
ಫೆ.24 ರಂದು ‘ಸಹಕಾರ ರತ್ನ’ ಡಾ. ಎಂ.ಎನ್. ರಾಜೇಂದ್ರ ಕುಮಾರ್ 76ನೇ ಹುಟ್ಟುಹಬ್ಬದ ಸಂಭ್ರಮ: ಅರ್ಹ ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆ
ಮಂಗಳೂರು: ‘ಸಹಕಾರಿ ಕ್ಷೇತ್ರದ ಬಲವರ್ಧನೆಗೆ ತನ್ನದೇ ಆದ ಪ್ರಾಮಾಣಿಕ ಸೇವೆಯನ್ನು ಸಲ್ಲಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದೆ. ಬ್ಯಾಂಕಿನ ಬೆಳವಣಿಗೆಯಲ್ಲಿ ಪ್ರಾಮಾಣಿಕ ರೀತಿಯ ಸಾರ್ಥಕತೆಯನ್ನು ಕಂಡ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಎಲ್ಲರ ಪ್ರೀತಿ ವಿಶ್ವಾಸವನ್ನು ಗಳಿಸಿದವರು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮಾದರಿ ಸಹಕಾರಿ ನಾಯಕರಾಗಿ ರಾಜ್ಯ, ರಾಷ್ಟ್ರಮಟ್ಟದಲ್ಲೂ ಗುರುತಿಸಿಕೊಂಡಿರುವ ’ಸಹಕಾರ ರತ್ನ’ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ 76ನೇ ಹುಟ್ಟುಹಬ್ಬದ ಸಂಭ್ರಮಾಚರಣೆಯನ್ನು ನಡೆಸಲು ಅವಿಭಜಿತ ಜಿಲ್ಲೆಯ ಸಮಸ್ತ ಸಹಕಾರಿಗಳು ಮುಂದಾಗಿದ್ದಾರೆ.
ಫೆ. 24ರಂದು ರಾಜೇಂದ್ರ ಕುಮಾರ್ ಅವರ ಹುಟ್ಟುಹಬ್ಬದ ದಿನ. ಅದೇ ದಿನ ಪೂರ್ವಾಹ್ನ 10.30 ಗಂಟೆಗೆ ಎಸ್ ಸಿಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ರಾಜೇಂದ್ರ ಕುಮಾರ್ ಅವರ ೭೬ನೇ ಹುಟ್ಟುಹಬ್ಬದ ಸಂಭ್ರಮದ ಜೊತೆಗೆ ಅಭಿವಂದನಾ ಕಾರ್ಯಕ್ರಮ ಹಾಗೂ ಅರ್ಹ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಸಮಾರಂಭ ನಡೆಯಲಿದೆ“ ಎಂದು ಅಭಿನಂದನಾ ಸಮಿತಿಯ ಅಧ್ಯಕ್ಷ ಐಕಳ ಬಾವ ದೇವಿಪ್ರಸಾದ್ ಶೆಟ್ಟಿ ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
’ಸಹಕಾರ ಕ್ಷೇತ್ರವನ್ನು ಸದೃಢಗೊಳಿಸುವ ಚಿಂತನೆಯೊಂದಿಗೆ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಕ್ರಾಂತಿಯನ್ನು ಸೃಷ್ಟಿಸಿರುವ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಸಹಕಾರಿಗಳೆಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆ. ಸಹಕಾರ ಕ್ಷೇತ್ರದ ಬೆಳವಣಿಗೆಗೆ ವಿಶೇಷ ಕಾರ್ಯಯೋಜನೆಯನ್ನು ಆಯೋಜಿಸಿ, ನಮಗೆಲ್ಲರಿಗೂ ಮಾರ್ಗದರ್ಶಕರಾದ ರಾಜೇಂದ್ರ ಕುಮಾರ್ ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ 76 ಮಂದಿ ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಿಸುವ ಕಾರ್ಯಕ್ರಮವು ಈ ಸಂದರ್ಭದಲ್ಲಿ ಆಯೋಜನೆಯಾಗಿದೆ. ಸಹಕಾರ ಕ್ಷೇತ್ರವು ಸರ್ವಧರ್ಮೀಯರ ಕ್ಷೇತ್ರವಾಗಿರುವುದರಿಂದ ಸಮಾಜದ ಎಲ್ಲಾ ವರ್ಗದ ಫಲಾನುಭವಿಗಳನ್ನು ಗುರುತಿಸಿ, ಸವಲತ್ತುಗಳನ್ನು ಈ ಕಾರ್ಯಕ್ರಮದಲ್ಲಿ ವಿತರಿಸಲಾಗುವುದು“ ಎಂದರು.
ಅಂದಿನ ಕಾರ್ಯಕ್ರಮವು ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರಿಂದ ಉದ್ಘಾಟನೆಗೊಳ್ಳಲಿದೆ. ಸಮಸ್ತ ಸಹಕಾರಿಗಳ ಪರವಾಗಿ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಅಭಿವಂದನೆಯನ್ನು ಸ್ವೀಕರಿಸಲಿದ್ದು, ನಿಟ್ಟೆ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಎನ್. ವಿನಯ್ ಹೆಗ್ಡೆ ಅವರು ರಾಜೇಂದ್ರ ಕುಮಾರ್ ಅವರನ್ನು ಅಭಿವಂದಿಸಲಿರುವರು. ಉಡುಪಿ ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಇವರು ಅಭಿವಂದನಾ ಭಾಷಣ ಮಾಡಲಿರುವರು.
76 ಮಂದಿ ಅರ್ಹ ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆಯನ್ನು ಸಂಸದ ಕ್ಯಾ.ಬ್ರಿಜೇಶ್ ಚೌಟ ನೆರವೇರಿಸಲಿದ್ದು, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸುವರು ಎಂದರು.
ಅಭಿನಂದನಾ ಸಮಿತಿಯ ಶಶಿಕುಮಾರ್ ರೈ ಬೊಳ್ಯೊಟ್ಟು, ವಿನಯ್ ಕುಮಾರ್ ಸೂರಿಂಜೆ, ಜಯಕರ ಶೆಟ್ಟಿ ಇಂದ್ರಾಳಿ, ಭಾಸ್ಕರ್ ಎಸ್. ಕೋಟ್ಯಾನ್, ಜಯರಾಜ್ ರೈ, ಗೋಪಿನಾಥ ಭಟ್ ಉಪಸ್ಥಿತರಿದ್ದರು.