರ್ ಮನೋಜ್ ಕುಮಾರ್ ಕೋಡಿಕಲ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಜಿಲ್ಲಾ?ಕಾರಿ ಮುಲ್ಲೈ ಮುಗಿಲನ್, ಜಿ.ಪಂ. ಸಿಇಒ ಡಾ.ಆನಂದ್ ಕೆ., ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಮಂಜುನಾಥ ಡಿ., ಹಿರಿಯ ಸಹಾಯಕ ನಿರ್ದೇಶಕ ಪ್ರಮೋದ್ ಸಿ.ಎಂ., ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿ ಕಾರ್ಯಕಾರಿ ಸಮಿತಿ ಸದಸ್ಯರಾದ ಗೋಪಾಲಕೃಷ್ಣ ಭಟ್, ಬಿ.ಜೆ. ಗಾಂಭೀರ್, ರಾಮ ಮುಗ್ರೋಡಿ, ಸಿರಿ ತೋಟಗಾರಿಕಾ ಸಂಘದ ಉಪಾಧ್ಯಕ್ಷೆ ಡಾ.ನಿರ್ಮಲಾ ಮೊದಲಾದವರು ಉಪಸ್ಥಿತರಿದ್ದರು.
ಐಫೆಲ್ ಟವರ್..
ಫಲಪುಷ್ಪ ಪ್ರದರ್ಶನದಲ್ಲಿ ಐಫೆಲ್ ಟವರ್ ಆಕರ್ಷಣೆಯ ಕೇಂದ್ರವಾಗಿದೆ. ಸುಮಾರು 2 ಲಕ್ಷ ಹೂವುಗಳಿಂದ ಅಲಂಕರಿಸಿ ಐಫೆಲ್ ಟವರನ್ನು ಸುಮಾರು 22 ಅಡಿ ಎತ್ತರ, 12 ಅಡಿ ಸುತ್ತಳತೆಯಲ್ಲಿ ನಿರ್ಮಿಸಲಾಗಿದೆ. ಇದರ ಜೊತೆಗೆ ಮಕ್ಕಳಿಗೆ ಮನರಂಜನೆ ನೀಡುವಂತಹ ಹೂವುಗಳಿಂದ ಅಲಂಕರಿಸಿದ ಪೋಟೋ ಪ್ರೇಮ್, ಸೆಲಿ ಝೋನ್ ಮಾದರಿ, ಮಶ್ರೂಮ್, ಕೆನನ್ ಬಾಲ್, ಜೇನು ನೊಣ, ಮಿಕಿ ಮೌಸ್ ಗಮನ ಸೆಳೆಯುತ್ತಿದೆ.
ಸಿರಿ ದಾನ್ಯ ಮತ್ತು ಅಲಂಕಾರಿಕಾ ಎಲೆಗಳಿಂದ ಕಂಬಳ ಕೋಣದ ಮಾದರಿ, ಯಕ್ಷಗಾನ ವೇಷಧಾರಿಯ ಕಲಾಕೃತಿ, ಮೀನುಗಾರರ ಮತ್ತು ಕಂಬಳ ಓಟಗಾರನ ಕಲಾಕೃತಿ ಸುಂದರವಾಗಿ ಮೂಡಿ ಬಂದಿದೆ. ಸುಮಾರು 20,000ಕ್ಕಿಂತಲೂ ಅಧಿಕ ಮೂವತ್ತಕ್ಕೂ ಹೆಚ್ಚು ವಿವಿಧ ಜತಿಯ ಪುಷ್ಪಗಳ ಜೋಡಣೆ, ತರಕಾರಿ ಕೈ ತೋಟ ಪ್ರಾತ್ಯಕ್ಷಿಕೆಗಳು ಇಲ್ಲಿವೆ.