
ರಸ್ತೆ ಅಭಿವೃದ್ಧಿಗೆ ಸಂಸದರಿಂದ ಶಿಲಾನ್ಯಾಸ
ಬೆಳ್ತಂಗಡಿ: ಕೇಂದ್ರ ರಸ್ತೆ ಹಾಗೂ ಮೂಲ ಸೌಕರ್ಯ ನಿಧಿಯಡಿಯಲ್ಲಿ 6 ಕೋಟಿ ರೂ. ಅನುದಾನದಲ್ಲಿ ಅಭಿವೃದ್ಧಿಗೊಳ್ಳಲಿರುವ ಗುರುವಾಯನಕೆರೆ ಉಪ್ಪಿನಂಗಡಿ ರಸ್ತೆ ಅಭಿವೃದ್ಧಿ ಕಾಮಗಾರಿಯ ಶಿಲಾನ್ಯಾಸವನ್ನು ಇಂದು ದ.ಕ. ಜಿಲ್ಲೆಯ ಸಂಸದ ಬ್ರಿಜೇಶ್ ಚೌಟ ಅವರು ಗುರುವಾಯನಕೆರೆಯಲ್ಲಿ ನೆರವೇರಿಸಿದರು.
ಬಳಿಕ ಅವರು ಮಾತನಾಡಿ, ಕೇಂದ್ರ ಸರಕಾರದ ಕೇಂದ್ರ ರಸ್ತೆ ಹಾಗೂ ಮೂಲ ಸೌಕರ್ಯ ನಿಧಿ (ಸಿಆರ್ಐಎಫ್)ನಿಂದ ಬಿಡುಗಡೆಯಾದ 6 ಕೋಟಿ ರೂ. ಅನುದಾನದಲ್ಲಿ ರಸ್ತೆ ಅಭಿವೃದ್ಧಿಯಾಗಲಿದೆ ಎಂದು ಸಂಸದರು ತಿಳಿಸಿದರು.
ಶಾಸಕ ಹರೀಶ್ ಪೂಂಜ ಮಾತನಾಡಿ, ಮೊದಲ ಹಂತದಲ್ಲಿ ಗುರವಾಯನಕೆರೆಯಿಂದ ಪಿಲಿಗೂಡಿನವೆರೆಗೆ ರಸ್ತೆ ಮರುಡಾಮಾರೀಕರಣಗೊಳ್ಳಲಿದ್ದು, ಆದರೆ ಅದರಾಚೆ ರಸ್ತೆ ಮತ್ತಷ್ಟು ಹದಗೆಟ್ಟಿದೆ. ಆ ರಸ್ತೆ ಅಭಿವೃದ್ಧಿಗೆ ಅನುದಾನ ನೀಡಬೇಕು ಎಂದು ಲೊಕೋಪಯೋಗಿ ಸಚಿವರಿಗೆ ಮನವಿ ಮಾಡಿದ್ದೇನೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಮೇಲೆ ಅಭಿವೃದ್ಧಿ ಮರಿಚಿಕೆ ಆಗಿದೆ. ಈ ಮಧ್ಯೆ ಕೇಂದ್ರ ಸರಕಾರದ ಈ ಅನುದಾನವನ್ನು ಅನುಷ್ಠಾನಗೊಳಿಸಲು ಸಹಕರಿಸಿದ ಸಂಸದ ಬ್ರಿಜೇಶ್ ಚೌಟ ಅವರಿಗೆ ಧನ್ಯವಾದ ಎಂದು ತಿಳಿಸಿದರು.
ಉದ್ಯಮಿಗಳಾದ ಶಶಿಧರ್ ಶೆಟ್ಟಿ ನವಶಕ್ತಿ ಬರೋಡ, ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ, ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್. ಶೆಟ್ಟಿ, ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶಕ್ತಿನಗರ, ಸೇರಿದಂತೆ ಪಕ್ಷದ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.