
ದೆಹಲಿಯಲ್ಲಿ ಬಿಜೆಪಿ ಗೆಲುವು: ದ.ಕ. ಬಿಜೆಪಿ ವತಿಯಿಂದ ವಿಜಯೋತ್ಸವ
ಮಂಗಳೂರು: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಗಳಿಸಿದ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾ ಬಿಜೆಪಿ ವತಿಯಿಂದ ಶನಿವಾರ ನಗರದ ಜಿಲ್ಲಾ ಬಿಜೆಪಿ ಕಚೇರಿ ಎದುರು ವಿಜಯೋತ್ಸವ ಆಚರಿಸಲಾಯಿತು.
ಈ ಸಂದರ್ಭ ಮಾತನಾಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತದಾರರು ಭೃಷ್ಟಾಚಾರದ ವಿರುದ್ಧ ತೀರ್ಪು ನೀಡಿದ್ದಾರೆ. ಸ್ವಚ್ಛ ಆಡಳಿತದ ಭರವಸೆ ನೀಡಿ ಅಧಿಕಾರಕ್ಕೆ ಬಂದಿದ್ದ ಆಪ್ ಸರ್ಕಾರ, ಸ್ವಜನ ಪಕ್ಷಪಾತ, ಸರ್ವಾಧಿಕಾರ, ಅಬಕಾರಿ ಹಗರಣಗಳಿಂದ ಜನತೆ ರೋಸಿ ಹೋಗುವಂತೆ ಆಡಳಿತ ನಡೆಸಿತ್ತು. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಜೈಲು ಪಾಲಾಗಿರುವುದು ಅದರ ಭೃಷ್ಟತೆಯ ಪ್ರಮಾಣವನ್ನು ತೋರಿಸಿದೆ ಎಂದರು.
27 ವರ್ಷಗಳ ಬಳಿಕ ಬಿಜೆಪಿ ಮರಳಿ ಅಧಿಕಾರದ ಗದ್ದುಗೆ ಏರಿದೆ. ಮತದಾರ ಕೇಂದ್ರ ಸರ್ಕಾರದ ನರೇಂದ್ರ ಮೋದಿಯವರ ಸ್ವಚ್ಛ ಜನಪರ, ಅಭಿವೃದ್ಧಿ ಪರ ಆಡಳಿತಕ್ಕೆ ಜೈ ಎಂದಿದ್ದಾರೆ. ದೆಹಲಿ ಅಭಿವೃದ್ಧಿಗೆ ಡಬಲ್ ಎಂಜಿನ್ ಸರ್ಕಾರದ ಅವಶ್ಯಕತೆಯನ್ನು ಜನರು ಮನಗಂಡಿದ್ದಾರೆ ಎಂದವರು ಸಂತಸ ವ್ಯಕ್ತಪಡಿಸಿದರು.
ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ಉತ್ತರ ಶಾಸಕ ಡಾ.ಭರತ್ ಶೆಟ್ಟಿ, ಮೇಯರ್ ಮನೋಜ್ ಕುಮಾರ್, ಮುಖಂಡರಾದ ಪ್ರೇಮಾನಂದ ಶೆಟ್ಟಿ, ಸುಧೀರ್ ಶೆಟ್ಟಿ ಕಣ್ಣೂರು, ರಮೇಶ್ ಕಂಡೆಟ್ಟು, ರವಿಶಂಕರ್ ಮಿಜಾರ್, ಜಗದೀಶ್ ಶೇಣವ ಮತ್ತಿತರರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸೇರಿದ್ದ ಕಾರ್ಯಕರ್ತರು, ಪದಾಧಿಕಾರಿಗಳು ಪಟಾಕಿ ಸಿಡಿಸಿ, ಘೋಷಣೆ ಕೂಗಿ, ಸಿಹಿ ಹಂಚಿ ಸಂಭ್ರಮಿಸಿದರು.