ಕ್ರೀಡೆಯಿಂದ ಸಾಮರಸ್ಯದ ಬದುಕು: ಡಾ. ಎಂ. ಮೋಹನ್ ಆಳ್ವ

ಕ್ರೀಡೆಯಿಂದ ಸಾಮರಸ್ಯದ ಬದುಕು: ಡಾ. ಎಂ. ಮೋಹನ್ ಆಳ್ವ


ಮೂಡುಬಿದಿರೆ: ವಿದ್ಯಾರ್ಥಿಗಳು ಪಠ್ಯದಷ್ಟೇ ಆಸಕ್ತಿ ಪಠ್ಯೇತರ ಚಟುವಟಿಕೆಯಲ್ಲಿ ವಹಿಸಬೇಕು. ಅದರಲ್ಲೂ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕವಾಗಿ ಮಾತ್ರವಲ್ಲದೆ ಅವರ ಮಾನಸಿಕ ವಿಕಸನಕ್ಕೂ ಪೂರಕವಾಗಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಸ್ಕೌಟ್ಸ್ ಮತ್ತು ಗೈಡ್‌ನ ದ.ಕ.ಜಿಲ್ಲಾ ಮುಖ್ಯ ಆಯುಕ್ತ ಡಾ. ಎಂ. ಮೋಹನ್ ಆಳ್ವ ನುಡಿದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಭಾಗಿತ್ವದಲ್ಲಿ ಸ್ಕೌಟ್ಸ್ ಮತ್ತು ಗೈಡ್ ವಿದ್ಯಾರ್ಥಿಗಳಿಗಾಗಿ ಸ್ವರಾಜ್ ಮೈದಾನದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಕ್ರೀಡೋತ್ಸವ-2024ನ್ನು ಉದ್ಘಾಟಿಸಿ ಮಾತನಾಡಿದರು.

ಕ್ರೀಡೆಯು ವಿದ್ಯಾರ್ಥಿಗಳಲ್ಲಿ ಶಿಸ್ತು, ಸೌಹಾರ್ದ, ಸಾಮರಸ್ಯದ ಬದುಕನ್ನು ಕಲಿಸುವುದರ ಜೊತೆಗೆ ಹೋರಾಟ ಮನೋಭಾವವನ್ನು ಮೈಗೂಡಿಸಿಕೊಳ್ಳಲು ಸಹಕರಿಸುತ್ತದೆ. ಇದೇ ಮೊದಲ ಬಾರಿಗೆ ಇಂತಹ ಕ್ರೀಡಾ ಕೂಟ ಆಯೋಜನೆ ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ ಏರ್ಪಡಿಸುವ ಉದ್ದೇಶವಿದೆ ಎಂದು ಆಶಯ ವ್ಯಕ್ತಪಡಿಸಿದರು.

ಜಿಲ್ಲಾ ಸ್ಕೌಟ್ಸ್ ಆಯುಕ್ತ ಬಿ ಮೊಹಮ್ಮದ್ ತುಂಬೆ, ಜಿಲ್ಲಾ ಕಾರ್ಯದರ್ಶಿ ಪ್ರತಿಮ್ ಕುಮಾರ್, ಜಿಲ್ಲಾ ಕೋಶಾಧಿಕಾರಿ ನವೀನ್‌ಚಂದ್ರ ಅಂಬೂರಿ, ಜಿಲ್ಲಾ ಜಂಟಿ ಕಾರ್ಯದರ್ಶಿ ಜಯವಂತಿ ಸೋನ್ಸ್, ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್‌ರಾಜ್ ಕೆ., ಸ್ಥಳೀಯ ಸಂಸ್ಥೆಗಳ ಕಾರ್ಯದರ್ಶಿ ಭಾರತಿ ನಾಯಕ್ ಇದ್ದರು.

ಮೊದಲ ಬಾರಿಗೆ ನಡೆದ ಈ ಕ್ರೀಡಾ ಕೂಟದಲ್ಲಿ ಒಂದರಿಂದ ನಾಲ್ಕನೇ ತರಗತಿಯ ಕಬ್ಸ್ ಮತ್ತು ಬುಲ್‌ಬುಲ್‌ನ 124 ವಿದ್ಯಾರ್ಥಿಗಳು ಐದನೇ ತರಗತಿಯಿಂದ ಹತ್ತನೇ ತರಗತಿಯ ಸ್ಕೌಟ್ಸ್ ಮತ್ತು ಗೈಡ್ಸ್ನ 1755 ವಿದ್ಯಾರ್ಥಿಗಳು, ಪದವಿ-ಪೂರ್ವ, ಪದವಿ, ಸ್ನಾತಕೋತ್ತರ ಹಾಗೂ ತಾಂತ್ರಿಕ  ಕಾಲೇಜಿನ ರೋರ‍್ಸ್ ಮತ್ತು ರೋರ‍್ಸ್ನ 402 ವಿದ್ಯಾರ್ಥಿಗಳು ಒಟ್ಟು  2281 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಐದು ವೈಯಕ್ತಿಕ ಏಳು ಗುಂಪು ಕ್ರೀಡೆಗಳು ಜರುಗಿದವು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article